Karnataka Covid-19: ಕರ್ನಾಟಕದಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ; ಕೇರಳ, ಮಹಾರಾಷ್ಟ್ರದ ಪ್ರಯಾಣಿಕರಿಗೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯ

| Updated By: ಸುಷ್ಮಾ ಚಕ್ರೆ

Updated on: Jul 31, 2021 | 3:10 PM

Karnataka Covid-19 Guidelines: ಕರ್ನಾಟಕ ಸರ್ಕಾರದಿಂದ ಕೊವಿಡ್ ಹೊಸ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಈಗಾಗಲೇ 2 ಡೋಸ್ ಕೊವಿಡ್ ಲಸಿಕೆ ಪಡೆದಿದ್ದರೂ ಕೊರೋನಾ ನೆಗೆಟಿವ್ ರಿಪೋರ್ಟ್ ತೋರಿಸುವುದು ಕಡ್ಡಾಯವಾಗಿದೆ.

Karnataka Covid-19: ಕರ್ನಾಟಕದಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ; ಕೇರಳ, ಮಹಾರಾಷ್ಟ್ರದ ಪ್ರಯಾಣಿಕರಿಗೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕದಲ್ಲಿ ಇಳಿಮುಖವಾಗಿದ್ದ ಕೊರೋನಾ ಕೇಸುಗಳು ಇದ್ದಕ್ಕಿದ್ದಂತೆ ಏರಿಕೆಯಾಗಿದೆ. ನಿನ್ನೆ ರಾಜ್ಯದಲ್ಲಿ 1,890 ಕೊರೋನಾ ಕೇಸುಗಳು ಪತ್ತೆಯಾಗುವ ಮೂಲಕ ಮೂರನೇ ಅಲೆಯ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದು, ಇಂದು ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ಮಾರ್ಗಸೂಚಿಗಳು ಇಂದಿನಿಂದಲೇ ಜಾರಿಯಾಗಲಿವೆ. ಮಹಾರಾಷ್ಟ್ರ ಹಾಗೂ ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ವಿಶೇಷ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದ್ದು, 72 ಗಂಟೆಯೊಳಗಿನ ಕೊವಿಡ್ ನೆಗೆಟಿವ್ ವರದಿ ತೋರಿಸುವವರಿಗೆ ಮಾತ್ರ ರಾಜ್ಯದೊಳಗೆ ಪ್ರವೇಶಿಸಲು ಅವಕಾಶ ನೀಡಲಾಗುವುದು.

ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಈಗಾಗಲೇ 2 ಡೋಸ್ ಕೊವಿಡ್ ಲಸಿಕೆ ಪಡೆದಿದ್ದರೂ ಕೊರೋನಾ ನೆಗೆಟಿವ್ ರಿಪೋರ್ಟ್ ತೋರಿಸುವುದು ಕಡ್ಡಾಯವಾಗಿದೆ. ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೋನಾ ಕೇಸುಗಳು ಹೆಚ್ಚಾಗುತ್ತಿರುವುದರಿಂದ ಈ ಎರಡು ರಾಜ್ಯಗಳಿಂದ ಕರ್ನಾಟಕದ ಗಡಿಯೊಳಗೆ ಬರುವವರು 72 ಗಂಟೆಗಳ ಒಳಗಿನ ನೆಗೆಟಿವ್ ರಿಪೋರ್ಟ್ ತೋರಿಸುವುದು ಕಡ್ಡಾಯವಾಗಿದೆ.

ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಸೋಂಕು ಮತ್ತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳ-ಕರ್ನಾಟಕ ಮತ್ತು ಮಹಾರಾಷ್ಟ್ರ- ಕರ್ನಾಟಕದ ಗಡಿಭಾಗದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಕೇರಳ ಹಾಗೂ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸುವ ವಾಹನ ಸವಾರರು, ಬಸ್​, ರೈಲು ಹಾಗೂ ವಿಮಾನ ಪ್ರಯಾಣಿಕರೆಲ್ಲರಿಗೂ ಈ ಮಾರ್ಗಸೂಚಿ ಅನ್ವಯವಾಗಲಿದೆ. ರೈಲಿನಲ್ಲಿ ಪ್ರಯಾಣ ಮಾಡುವ ಎಲ್ಲ ಪ್ರಯಾಣಿಕರೂ RT-PCR ಕೋವಿಡ್ ನೆಗೆಟಿವ್ ವರದಿ ಹೊಂದಿರುವಂತೆ ಎಚ್ಚರ ವಹಿಸುವುದು ಆಯಾ ರೈಲ್ವೆ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ. ಕೇರಳ, ಮಹಾರಾಷ್ಟ್ರದಿಂದ ಆಗಮಿಸುವ ವಿಮಾನ ಹಾಗೂ ಬಸ್​ಗಳಲ್ಲೂ ಕೋವಿಡ್ ನೆಗೆಟಿವ್ ವರದಿ ನೀಡುವವರಿಗೆ ಮಾತ್ರ ಸಂಚರಿಸಲು ಅವಕಾಶ ನೀಡಲು ಆದೇಶಿಸಲಾಗಿದೆ.

ಕೇರಳ, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಪ್ರವೇಶಿಸುವ ಎಲ್ಲಾ ಪ್ರಯಾಣಿಕರ ತಪಾಸಣೆ ಕಡ್ಡಾಯಗೊಳಿಸಲಾಗಿದೆ. ರೈಲ್ವೆ ಪ್ರಾಧಿಕಾರ ಮತ್ತು ವಿಮಾನಯಾನ ಪ್ರಾಧಿಕಾರಕ್ಕೆ ಈ ಹೊಣೆಯನ್ನು ನೀಡಲಾಗಿದೆ. ಬಸ್‌ ಪ್ರಯಾಣಿಕರ ತಪಾಸಣೆ ಹೊಣೆ ಕಂಡಕ್ಟರ್ಸ್ ಜವಾಬ್ದಾರಿಯಾಗಿರುತ್ತದೆ. ಕೇರಳದಿಂದ ಕರ್ನಾಟಕಕ್ಕೆ ದೈನಂದಿನ ಪ್ರಯಾಣಿಕರಿಗೆ ಬೇರೆ ನಿಯಮಗಳನ್ನು ಮಾಡಲಾಗಿದೆ. ಪ್ರತಿನಿತ್ಯ ಗಡಿಯಲ್ಲಿ ಪ್ರಯಾಣಿಸುವವರು ಪ್ರತಿ 15 ದಿನಕ್ಕೊಮ್ಮೆ RtPCR ನೆಗೆಟಿವ್ ವರದಿ ತರಲೇಬೇಕು. ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಚೆಕ್‌ ಪೋಸ್ಟ್‌ಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಬೆಳಗಾವಿ, ಕಲಬುರಗಿ, ವಿಜಯಪುರ, ಬೀದರ್‌ ಪ್ರವೇಶಿಸುವ ವಾಹನಗಳ ಬಗ್ಗೆ ನಿಗಾ ಇಡುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಹೊಣೆ ವಹಿಸಿ ಸರ್ಕಾರದ ಆದೇಶ ಹೊರಡಿಸಿದೆ.

ಈಗಾಗಲೇ ರಾಜ್ಯದ ಗಡಿ ಪ್ರದೇಶಗಳಲ್ಲಿ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಲಾಗಿದೆ. ಕೊರೋನಾ ಪರೀಕ್ಷೆ ಹಾಗೂ ಲಸಿಕೆ ತೆಗೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ನಮ್ಮ ಸದ್ಯದ ಆದ್ಯತೆ ಕೊರೋನಾ ಸೋಂಕಿನ ಹರಡುವಿಕೆ ತಡೆಯುವುದಾಗಿದೆ ಎಂದು ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ ಹೇಳಿದ್ದರು. ಅದರ ಬೆನ್ನಲ್ಲೇ ಅಧಿಕೃತವಾಗಿ ಹೊಸ ಮರ್ಗಸೂಚಿಯ ಆದೇಶವನ್ನು ಹೊರಡಿಸಲಾಗಿದೆ.

ಕೇರಳದ ಬಳಿಕ ನೆರೆಯ ತಮಿಳುನಾಡಿನಲ್ಲೂ ಕೂಡ ನಿನ್ನೆಯಿಂದ ಹೊಸ ಕೋವಿಡ್ ಪ್ರಕರಣಗಳಲ್ಲಿ ಏರಿಕೆಯಾಗಿದೆ. ಕರ್ನಾಟಕದಲ್ಲೂ ಸುಮಾರು 2 ಸಾವಿರ ಕೇಸುಗಳು ದಾಖಲಾಗಿರುವುದರಿಂದ ಹೆಚ್ಚಿನ ಮುಂಜಾಗ್ರತೆ ವಹಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ: Karnataka Covid Updates: ಕರ್ನಾಟಕದಲ್ಲಿ ಇಂದು 1,653 ಕೋವಿಡ್ ಕೇಸ್ ಪತ್ತೆ; ಒಂದೇ ದಿನ 31 ಜನ ಸಾವು

(Karnataka New Covid-19 Guidelines Announced Coronavirus Negative Report is Compulsory for Kerala and Maharashtra Passengers)

Published On - 2:20 pm, Sat, 31 July 21