ರೈತರಿಗೆ ಗುಡ್​ನ್ಯೂಸ್: 1ನೇ ಕಂತಿನ ಬೆಳೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

crop compensation : ಕರ್ನಾಟಕದಲ್ಲಿ ಮಳೆ ಬೆಳೆ ಇಲ್ಲದೇ ಬರ ಆವರಿಸಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಈಗಾಗಲೇ ಕರ್ನಾಟಕ ಸರ್ಕಾರ ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಿದೆ. ಇದರ ಬೆನ್ನಲ್ಲೇ ಇದೀಗ ರೈತರಿಗೆ 1ನೇ ಕಂತಿ ಬೆಳೆ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಖುದ್ದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ರೈತರಿಗೆ ಗುಡ್​ನ್ಯೂಸ್: 1ನೇ ಕಂತಿನ ಬೆಳೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

Updated on: Dec 01, 2023 | 7:36 AM

ಬೆಂಗಳೂರು, (ಡಿಸೆಂಬರ್ 01): ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬರುವವರೆಗೂ ಕಾಯುವುದಿಲ್ಲ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು 1ನೇ ಕಂತಿನಲ್ಲಿ 2 ಸಾವಿರ ರೂ.ವರೆಗೂ ಬೆಳೆ ಪರಿಹಾರ (crop compensation )ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಗುರುವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ 2 ಸಾವಿರ ರೂ.ವರೆಗೂ ಪರಿಹಾರ ನೀಡಲಾಗುವುದು ಎಂದು ಹೇಳಿದರು.

ಕೇಂದ್ರಕ್ಕೆ ಬರೆದ ಪತ್ರಗಳಿಗೂ ಪ್ರತಿಕ್ರಿಯೆ ಇಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಕೇಂದ್ರದಿಂದ ಸಿಕ್ಕಿಲ್ಲ. ಇನ್ನು ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನ ಉದ್ಯೋಗ ಕೊಡಲು ಅನುಮತಿ ಕೋರಲಾಗಿತ್ತು. ಕೇಂದ್ರ ಇನ್ನೂ ಅನುಮತಿ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ

ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಿದ್ದೇವೆ‌ . 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. 18171.44 ಕೋಟಿ ರೂ. ಪರಿಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ವಾಪಾಸ್ ಕೊಟ್ಟರೂ ಸಾಕು. 21-9-2023 ರಂದು ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು. ಕೇಂದ್ರದ ತಂಡ 4/10 ರಿಂದ 9/10 ರ ವರೆಗೆ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿ ನೀಡಿದೆ. ನಾವೆಲ್ಲಾ ಕೇಂದ್ರ ತಂಡವನ್ನು ಭೇಟಿ ಮಾಡಿ ಚರ್ಚಿಸಿ ಬರದ ಸ್ಥಿತಿ ವಿವರಿಸಿದ್ದೇವೆ .ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲದ ಸ್ಥಿತಿ ಇದೆ. 4663 ಕೋಟಿ ರೂ. ಬೆಳೆ ನಷ್ಟ ಪರಿಹಾರ ಕೇಂದ್ರಕ್ಕೆ ಕೇಳಿದ್ದೆವು. ಆದ್ರೆ, ಇವತ್ತಿನವರೆಗೂ ಕೇಂದ್ರ ಸಭೆಯನ್ನೇ ನಡೆಸಿಲ್ಲ. ಸಮಯ ಕೇಳಿದರೂ ಭೇಟಿಗೆ ಅವಕಾಶ ಕೊಟ್ಟಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ವಿಮೆಗೆ 460 ಕೋಟಿ ರೂ. ಬಿಡುಗಡೆ

ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮೆ ಪರಿಹಾರಕ್ಕೆ ರಾಜ್ಯ ಸರ್ಕಾರ ಈಗಾಗಲೇ 6.5 ಲಕ್ಷ ರೈತರಿಗೆ 460 ಕೋಟಿ ರೂ, ಹಣವನ್ನು ನಮ್ಮ ಸರ್ಕಾರ ಬಿಡುಗಡೆ ಮಾಡಿದೆ. ಕುಡಿಯುವ ನೀರು , ಮೇವಿಗೆ 327 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, 780 ಕೋಟಿ ರೂಪಾಯಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿದೆ. ಅವರೂ ತಹಶೀಲ್ದಾರ್ ಗಳಿಗೆ ಬಿಡುಗಡೆ ಮಾಡಿದ್ದಾರೆ. ಯಾವ ತಾಲ್ಲೂಕುಗಳಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಇಲ್ಲದಂತೆ ನಿರ್ವಹಿಸಿದ್ದೇವೆ. ಹಲವು ತಾಲ್ಲೂಕುಗಳ 60 ಹಳ್ಳಿಗಳಲ್ಲಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಿದ್ದೇವೆ. ಹೊರ ರಾಜ್ಯಕ್ಕೆ ಮೇವು ಹೋಗದಂತೆ ತಡೆದಿದ್ದೇವೆ. ಮೇವಿನ‌ ಬೀಜ ವಿತರಣೆ ಮಾಡಿದ್ದೇವೆ ಎಂದು ವಿವರಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us