ದೆಹಲಿ ಅಂಗಳ ತಲುಪಿದ ಬಿಜೆಪಿ, ಜೆಡಿಎಸ್ ಮೈತ್ರಿ ಗೊಂದಲ: ಹೆಚ್ಡಿಕೆಗೆ ಬಿಜೆಪಿ ಹೈಕಮಾಂಡ್ನಿಂದ ಸಿಕ್ತು ಅಭಯ!
ಕರ್ನಾಟಕದಲ್ಲಿ ಎನ್ಡಿಎ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹೇಳಿಕೆಗಳಿಂದ ರಾಜಕೀಯ ಗೊಂದಲ ಉಂಟಾಗಿದ್ದು, ಇದೀಗ ಹೈಕಮಾಂಡ್ ಅಂಗಳ ತಲುಪಿದೆ. ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ಕರ್ನಾಟಕ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಹೆಚ್ಡಿಕೆ ಮಾತಿಗೆ ಪೂರಕವಾಗಿ ರಾಧಾಮೋಹನ್ ಸ್ಪಂದಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು/ ನವದೆಹಲಿ, ಫೆಬ್ರವರಿ 10: ಕರ್ನಾಟಕದಲ್ಲಿ (Karnataka) ಎನ್ಡಿಎ (NDA) ಮೈತ್ರಿ ರಾಜಕೀಯ ಗೊಂದಲ ಇದೀಗ ದೆಹಲಿ ಅಂಗಳಕ್ಕೂ ತಲುಪಿದೆ. ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿ (BJP) ಮಾಜಿ ಶಾಸಕರ ಹೇಳಿಕೆಗಳು ಜೆಡಿಎಸ್ (JDS) ನಾಯಕರ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ಬೆಳವಣಿಗೆ ಕುರಿತು ಕೇಂದ್ರ ನಾಯಕರ ಮಟ್ಟದಲ್ಲೇ ಚರ್ಚೆಗಳು ನಡೆದಿವೆ. ಟಿಕೆಟ್ ಹಂಚಿಕೆ ಕುರಿತಾಗಿ ಬಿಜೆಪಿ ನಾಯಕ ಪ್ರೀತಂಗೌಡ ಹಾಗೂ ನಾರಾಯಣಗೌಡ ನೀಡಿದ ಹೇಳಿಕೆಗಳಿಗೆ ಜೆಡಿಎಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಶಾಸಕರ ವರ್ತನೆ ಬಗ್ಗೆ ಜೆಡಿಎಸ್ ರಾಜ್ಯ ನಾಯಕರು ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಬೆನ್ನಲ್ಲೇ ಅಗರ್ವಾಲ್ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಜೊತೆ ದೆಹಲಿಯಲ್ಲಿ ಮಾತುಕತೆ ನಡೆಸಿದ್ದಾರೆ.
ರಾಜ್ಯ ರಾಜಕೀಯ ಬೆಳವಣಿಗೆಗಳು, ಮಾಜಿ ಶಾಸಕರ ಹೇಳಿಕೆಗಳು ಹಾಗೂ ಮೈತ್ರಿ ಪಕ್ಷಗಳ ನಡುವಿನ ಸಮನ್ವಯದ ಬಗ್ಗೆ ಇಬ್ಬರು ನಾಯಕರು ಚರ್ಚೆ ನಡೆಸಿದರೆಂದು ತಿಳಿದುಬಂದಿದೆ. ಅನಗತ್ಯ ಹೇಳಿಕೆಗಳು ಮೈತ್ರಿ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ. ಇದರಿಂದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಗೊಂದಲ ಉಂಟಾಗಬಹುದು ಹಾಗೂ ಜೆಡಿಎಸ್-ಬಿಜೆಪಿ ಕಾರ್ಯಕರ್ತರಲ್ಲೂ ಗೊಂದಲ ಹೆಚ್ಚಬಹುದು. ಕಾರ್ಯಕರ್ತರಲ್ಲಿ ಗೊಂದಲವಾದರೆ ಕಾಂಗ್ರೆಸ್ಗೆ ಲಾಭವಾಗುತ್ತದೆ ಎಂಬ ಆತಂಕವನ್ನು ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ನಾಯಕರ ಹೇಳಿಕೆಗಳಿಗೆ ಬ್ರೇಕ್ ಹಾಕಲಾಗುವುದು ಎಂದು ಅಗರ್ವಾಲ್ ತಿಳಿಸಿದ್ದಾರೆ.
ಏನು ಹೇಳಿದ್ದರು ಪ್ರೀತಂಗೌಡ, ನಾರಾಯಣಗೌಡ?
ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನವೇ ಮಂಡ್ಯ ಜಿಲ್ಲೆಯಲ್ಲಿ ಮೈತ್ರಿ ಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ನಾಯಕರ ನಡುವೆ ಟಿಕೆಟ್ ಗುದ್ದಾಟ ಆರಂಭವಾಗಿತ್ತು. 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈಗಿನಿಂದಲೇ ಕ್ಷೇತ್ರ ಹಂಚಿಕೆ ಕುರಿತು ಎರಡೂ ಪಕ್ಷಗಳ ನಾಯಕರು ತಮ್ಮ ತಮ್ಮ ಹಕ್ಕು ಮಂಡಿಸಲು ಮುಂದಾಗಿದ್ದರು. ಮಂಡ್ಯ ಜಿಲ್ಲೆಯ ಕೆಲವು ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಬೇಕು ಎಂದು ಬಿಜೆಪಿ ನಾಯಕರಾದ ಪ್ರೀತಂಗೌಡ, ನಾರಾಯಣಗೌಡ ಒತ್ತಾಯಿಸಿದ್ದರು. ಕೆಆರ್ ಪೇಟೆ ಸೇರಿದಂತೆ ಮೂರು ಕ್ಷೇತ್ರಗಳನ್ನು ನೀಡುವಂತೆ ಆಗ್ರಹ ವ್ಯಕ್ತಪಡಿಸಲಾಗಿತ್ತು. ಅಲ್ಲದೇ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿಯೂ ಶೇ 50ರಷ್ಟು ಸ್ಥಾನಗಳನ್ನು ಬಿಜೆಪಿಗೆ ನೀಡಬೇಕು ಎಂಬ ಬೇಡಿಕೆಯನ್ನು ಮಾಜಿ ಸಚಿವ ನಾರಾಯಣಗೌಡ ಹಾಗೂ ಮಾಜಿ ಶಾಸಕ ಪ್ರೀತಂಗೌಡ ಮುಂದಿಟ್ಟಿದ್ದರು.
ಇದೇ ವೇಳೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ನೀಡಿದ ಹೇಳಿಕೆಗಳಿಗೂ ಬಿಜೆಪಿ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. 2028ರ ಚುನಾವಣೆಯಲ್ಲಿ ಎಚ್ಟಿ ಮಂಜು ಅವರನ್ನು ಮತ್ತೆ ಗೆಲ್ಲಿಸಬೇಕು ಎಂದು ಕೆಆರ್ ಪೇಟೆಯಲ್ಲಿ ನಿಖಿಲ್ ಮನವಿ ಮಾಡಿದ್ದನ್ನು ಬಿಜೆಪಿ ನಾಯಕರು ವಿರೋಧಿಸಿದ್ದರು. ಅಭ್ಯರ್ಥಿ ಘೋಷಣೆ ಮಾಡುವ ಅಧಿಕಾರ ನಿಖಿಲ್ ಅವರಿಗೆ ಇಲ್ಲ ಎಂದು ತಿರುಗೇಟು ನೀಡಿದ್ದರು.
ನಿಖಿಲ್ ಕುಮಾರಸ್ವಾಮಿ ನಿರಂತರ ಸೋಲು ಅನುಭವಿಸಿರುವ ನಾಯಕರು; ಮೊದಲಿಗೆ ತಮ್ಮ ರಾಜಕೀಯ ಅಸ್ತಿತ್ವವನ್ನು ಸಾಬೀತುಪಡಿಸಿಕೊಳ್ಳಲಿ ಎಂದು ಬಿಜೆಪಿ ನಾಯಕರು ಸವಾಲು ಹಾಕಿದ್ದರು. ಈ ರೀತಿಯ ಹೇಳಿಕೆಗಳು ಮುಂದುವರಿದರೆ ಮೈತ್ರಿ ಸಂಬಂಧಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.
ಇದನ್ನೂ ಓದಿ: ಮಂಡ್ಯ: ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನವೇ ಬಿಜೆಪಿ, ಜೆಡಿಎಸ್ ಟಿಕೆಟ್ ಫೈಟ್! ನಿಖಿಲ್ ವಿರುದ್ಧ ಕೇಸರಿ ಪಡೆ ಬಹಿರಂಗ ವಾಗ್ದಾಳಿ
ಒಟ್ಟಿನಲ್ಲಿ, ಸ್ಥಳೀಯ ಸಂಸ್ಥೆ ಚುನಾವಣೆಗಳ ಹೊಸ್ತಿಲಲ್ಲೇ ಮೈತ್ರಿ ಪಕ್ಷಗಳೊಳಗಿನ ಭಿನ್ನಾಭಿಪ್ರಾಯಗಳು ಹೊರಹೊಮ್ಮುತ್ತಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.