ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಶಿಸ್ತು ಉಲ್ಲಂಘನೆ: ಸಚಿವರು, ಶಾಸಕರ ವಿರುದ್ಧ ಶಿಸ್ತುಸಮಿತಿಗೆ ದೂರು

ವಿಧಾನ ಪರಿಷತ್‌ಗೆ ನಡೆದಿದ್ದ ಚುನಾವಣೆಯಲ್ಲಿ ಹಲವು ಸಚಿವರು ಹಾಗೂ ಶಾಸಕರು ಬಿಜೆಪಿ ಹೊರತುಪಡಿಸಿ ಬೇರೆ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ ಎಂಬ ದೂರನ್ನು ದಾಖಲಿಸಲಾಯಿತು.

ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಶಿಸ್ತು ಉಲ್ಲಂಘನೆ: ಸಚಿವರು, ಶಾಸಕರ ವಿರುದ್ಧ ಶಿಸ್ತುಸಮಿತಿಗೆ ದೂರು
ಬಿಜೆಪಿ (ಪ್ರಾತಿನಿಧಿಕ ಚಿತ್ರ)
Edited By:

Updated on: Jan 20, 2022 | 11:20 PM

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದ ಮೇಲೆ ಹಲವು ಸಚಿವರು ಹಾಗೂ ಶಾಸಕರ ವಿರುದ್ಧ ಬಿಜೆಪಿ ರಾಜ್ಯ ಶಿಸ್ತು ಸಮಿತಿಗೆ ಕೆಲ ಅಭ್ಯರ್ಥಿಗಳು ದೂರು ನೀಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆದಿದ್ದ ಚುನಾವಣೆಯಲ್ಲಿ ಹಲವು ಸಚಿವರು ಹಾಗೂ ಶಾಸಕರು ಬಿಜೆಪಿ ಹೊರತುಪಡಿಸಿ ಬೇರೆ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ ಎಂಬ ದೂರನ್ನು ದಾಖಲಿಸಲಾಯಿತು. ಆರೋಪಿತರಿಗೆ ನೊಟೀಸ್ ನೀಡಲು ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಿಸ್ತು ಸಮಿತಿಯು ನಿರ್ಧರಿಸಿತು. ಕೆಲ ಜಿಲ್ಲೆಗಳಲ್ಲಿ ಬಿಜೆಪಿ ಶಾಸಕರೂ ಸಹ ಇತರ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಮೊದಲ ಹಂತದಲ್ಲಿ ದೂರು ಬಂದ ಜಿಲ್ಲೆಗಳಿಗೆ ಸಮಿತಿ ಭೇಟಿ ನೀಡಿ, ಸ್ಥಳೀಯ ನಾಯಕರ ಅಭಿಪ್ರಾಯ ಪಡೆಯಲು ಸಭೆ ನಿರ್ಧರಿಸಿತು. ಅಭ್ಯರ್ಥಿಗಳ ಅಭಿಪ್ರಾಯ ಕೇಳಿದ ಬಳಿಕವೇ ನೊಟೀಸ್ ಜಾರಿಮಾಡಲು ಮತ್ತು ಪಕ್ಷದ ಶಿಸ್ತು ಉಲ್ಲಂಘಿಸಿದ್ದು ಸಾಬೀತಾದರೆ ಕ್ರಮ ಜರುಗಿಸಲು ಕೇಂದ್ರ ಸಮಿತಿಗೆ ಶಿಫಾರಸು ಮಾಡಲು ಸಭೆ ನಿರ್ಧರಿಸಿತು.

ವೀಕೆಂಡ್ ನಿರ್ಧಾರ ಮರುಪರಿಶೀಲನೆಗೆ ಬಿಜೆಪಿ ಕಚೇರಿಯಲ್ಲಿ ಸಭೆ
ಬಿಜೆಪಿ ಕಚೇರಿಯಲ್ಲಿ ಶುಕ್ರವಾರ (ಜ.21) ಮಹತ್ವದ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ವಿವಿಧ ಸಚಿವರು, ಶಾಸಕರು ಮತ್ತು ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದಲ್ಲಿ ವಾರಾಂತ್ಯ ಕರ್ಫ್ಯೂ ಮುಂದುವರಿಸಬೇಕೇ? ಬೇಡವೇ ಎಂಬ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವೀಕೆಂಡ್ ಕರ್ಫ್ಯೂ ತೆಗೆಯಬೇಕೆಂಬ ಜನರ ಅಭಿಪ್ರಾಯದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.

ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸಿದ್ಧತೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವ ಕುರಿತು ಬಿಜೆಪಿಯು ಇಂದು (ಜ.20) ಮಹತ್ವದ ಸಭೆ ನಡೆಸಿತು. ಬಿಜೆಪಿಯ ಪ್ರಮುಖ ನಾಯಕರು ಹಾಗೂ ಮುಖಂಡರ ಜೊತೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸುಮಾರು ಎರಡು ತಾಸು ಚರ್ಚೆ ನಡೆಸಿದರು. ಬೆಂಗಳೂರಿನ ಮೂವರು ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿಭಾಗ ಉಸ್ತುವಾರಿಗಳು ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ, ಪಕ್ಷವನ್ನು ಬಲಪಡಿಸುವುದು ನಮ್ಮ ಉದ್ದೇಶ. ಹಾಗಾಗಿ ಸಭೆ ಸೇರಿದ್ದೆವು ಎಂದು ವಿವರಿದರು.

ಇದನ್ನೂ ಓದಿ: BBMP Elections: ಬಿಬಿಎಂಪಿ ಚುನಾವಣೆಗೆ ಸರ್ಕಾರದ ಸಿದ್ಧತೆ; ವಾರ್ಡ್ ವಿಂಗಡಣೆ ಬಗ್ಗೆ ಹೆಚ್ಚಿದ ಭಿನ್ನಾಭಿಪ್ರಾಯ
ಇದನ್ನೂ ಓದಿ: ಬಿಬಿಎಂಪಿ ಚುನಾವಣೆಗೆ ಬಿಜೆಪಿಯಿಂದ ಸಿದ್ಧತೆ; ಜನವರಿ 25 ರಿಂದ 3 ದಿನಗಳ ಕಾಲ ಸಿಎಂ ಬಸವರಾಜ ಬೊಮ್ಮಾಯಿ ಸಭೆ

Web contact

TV9 Kannada

Read More
Follow Us