2000 ರೂ. ಬದಲು ಬಾಣಂತಿಯರ ಸಾವು ನಿಲ್ಲಿಸಿ, ಅವರಿಗೆ ಬದುಕುವ ಗ್ಯಾರಂಟಿ ಕೊಡಿ: ಆರ್ ಅಶೋಕ್ ವಾಗ್ದಾಳಿ

ಕರ್ನಾಟಕದಲ್ಲಿ ಬಾಣಂತಿಯರ ಸಾವಿನ ಹೆಚ್ಚುತ್ತಿರುವುದನ್ನು ಖಂಡಿಸಿ, ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ರಾಜೀನಾಮೆಗೆ ಆಗ್ರಹಿಸಿ, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಕಳಪೆ ಔಷಧ ಪೂರೈಕೆ ಮತ್ತು ಸರ್ಕಾರಿ ಆಸ್ಪತ್ರೆಗಳ ನಿರ್ಲಕ್ಷ್ಯವನ್ನು ಅವರು ಟೀಕಿಸಿದ್ದಾರೆ.

2000 ರೂ. ಬದಲು ಬಾಣಂತಿಯರ ಸಾವು ನಿಲ್ಲಿಸಿ, ಅವರಿಗೆ ಬದುಕುವ ಗ್ಯಾರಂಟಿ ಕೊಡಿ: ಆರ್ ಅಶೋಕ್ ವಾಗ್ದಾಳಿ
ಆರ್ ಅಶೋಕ್
Edited By:

Updated on: Jan 02, 2025 | 1:06 PM

ಬೆಂಗಳೂರು, ಜನವರಿ 2: ಕರ್ನಾಟಕದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸರಣಿ ಸಾವಿನ ವಿಚಾರವಾಗಿ ರಾಜ್ಯ ಸರ್ಕಾರವನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಸರ್ಕಾರಿ ಪ್ರಾಯೋಜಿತ ಕೊಲೆಗೆ ಸಮ. ಇನ್ನೂ ಕೂಡ ಈ ಸರ್ಕಾರಕ್ಕೆ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಅನಿಸುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಬಾಣಂತಿಯರ ಸಾವಿಗೆ ಸಂಬಂಧಿಸಿದ ನ್ಯಾಯಾಂಗ ತನಿಖೆ ಬಗ್ಗೆ, ಡೆತ್ ಆಡಿಟ್ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ. ಕಳಪೆ ದ್ರಾವಣ ಪೂರೈಸಿದ ಕಂಪನಿ ವಿರುದ್ಧ ದೆಹಲಿಗೆ ಹೋಗಿ ದೂರು ಕೊಡುವುದಾಗಿ ಆರೋಗ್ಯ ಸಚಿವರು ಹೇಳಿದ್ದರು. ಆದರೆ ಇನ್ನೂ ಯಾಕೆ ಹೋಗಿ ದೂರು ಕೊಟ್ಟಿಲ್ಲ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳು ಬಾಣಂತಿಯರ ಪಾಲಿಗೆ ಮರಣ ಮೃದಂಗ ಬಾರಿಸುವಂತಾಗಿದೆ. ಅಪ್ಪಾ ಸಿದ್ದರಾಮಯ್ಯನವರೇ, ನಿಮ್ಮ 2000 ರೂಪಾಯಿ ನೀಡುವ ಬದಲು ಮೊದಲು ಬಾಣಂತಿಯರ ಸಾವು ನಿಲ್ಲಿಸಿ. ಔಷಧ ನಿಯಂತ್ರಣದಲ್ಲಿ ಗೋಲ್ಮಾಲ್ ಆಗುತ್ತಿರುವುದನ್ನು ತಪ್ಪಿಸಿ. ರಾಜ್ಯದಲ್ಲಿ ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಸರ್ಕಾರ ಕೊಡಲಿ ಎಂದು ಅವರು ಆಗ್ರಹಿಸಿದ್ದಾರೆ.

ಗುಂಡೂರಾವ್ ರಾಜೀನಾಮೆಗೆ ಅಶೋಕ್ ಆಗ್ರಹ

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಲ್ಲದಕ್ಕೂ ಕಾರಣ ಎಂದು ಆರೋಪಿಸಿರುವ ಅಶೋಕ್, ಸಚಿವರ ರಾಜಿನಾಮೆಗೆ ಆಗ್ರಹಿಸಿದ್ದಾರೆ. ಅಲ್ಲದೆ, ಬಾಣಂತಿಯರ ಸಾವು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೊಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈಗಿನ ಆರೋಗ್ಯ ಸಚಿವರು ರಾಜಿನಾಮೆ ಕೊಟ್ಟು ಹೊಸ ಸಚಿವರು ಬಂದರೆ ಹಾಗೂ ಸಕ್ರಿಯವಾಗಿ ಕೆಲಸ ಮಾಡಿದರೆ ಬಾಣಂತಿಯರ ಸಾವಿನ ವಿಚಾರದಲ್ಲಿ ಪರಿಹಾರ ದೊರೆಯಲು ಸಾಧ್ಯವಾಗಬಹುದು. ನಾವು ಪ್ರತಿಪಕ್ಷವಾಗಿ ಕಳೆದ ಒಂದು ವರ್ಷದಲ್ಲಿ ಹೋರಾಟ ಮಾಡಿದಷ್ಟು ಹಿಂದೆಂದೂ ಮಾಡಿಲ್ಲ. ನಾವು ಹಳೆಯ ವಿಚಾರಗಳನ್ನು ಎಲ್ಲವನ್ನು ತಾರ್ಕಿಕಂತ್ಯಕ್ಕೆ ಕೊಂಡೊಯ್ದಿದ್ದೇವೆ. ಈ ಪ್ರಕರಣದಲ್ಲೂ ಅಷ್ಟೆ, ಬಿಜೆಪಿಯಿಂದ ಸತ್ಯಶೋಧನಾ ಸಮಿತಿ ಮಾಡಿದ್ದೇವೆ. ವರದಿ ದೊರೆತ ಬಳಿಕ ಹೋರಾಟ ಮುಂದುವರಿಸಲಿದ್ದೇವೆ. ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ ಎಂದು ಅಶೋಕ್ ಹೇಳಿದ್ದಾರೆ.

ಪ್ರಿಯಾಂಕ್ ಖರ್ಗೆಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ನೀಡಲಿ: ಅಶೋಕ್

ಅಂದು ಬಿಜೆಪಿ ಸರ್ಕಾರ ಇದ್ದಾಗ ಈಶ್ವರಪ್ಪನವರನ್ನು ಉದ್ದೇಶಿಸಿ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದರು. ಒಬ್ಬ ವ್ಯಕ್ತಿ ಆತ್ಮಹತ್ಯೆ ನಿರ್ಧಾರಕ್ಕೆ ಬರಬೇಕು ಎಂದರೆ ಎಷ್ಟು ಕಷ್ಟಪಟ್ಟಿರಬಹುದು, ಎಷ್ಟು ಮಂದಿ ಬೀದಿಗೆ ಬಂದಿರಬಹುದು ಎಂದು ಪ್ರಿಯಾಂಕ್ ಪ್ರಶ್ನಿಸಿದ್ದರು. ಅದೇ ಪ್ರಿಯಾಂಕ್ ಖರ್ಗೆ ಈಗ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ನೀಡಲಿ ಎಂದು ಅಶೋಕ್ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ, ಮಗು ಸಾವು

ಎಐಸಿಸಿ ಅಧ್ಯಕ್ಷರ ಮಗ ಎಂದು ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಲು ಸಿದ್ದರಾಮಯ್ಯ ನಡುಗುತ್ತಿದ್ದಾರೆ. ನಾವು ಬಟ್ಟೆಹರಿದುಕೊಳ್ಳುವುದಕ್ಕಿಂತ ಮೊದಲು ಅವರ ಬಟ್ಟೆ ಹರಿದು ಹೋಗುತ್ತದೆ ಎಂದು ಅಶೋಕ್ ತಿರುಗೇಟು ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Web contact

TV9 Kannada

Read More
Follow Us