ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಚಕ್ರವರ್ತಿ ಸೂಲಿಬೆಲೆ ಮೇಲಿನ ಎಫ್​ಐಆರ್​ಗೆ ಹೈಕೋರ್ಟ್ ತಡೆ

ಅಕ್ಟೋಬರ್ 3 ರಂದು ಕಾರವಾರದ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಚಕ್ರವರ್ತಿ ಸೂಲಿಬೆಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಅದಕ್ಕಾಗಿ ಕಾರವಾರ ಗ್ರಾಮಾಂತರ ಪೊಲೀಸರು ಸೂಲಿಬೆಲೆ ವಿರುದ್ಧ ಅಕ್ಟೋಬರ್ 5 ರಂದು ಎಫ್‌ಐಆರ್ ದಾಖಲಿಸಿದ್ದರು. ಈ ವಿಚಾರವಾಗಿ ಸೂಲಿಬೆಲೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಚಕ್ರವರ್ತಿ ಸೂಲಿಬೆಲೆ ಮೇಲಿನ ಎಫ್​ಐಆರ್​ಗೆ ಹೈಕೋರ್ಟ್ ತಡೆ
ಚಕ್ರವರ್ತಿ ಸೂಲಿಬೆಲೆ

Updated on: Nov 16, 2023 | 6:20 PM

ಬೆಂಗಳೂರು, ನವೆಂಬರ್ 16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಮತ್ತು ಸಮುದಾಯಗಳ ನಡುವೆ ದ್ವೇಷ ಹರಡಿದ ಆರೋಪದ ಮೇಲೆ ಯುವಾ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ (Karnataka High Court) ಗುರುವಾರ ತಡೆಯಾಜ್ಞೆ ನೀಡಿದೆ. ಸೂಲಿಬೆಲೆ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ಧಾರವಾಡ ಪೀಠದ ನ್ಯಾಯಮೂರ್ತಿ ಶಿವಶಂಕರ ಅಮರಣ್ಣನವರ್ ಅವರು, ಎಫ್​ಐಆರ್​ಗೆ ತಡೆ ನೀಡಿ ವಿಚಾರಣೆಯನ್ನು ಮುಂದೂಡಿದರು.

ಅಕ್ಟೋಬರ್ 3 ರಂದು ಕಾರವಾರದ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಚಕ್ರವರ್ತಿ ಸೂಲಿಬೆಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಅದಕ್ಕಾಗಿ ಕಾರವಾರ ಗ್ರಾಮಾಂತರ ಪೊಲೀಸರು ಸೂಲಿಬೆಲೆ ವಿರುದ್ಧ ಅಕ್ಟೋಬರ್ 5 ರಂದು ಎಫ್‌ಐಆರ್ ದಾಖಲಿಸಿದ್ದರು. ಈ ವಿಚಾರವಾಗಿ ಸೂಲಿಬೆಲೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆಯನ್ನು ಧಾರವಾಡ ಪೀಠ ಮುಂದೂಡಿದೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದೂಗಳು ತೊಂದರೆ ಎದುರಿಸುತ್ತಿದ್ದಾರೆ ಮತ್ತು ಅವರು ಮುಸ್ಲಿಮರನ್ನು ಬೆಂಬಲಿಸುವವರೆಗೂ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂದು ಚಕ್ರವರ್ತಿ ಸೂಲಿಬೆಲೆ ಆರೋಪಿಸಿದ್ದರು. ಇದು ಕಾಂಗ್ರೆಸ್​​​ನವರನ್ನು ಕೆರಳಿಸಿತ್ತು.

ಹಿಂದೂಗಳು ಮತ್ತು ಮುಸ್ಲಿಮರ ನಡುವೆ ದ್ವೇಷವನ್ನು ಹುಟ್ಟುಹಾಕಲು ಪ್ರಯತ್ನಿಸುವ ಹಲವಾರು ಇತರ ಹೇಳಿಕೆಗಳನ್ನು ಅವರು ನೀಡಿದ್ದಾರೆ ಎಂದು ಎಫ್ಐಆರ್​​ನಲ್ಲಿ ಉಲ್ಲೇಖಿಸಲಾಗಿತ್ತು. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 505 (2) (ವರ್ಗಗಳ ನಡುವೆ ದ್ವೇಷ, ಶತ್ರುತ್ವ ಅಥವಾ ಅಸಹನೆ ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು) ಅಡಿಯಲ್ಲಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ: ಚಕ್ರವರ್ತಿ ಸೂಲೆಬೆಲೆ ವಿರುದ್ಧ ಮತ್ತೊಂದು ದೂರು ದಾಖಲು: ಏನಿದು ಪ್ರಕರಣ?

ಚಕ್ರವರ್ತಿ ಸೂಲೆಬೆಲೆ ಇತ್ತೀಚಿಗೆ ಜಣಗಣಮನ ಅಭಿಯಾನ ಹಿನ್ನೆಲೆ ಕಾರವಾರದ ಕಡವಾಡಕ್ಕೆ ತೆರಳಿದ್ದರು. ಈ ವೇಳೆ ಕಾರವಾರ ತಾಲೂಕಿನ ಕಡವಾಡದ ಬೋವಿವಾಡದಲ್ಲಿರುವ ಶ್ರೀ ಆದಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಹೀಗಾಗಿ ಸೂಲೆಬೆಲೆ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us