Karnataka High Court: ಸಾರ್ವಜನಿಕ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲೇಬೇಕು; ಕರ್ನಾಟಕ ಹೈಕೋರ್ಟ್​​ ತಾಕೀತು

ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾಗಿದ್ದರೂ ಕಾಮಗಾರಿ ಬಿಲ್‌ ಮಂಜೂರು ಮಾಡಿರುವ ಪೊಲೀಸ್ ವಸತಿ ಮಂಡಳಿ ಇಂಜಿನಿಯರ್ಸ್‌ ಕಾರ್ಯಕ್ಕೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ.

Karnataka High Court: ಸಾರ್ವಜನಿಕ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲೇಬೇಕು; ಕರ್ನಾಟಕ ಹೈಕೋರ್ಟ್​​ ತಾಕೀತು
ಕರ್ನಾಟಕ ಹೈಕೋರ್ಟ್

Updated on: Jun 07, 2023 | 8:47 PM

ಬೆಂಗಳೂರು: ಸಾರ್ವಜನಿಕ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲೇಬೇಕು. ಕಾಮಗಾರಿ ಕಳಪೆಯಾಗಿರದಂತೆ ನೋಡಿಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಸರ್ಕಾರಕ್ಕೆ ಬುಧವಾರ ತಾಕೀತು ಮಾಡಿದೆ. ಕಳಪೆ ಗುಣಮಟ್ಟದ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಆರೋಪಕ್ಕೆ ಸಂಬಂಧಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನರಿದ್ದ ಹೈಕೋರ್ಟ್ ಪೀಠ, ಪೊಲೀಸ್ ವಸತಿ ಮಂಡಳಿ ಇಂಜಿನಿಯರ್ಸ್‌ ಕಾರ್ಯಕ್ಕೆ ಅಚ್ಚರಿ ವ್ಯಕ್ತಪಡಿಸಿದ್ದು, ತಪ್ಪಿತಸ್ಥ ಇಂಜಿನಿಯರ್‌ಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದೆ.

ಮಂಡ್ಯ, ಚಾಮರಾಜನಗರದಲ್ಲಿ ಕಳಪೆ ಗುಣಮಟ್ಟದ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಗುತ್ತಿಗೆದಾರರ ಭದ್ರತಾ ಠೇವಣಿ ಹಿಂದಿರುಗಿಸಲು ನಿರ್ದೇಶನ ನೀಡುವಂತೆ ಕೋರಿ ಪಿಜಿ ಸೆಟ್ಟಿ ಕನ್‌ಸ್ಟ್ರಕ್ಷನ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಹೈಕೋರ್ಟ್ ಪೀಠ ವಜಾಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾಗಿದ್ದರೂ ಕಾಮಗಾರಿ ಬಿಲ್‌ ಮಂಜೂರು ಮಾಡಿರುವ ಪೊಲೀಸ್ ವಸತಿ ಮಂಡಳಿ ಇಂಜಿನಿಯರ್ಸ್‌ ಕಾರ್ಯಕ್ಕೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ಇದು ಸರ್ಕಾರಿ ಯೋಜನೆಯಾಗಿದ್ದು ಸಾರ್ವಜನಿಕರ ಹಣ ಬಳಕೆಯಾಗಿದೆ. ಕಾಮಗಾರಿ ಯೋಜನೆಗಳು ಕಳಪೆಯಾಗಿದ್ದಲ್ಲಿ ಸಹಿಸಲಾಗುವುದಿಲ್ಲ. ಗುಣಮಟ್ಟ ಕಾಯ್ದು ಕೊಳ್ಳುವಂತೆ ಸರ್ಕಾರ ನೋಡಿಕೊಳ್ಳಬೇಕು. ಕಳಪೆ‌ ಕಾಮಗಾರಿಗೆ ಸಂಬಂಧಿಸಿದ ಫೋಟೋ ಪರಿಶೀಲನೆ ಮಾಡಲಾಗಿದೆ. ಒಂದು ಫೋಟೋ ಸಾವಿರ ಪದಗಳಿಗೆ ಸಮ. ಕಟ್ಟಡದಲ್ಲಿ ನೀರು ನಿಂತಿರುವುದು, ಗೋಡೆಗಳು ಬಿರುಕು ಬಿಟ್ಟಿರುವುದು, ಸೋಲಾರ್ ಪ್ಯಾನಲ್‌ಗಳಲ್ಲಿ ನೀರು ಸೋರಿಕೆ ಆಗುತ್ತಿರುವುದು, ಬಾಗಿಲುಗಳಿಗೆ ಕಳಪೆ ಗುಣಮಟ್ಟದ ಮರ ಬಳಕೆ ಕಂಡುಬರುತ್ತಿದೆ ಎಂದು ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್​ ಕೇಸ್​ ರದ್ದುಪಡಿಸಿದ ಹೈಕೋರ್ಟ್

ಇಂಥ ಕಳಪೆ ಕಾಮಗಾರಿಗಳನ್ನು ಸಹಿಸಲಾಗದು. ತಪ್ಪಿತಸ್ಥ ಇಂಜಿನಿಯರ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಪೀಠ ಸರ್ಕಾರಕ್ಕೆ ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us