ಪರಿಷತ್​​ನಲ್ಲಿ ಹಿಡಿತ ಸಾಧಿಸಲು ಬಿಜೆಪಿ ಕಾಂಗ್ರೆಸ್ ಹೋರಾಟ: ಬಿಜೆಪಿ ಒಳಜಗಳ ಶಮನಕ್ಕೆ ಬಿಎಲ್ ಸಂತೋಷ್ ಅಖಾಡಕ್ಕೆ

ರಾಜ್ಯ ರಾಜಕೀಯದಲ್ಲಿ ಸದ್ಯ ವಿಧಾನ ಪರಿಷತ್ ಚುನಾವಣೆ ಕಾವು ಹೆಚ್ಚಾಗಿದೆ. ಒಂದೆಡೆ ಕಾಂಗ್ರೆಸ್​ನಲ್ಲಿ ಆಕಾಂಕ್ಷಿಗಳ ನಡುವೆ ಅಸಮಾಧಾನ ಹೊಗೆಯಾಡುತ್ತಿದ್ದರೆ ಬಿಜೆಪಿಯಲ್ಲಿ ಬಂಡಾಯ ತಾರಕಕ್ಕೇರಿದೆ. ಈ ಮಧ್ಯೆ, ಬಿಜೆಪಿ ಉಡುಪಿ ಬಂಡಾಯ ಎದುರಿಸಲು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅಖಾಡಕ್ಕಿಳಿದಿದ್ದಾರೆ. ಲೇಟೆಸ್ಟ್ ಅಪ್​ಡೇಟ್​​ ಇಲ್ಲಿದೆ.

ಪರಿಷತ್​​ನಲ್ಲಿ ಹಿಡಿತ ಸಾಧಿಸಲು ಬಿಜೆಪಿ ಕಾಂಗ್ರೆಸ್ ಹೋರಾಟ: ಬಿಜೆಪಿ ಒಳಜಗಳ ಶಮನಕ್ಕೆ ಬಿಎಲ್ ಸಂತೋಷ್ ಅಖಾಡಕ್ಕೆ
ಪರಿಷತ್​​ನಲ್ಲಿ ಹಿಡಿತ ಸಾಧಿಸಲು ಬಿಜೆಪಿ ಕಾಂಗ್ರೆಸ್ ಹೋರಾಟ
Edited By:

Updated on: May 30, 2024 | 2:45 PM

ಬೆಂಗಳೂರು, ಮೇ 30: ಕರ್ನಾಟಕ ರಾಜಕೀಯದಲ್ಲಿ ಸದ್ಯ ವಿಧಾನ ಪರಿಷತ್ (MLC Election) ಚುನಾವಣೆ ಕಾವು ಹೆಚ್ಚಾಗಿದೆ. ಉಡುಪಿಗೆ (Udupi) ಬಂದಿರುವ ಬಿಜೆಪಿ (BJP) ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್, ನೈಋತ್ಯ ಪದವೀಧರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿದ್ದಾರೆ. ಉಡುಪಿಯಲ್ಲಿ ಸೆಡ್ಡು ಹೊಡೆದು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ರಘುಪತಿ ಭಟ್‌ಗೆ ಸಂತೋಷ್ ಶಾಕ್ ನೀಡಿದ್ದಾರೆ. ರಘುಪತಿ ಭಟ್ ಜೊತೆ ಗುರುತಿಸಿಕೊಂಡವರಿಗೆ ನೋಟಿಸ್ ನೀಡಿದ್ದು, ಸಭೆಯಲ್ಲಿ ಭಾಗಿಯಾಗುವಂತೆ ಸೂಚನೆ ನೀಡಿದ್ದಾರೆ.

ಹೆಚ್‌ ಆಂಜನೇಯ ಬೆಂಬಲಿಗರಿಂದ ಪ್ರತಿಭಟನೆ

ಇತ್ತ ಕಾಂಗ್ರೆಸ್‌ನಲ್ಲೂ ಪರಿಷತ್ ಟಿಕೆಟ್‌ಗೆ ಲಾಬಿ ಜೋರಾಗಿದೆ. ಹೆಚ್‌ ಆಂಜನೇಯರನ್ನು ಎಂಎಲ್‌ಸಿ ಮಾಡಿ, ಮಂತ್ರಿ ಸ್ಥಾನ ನೀಡ್ಬೇಕು ಅಂತಾ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಕುಮಾರಕೃಪಾ ಗೆಸ್ಟ್‌ಹೌಸ್‌ ಬಳಿ ಬೆಂಬಲಿಗರು ಪ್ರತಿಭಟನೆ ಮಾಡಿದರು. ಎಂಎಲ್‌ಸಿ ಟಿಕೆಟ್ ಕೊಡದಿದ್ದರೆ ಮುಂದಿನ ಚುನಾವಣೆಯಲ್ಲಿ ತಕ್ಕಪಾಠ ಕಲಿಸುವ ಎಚ್ಚರಿಕೆ ನೀಡಿದ್ದರು.

ಕಾಂಗ್ರೆಸ್ ಪರಿಷತ್ ಅಭ್ಯರ್ಥಿಗಳ ಆಯ್ಕೆಗೆ ಭಾರಿ ಕಸರತ್ತು

ಒಂದೆಡೆ ಟಿಕೆಟ್ ಆಕಾಂಕ್ಷಿಗಳ ಒತ್ತಡ ಹೆಚ್ಚಾಗಿದೆ. ಹೀಗಾಗಿ ಬುಧವಾರ ದೆಹಲಿಯಲ್ಲಿ ತಡರಾತ್ರಿವರೆಗೂ ಮೀಟಿಂಗ್ ನಡೆಸಿ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕೆಸಿ ವೇಣುಗೋಪಾಲ್‌, ರಣದೀಪ್ ಸುರ್ಜೇವಾಲ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನ ಶಾರ್ಟ್‌ಲಿಸ್ಟ್ ಮಾಡಿದ್ದಾರೆ. ಇನ್ನೆರಡು ದಿನದಲ್ಲಿ ಪರಿಷತ್ ಅಭ್ಯರ್ಥಿಗಳ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ.

ಬುಧವಾರದ ಸಭೆಯಲ್ಲಿ ಹಿಂದುಳಿದ ಸಮುದಾಯದಿಂದ ಯತೀಂದ್ರ ಸಿದ್ದರಾಮಯ್ಯ, ಎನ್ಎಸ್ ಬೋಸರಾಜು, ಪಿಆರ್ ರಮೇಶ್, ಎಂಸಿ ವೇಣುಗೋಪಾಲ್ ಆಯ್ಕೆ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಇನ್ನೂ ಪರಿಷತ್ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಹಿರಿಯರನ್ನ ಕಡೆಗಣಿಸಲಾಗ್ತಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿರೋ ಸಚಿವ ಎಂ.ಬಿ ಪಾಟೀಲ್, ಈ ಹಿಂದೆ 4 ಜನರ ಕಮಿಟಿ ಇತ್ತು. ಈಗ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುತ್ತೆ ಎಂದಿದ್ದಾರೆ. ಮತ್ತೊಂದ್ಕಡೆ ಪಕ್ಷಕ್ಕೆ ದುಡಿದವರಿಗೆ ಟಿಕೆಟ್ ಕೊಡ್ಬೇಕು ಸಚಿವ ಪರಮೇಶ್ವರ್ ಹೇಳಿದ್ದಾರೆ.

ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ: ದೆಹಲಿ ತಲುಪಿದ ಕಾಂಗ್ರೆಸ್ ಆಕಾಂಕ್ಷಿಗಳ ವಿವರ, ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯೋ ಚುನಾವಣೆಗೆ ಮೂರು ಪಕ್ಷದಲ್ಲೂ ರಂಗತಾಲೀಮು ನಡೀತಿದೆ. ಯಾರಿಗೆ ಟಿಕೆಟ್ ಸಿಗುತ್ತೆ, ಯಾರು ಮೇಲ್ಮನೆ ಪ್ರವೇಶಿಸ್ತಾರೆ ಅನ್ನೋದು ಕುತೂಹಲ ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us