ಲಂಚ ಪಡೆದ ಜಿಎಸ್​ಟಿ ಅಧಿಕಾರಿಗೆ 3 ವರ್ಷ ಜೈಲು, 5 ಲಕ್ಷ ರೂ. ದಂಡ: ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು

ತನಿಖೆ ಮತ್ತು ವಿಚಾರಣೆ ನಡೆಸಲು ತೆರಿಗೆದಾರರ ಹಣದಿಂದ ಸಾಕಷ್ಟು ಖರ್ಚು ಮಾಡಲಾಗಿದೆ. ಹೀಗಾಗಿ ಆರೋಪಿಗೆ 5 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ ಎಂದು ಭಾರಿ ಮೊತ್ತದ ದಂಡ ವಿಧಿಸಿದ್ದಕ್ಕೆ ನ್ಯಾಯಾಲಯ ಕಾರಣ ನೀಡಿದೆ. ದೂರುದಾರಿಂದ ಲಂಚ ಪಡೆಯುತ್ತಿದ್ದಾಗ 2021 ರ ಮಾರ್ಚ್‌ನಲ್ಲಿ ಅಧಿಕಾರಿಯನ್ನು ಸಿಬಿಐ ರೆಡ್​​ಹ್ಯಾಂಡ್ ಆಗಿ ಹಿಡಿದಿತ್ತು.

ಲಂಚ ಪಡೆದ ಜಿಎಸ್​ಟಿ ಅಧಿಕಾರಿಗೆ 3 ವರ್ಷ ಜೈಲು, 5 ಲಕ್ಷ ರೂ. ದಂಡ: ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು
ಲಂಚ ಪಡೆದ ಜಿಎಸ್​ಟಿ ಅಧಿಕಾರಿಗೆ 3 ವರ್ಷ ಜೈಲು, 5 ಲಕ್ಷ ರೂ. ದಂಡ

Updated on: May 14, 2024 | 9:04 AM

ಬೆಂಗಳೂರು, ಮೇ 14: ಲಂಚ ಪಡೆದ ಪ್ರಕರಣದಲ್ಲಿ ಜಿಎಸ್‌ಟಿ ಅಧಿಕಾರಿಯೊಬ್ಬರಿಗೆ ಸಿಬಿಐ ವಿಶೇಷ ನ್ಯಾಯಾಲಯ (CBI Special Court) ಮೂರು ವರ್ಷ ಜೈಲು ಶಿಕ್ಷೆ ಮತ್ತು 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಉತ್ತರ ಪ್ರದೇಶ ಮೂಲದ ಕೇಂದ್ರೀಯ ಅಬಕಾರಿ ಮತ್ತು ಕೇಂದ್ರ ತೆರಿಗೆ (GST) ಸೂಪರಿಂಟೆಂಡೆಂಟ್ ಜಿತೇಂದ್ರ ಕುಮಾರ್ ಡಾಗೂರ್, ತೆರಿಗೆ ವಿಚಾರದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ನೆರವಾಗಲು ಮುಂದಾದ ಮತ್ತು ದಂಡ ಮನ್ನಾ ಮಾಡಲು 25,000 ರೂ.ಗಳ ಲಂಚ ಪಡೆದ ಆರೋಪದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿತ್ತು. ಹೀಗಾಗಿ ಶಿಕ್ಷೆ ವಿಧಿಸಲಾಗಿದೆ.

ತನಿಖೆ ಮತ್ತು ವಿಚಾರಣೆ ನಡೆಸಲು ತೆರಿಗೆದಾರರ ಹಣದಿಂದ ಸಾಕಷ್ಟು ಖರ್ಚು ಮಾಡಲಾಗಿದೆ. ಹೀಗಾಗಿ ಆರೋಪಿಗೆ 5 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ ಎಂದು ಭಾರಿ ಮೊತ್ತದ ದಂಡ ವಿಧಿಸಿದ್ದಕ್ಕೆ ನ್ಯಾಯಾಲಯ ಕಾರಣ ನೀಡಿದೆ.

ಡಾಗೂರ್ ಅವರು ದೇಶದ ಹಿತದೃಷ್ಟಿಯಿಂದ ಪ್ರಾಮಾಣಿಕವಾಗಿ ಮತ್ತು ಶ್ರದ್ಧೆಯಿಂದ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕಾಗಿತ್ತು. ಆದರೆ ಅಂತಹ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡರೆ, ತೆರಿಗೆದಾರರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ಇಂಥ ಕೃತ್ಯಗಳಿಂದ ದೇಶದ ಆರ್ಥಿಕ ಸ್ಥಿತಿ ಕೂಡ ಹಾಳಾಗುತ್ತದೆ ಎಂದು ನ್ಯಾಯಮೂರ್ತಿ ಎಚ್‌ಎ ಮೋಹನ್‌ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

ಡಾಗೂರ್ 2021 ರ ಮಾರ್ಚ್‌ನಲ್ಲಿ ದೂರುದಾರ ಜಗದೀಶ್ ಸುಬ್ರಾಯ್ ಭಾವೆ ಅವರಿಂದ ಉತ್ತರ ಕನ್ನಡ ವಿಭಾಗದ ಹೊನ್ನಾವರ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ 25,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಸಿಬಿಐ ಬಲೆಗೆ ಬಿದ್ದಿದ್ದರು. ಡಾಗೂರ್ ಒಟ್ಟು 50,000 ರೂ.ಗಳನ್ನು ಎರಡು ಕಂತುಗಳಲ್ಲಿ ನೀಡಲು ಸೂಚಿಸಿದ್ದರು.

ಇದನ್ನೂ ಓದಿ: ಕೊರೊನಾ ಕೆಪಿ2 ಉಪ ತಳಿಯಿಂದ ಕರ್ನಾಟಕಕ್ಕೂ ಇದೆಯೇ ಆತಂಕ; ಇಲ್ಲಿದೆ ತಜ್ಞರ ಅಭಿಪ್ರಾಯ

ದೂರುದಾರರು ತಮ್ಮ ಮೊಬೈಲ್ ಫೋನ್‌ನಲ್ಲಿ ಆಡಿಯೋ ಮತ್ತು ವಿಡಿಯೋ ಮೋಡ್‌ನಲ್ಲಿ ಸಂಭಾಷಣೆಗಳನ್ನು ರೆಕಾರ್ಡ್ ಮಾಡಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ದೂರು ಸಲ್ಲಿಸಿದ್ದರು. ನಂತರ ಅಧಿಕಾರಿಗಳು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಲೆ ಬೀಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:03 am, Tue, 14 May 24

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us