ಬೇಜವಾಬ್ದಾರಿ ಸಹಿಸಲ್ಲ, ಐಪಿಎಸ್ ರೂಪಾ, ಐಎಎಸ್​ ರೋಹಿಣಿ ಸಿಂಧೂರಿಗೆ ನೋಟಿಸ್ ನೀಡಿ; ಸಿಎಂ ಬೊಮ್ಮಾಯಿ ಖಡಕ್ ಸೂಚನೆ

ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುವುದನ್ನು ಸಹಿಸುವುದಿಲ್ಲ ಎಂದಿರುವ ಬೊಮ್ಮಾಯಿ, ಇಬ್ಬರಿಗೂ ನೋಟಿಸ್ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಬೇಜವಾಬ್ದಾರಿ ಸಹಿಸಲ್ಲ, ಐಪಿಎಸ್ ರೂಪಾ, ಐಎಎಸ್​ ರೋಹಿಣಿ ಸಿಂಧೂರಿಗೆ ನೋಟಿಸ್ ನೀಡಿ; ಸಿಎಂ ಬೊಮ್ಮಾಯಿ ಖಡಕ್ ಸೂಚನೆ
ಡಿ. ರೂಪಾ ಮತ್ತು ರೋಹಿಣಿ ಸಿಂಧೂರಿ

Updated on: Feb 20, 2023 | 11:16 AM

ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ (D Roopa) ಮತ್ತು ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ನಡುವಣ ಆರೋಪ-ಪ್ರತ್ಯಾರೋಪಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಇಬ್ಬರು ಅಧಿಕಾರಿಗಳ ಕಿತ್ತಾಟ ಸರ್ಕಾರಕ್ಕೆ ಮುಜುಗರ ತಂದೊಡ್ಡಿದೆ. ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುವುದನ್ನು ಸಹಿಸುವುದಿಲ್ಲ ಎಂದಿರುವ ಬೊಮ್ಮಾಯಿ, ಇಬ್ಬರಿಗೂ ನೋಟಿಸ್ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ವೈಯಕ್ತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಅಧಿಕಾರಿಗಳು ಮಾಧ್ಯಮಗಳ ಎದುರು ಚರ್ಚಿಸುವುದು ಸರಿಯಲ್ಲ. ಇವರಿಬ್ಬರ ಕಿತ್ತಾಟದಿಂದ ಸರ್ಕಾರಕ್ಕೆ ಮುಜಗರ ಉಂಟಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು ಬೇಜವಾಬ್ದರಿಯಿಂದ ವರ್ತಿಸುವುದನ್ನು ಸಹಿಸಲ್ಲ. ಈ ಸಂಬಂಧ ಇಬ್ಬರಿಗೂ ನೊಟೀಸ್ ಸೂಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಗೃಹ ಸಚಿವ ಆರಗ ಜ್ಞಾನೇಂದ್ರ ಸಹ ಅಧಿಕಾರಿಗಳ ನಡುವಣ ಕಿತ್ತಾಟಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜನರು ಐಎಎಸ್, ಐಪಿಎಸ್​ ಅಧಿಕಾರಿಗಳನ್ನು ದೇವ ಮಾನವರು ಅಂದುಕೊಂಡಿದ್ದಾರೆ. ಆದರೆ ಈ ಇಬ್ಬರು ಅಧಿಕಾರಿಗಳು ಬಹಳ ಕೆಟ್ಟದಾಗಿ ವರ್ತನೆ ಮಾಡುತ್ತಿದ್ದಾರೆ. ಇದರಿಂದ ನನಗೂ ನೋವಾಗಿದೆ. ವೈಯಕ್ತಿಕ ವಿಚಾರಗಳು ಏನೇ ಇದ್ದರೂ ಬೀದಿ ರಂಪಾಟ ಸಲ್ಲ. ಇವರಿಂದಾಗಿ ಎಲ್ಲ ಅಧಿಕಾರಿಗಳಿಗೂ ಮುಜುಗರ ಉಂಟಾಗುವಂತಾಗಿದೆ. ಮುಖ್ಯಮಂತ್ರಿಗಳು ಕಾನೂನಿನ ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: IPS vs IAS: ಉತ್ತರ ಕೊಡಿ ರೂಪಾ ಅವ್ರೆ ಎಂದು ರೋಹಿಣಿ ಸಿಂಧೂರಿ ಅಭಿಮಾನಿಗಳಿಂದ 9 ಪ್ರಶ್ನೆ

ಮತ್ತಷ್ಟು ತಾರಕಕ್ಕೇರಿದ ವಾಕ್ಸಮರ

ಈ ಮಧ್ಯೆ, ರೂಪಾ ಮತ್ತು ರೋಹಿಣಿ ಸಿಂಧೂರಿ ನಡುವಣ ವಾಕ್ಸಮರ ಮತ್ತಷ್ಟು ತಾರಕಕ್ಕೇರಿದೆ. ರೋಹಿಣಿಗೆ ಮಾಧ್ಯಮದ ಮುಂದೆ ಬಂದು ಮಾತನಾಡಲು ಧೈರ್ಯ ಇಲ್ವಾ? ಅವರ ಪತಿ ಸುದ್ದಿಗೋಷ್ಠಿ ನಡೆಸುತ್ತಾರೆ ಅಂದರೆ ಏನರ್ಥ? ರೋಹಿಣಿಗೆ ಪ್ರಶ್ನೆಗಳನ್ನು ಎದುರಿಸಲು ಧೈರ್ಯ ಇಲ್ವಾ? ಉತ್ತರಗಳಿಲ್ವಾ? ರೋಹಿಣಿ ಸಿಂಧೂರಿ ಪತಿ ಮೊಬೈಲ್ ಹ್ಯಾಕ್ ಆಗಿದೆ ಅಂತ ಹೇಳುತ್ತಿದ್ದಾರೆ. ಇದು ನಂಬುವ ಮಾತೇ? ಏನೋ ಹೇಳಬೇಕು ಪಾಪ, ಮಾನ ಹರಾಜಾಗಿದೆ ಎಂದು ರೋಹಿಣಿ ಸಿಂಧೂರಿ ವಿರುದ್ಧ ಫೇಸ್​ಬುಕ್​​ನಲ್ಲಿ ಡಿ.ರೂಪಾ ಪೋಸ್ಟ್ ಮಾಡಿದ್ದಾರೆ.

ಈ ಮಧ್ಯೆ, ರೋಹಿಣಿ ಅಭಿಮಾನಿಗಳು ಫೇಸ್​ಬುಕ್​ನಲ್ಲಿ, ಡಿ ರೂಪಾ ಅವರಿಗೆ 9 ಪ್ರಶ್ನೆಗಳನ್ನು ಕೇಳಿದ್ದಾರೆ. ರೋಹಿಣಿ ಸಿಂಧೂರಿಯ ಅಭಿಮಾನಿಗಳು ರೋಹಿಣಿ ಸಿಂಧೂರಿ ಆರ್ಗನೈಜೇಷನ್ ಫೇಸ್​ಬುಕ್ ಖಾತೆ ಮೂಲಕ ಹ್ಯಾಷಟ್ಯಾಗ್ ಉತ್ತರ ಕೊಡಿ ರೂಪಾ ಅವರೇ (#UttaraKodiRoopaAvre) ಎಂದು ಪ್ರಶ್ನೆಗಳನ್ನು ಕೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us