ಪಿಂಚಣಿದಾರರಿಗೆ ವರಮಹಾಲಕ್ಷ್ಮಿ ಹಬ್ಬದ ಬಂಪರ್ ಗಿಫ್ಟ್: ವಾರ್ಷಿಕ ಆದಾಯ ಮಿತಿ ಹೆಚ್ಚಿಸಿದ ಸರ್ಕಾರ

Pension Income Limit Hike: ಪಿಂಚಣಿ ಯೋಜನೆಯ ಫಲಾನುಭವಿಗಳ ವಾರ್ಷಿಕ ಆದಾಯ ಮಿತಿಯನ್ನು 32 ಸಾವಿರ ರೂ.ದಿಂದ 1,20 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ. ಡಿಸಿಎಂ ಡಾ.ಜಿ.ಪರಮೇಶ್ವರ್​ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದು, ಜನರ ಬಹುಕಾಲದ ಸಮಸ್ಯೆ ಬಗೆಹರಿಸಿದ್ದೇವೆ ಎಂದು ಹೇಳಿದ್ದಾರೆ.

ಪಿಂಚಣಿದಾರರಿಗೆ ವರಮಹಾಲಕ್ಷ್ಮಿ ಹಬ್ಬದ ಬಂಪರ್ ಗಿಫ್ಟ್: ವಾರ್ಷಿಕ ಆದಾಯ ಮಿತಿ ಹೆಚ್ಚಿಸಿದ ಸರ್ಕಾರ
Paramonpinchani
Image Credit source: Getty images

Updated on: Aug 19, 2026 | 8:59 PM

ಮುಖ್ಯಾಂಶಗಳು

  • ಪಿಂಚಣಿ ಯೋಜನೆಯ ಫಲಾನುಭವಿಗಳ ಆದಾಯ ಮಿತಿ 1.20 ಲಕ್ಷಕ್ಕೆ ಹೆಚ್ಚಳ
  • ಜನರ ಬಹುಕಾಲದ ಸಮಸ್ಯೆ ಬಗೆಹರಿಸಿದ್ದೇವೆ ಎಂದ ಡಿಸಿಎಂ
  • 1.20 ಲಕ್ಷ ವರೆಗಿನ ಆದಾಯ ಹೊಂದಿರುವವರಿಗೆ ಪಿಂಚಣಿ ಮುಂದುವರಿಕೆ

ಬೆಂಗಳೂರು, ಆಗಸ್ಟ್​ 19: ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯ (Pension Scheme) ಫಲಾನುಭವಿಗಳಿಗೆ ರಾಜ್ಯ ಸರ್ಕಾರ (Government) ಸಿಹಿಸುದ್ದಿ ನೀಡಿದೆ. ಪಿಂಚಣಿ ಪಡೆಯಲು ಇದ್ದ ವಾರ್ಷಿಕ ಆದಾಯ ಮಿತಿಯನ್ನು 32 ಸಾವಿರ ರೂ.ದಿಂದ ಬರೋಬ್ಬರಿ 1.20 ಲಕ್ಷ ರೂ. ಹೆಚ್ಚಿಸಿ ಕಂದಾಯ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಇದರಿಂದಾಗಿ ಆದಾಯ ಮಿತಿಯ ಕಾರಣಕ್ಕೆ ಪಿಂಚಣಿ ಸಿಗದೆ ಸಂಕಷ್ಟದಲ್ಲಿದ್ದ ಲಕ್ಷಾಂತರ ಬಡ ಕುಟುಂಬಗಳ ಬಹುಕಾಲದ ಆತಂಕಕ್ಕೆ ಕೊನೆಗೂ ಮುಕ್ತಿ ಸಿಕ್ಕಂತಾಗಿದೆ.

ಜನರ ಬಹುಕಾಲದ ಸಮಸ್ಯೆ ಬಗೆಹರಿಸಿದ್ದೇವೆ: ಡಿಸಿಎಂ ಡಾ.ಜಿ.ಪರಮೇಶ್ವರ್‌

ಈ ಕುರಿತಾಗಿ ಡಿಸಿಎಂ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್​ ಟ್ವೀಟ್ ಮಾಡಿದ್ದು, ‘ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ 32 ಸಾವಿರ ರೂ.ದಿಂದ 1,20 ಲಕ್ಷ ರೂ ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರೆಸುವಂತೆ ಆದೇಶ ಹೊರಡಿಸಿದ್ದೇವೆ’ ಎಂದಿದ್ದಾರೆ.

ಸಚಿವ ಡಾ.ಜಿ.ಪರಮೇಶ್ವರ್​ ಟ್ವೀಟ್

‘ವಿವಿಧ ಸಾಮಾಜಿಕ ಪಿಂಚಣಿಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಇತ್ಯಾದಿಗಳಿಗೆ 32 ಸಾವಿರ ರೂ. ಆದಾಯ ಮಿತಿ ಇತ್ತು. ಬಹಳ ದಿನಗಳಿಂದ ಇದುವೇ ಆದಾಯ ಮಿತಿಯಿದ್ದ ಕಾರಣ ಲಕ್ಷಾಂತರ ಜನರು ಪಿಂಚಣಿ ಸೌಲಭ್ಯದಿಂದ ಹೊರಗೆ ಉಳಿದಿದ್ದರು. ಅದನ್ನು 1,20 ಲಕ್ಷ ರೂ.ಗೆ ಏರಿಕೆ ಮಾಡುವ ಮೂಲಕ ಬಹುಕಾಲದ ಸಮಸ್ಯೆಯನ್ನು ಬಗೆಹರಿಸಿದ್ದೇವೆ’ ಎಂದು ಹೇಳಿದ್ದಾರೆ.

ಲಕ್ಷಾಂತರ ಜನರ ಪಿಂಚಣಿ ತಾತ್ಕಾಲಿಕವಾಗಿ ಸ್ಥಗಿತ

‘ಕುಟುಂಬ ದತ್ತಾಂಶದಿಂದ ಪಡೆದ ಮಾಹಿತಿಗಳನ್ನು ರಾಜ್ಯದಲ್ಲಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಮಾಹಿತಿಯೊಂದಿಗೆ ಸಂಯೋಜಿಸಿದಾಗ 23,14,544 ಫಲಾನುಭವಿಗಳು ಸಂದೇಹಾಸ್ಪದ ಎಂದು ಕಂಡುಬಂದಿದ್ದು, ಈ ಫಲಾನುಭವಿಗಳ ಭೌತಿಕ ಪರಿಶೀಲನೆಗಾಗಿ ಸಂಯೋಜನೆ ಮೊಬೈಲ್‌ ಆ್ಯಪ್ ಸಿದ್ಧಪಡಿಸಿ ಪರಿಶೀಲನೆ ನಡೆಸಲಾಗಿತ್ತು. ಈ ಸಮಯದಲ್ಲಿ ದಾಖಲಾತಿಗಳನ್ನು ಹಾಜರುಪಡಿಸದ, ನೀಡಿದ ವಿಳಾಸದಲ್ಲಿ ವಾಸವಿಲ್ಲದಿದ್ದ ಮತ್ತು ಆದಾಯ ದೃಢೀಕರಣ ಪತ್ರ ಹಾಜರುಪಡಿಸದಿದ್ದ 18,06,032 ಮಂದಿಯ ಪಿಂಚಣಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು’.

ಇದನ್ನೂ ಓದಿ: ಅಕೌಂಟ್​​​​ನಿಂದ ಹಣ ಕಡಿತ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ದಂಡ ವಿಧಿಸಿದ ಶಿವಮೊಗ್ಗ ಗ್ರಾಹಕ ಆಯೋಗ

‘ಗ್ರಾಮ ಆಡಳಿತಾಧಿಕಾರಿಗಳು ಸಂಯೋಜನೆ ಮೊಬೈಲ್‌ ಆ್ಯಪ್ ಮೂಲಕ ಪರಿಶೀಲಿಸಿದ ನಂತರ ಸಂಬಂಧಪಟ್ಟ ತಾಲೂಕು ತಹಶೀಲ್ದಾರರಿಂದ ನಿಯಮಾನುಸಾರ ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ನೀಡಲು ನಿರ್ದೇಶನ ನೀಡಲಾಗಿದೆ. ಆದರೆ, 23,14,544 ಸಂದೇಹಾಸ್ಪದ ಫಲಾನುಭವಿಗಳ ಭೌತಿಕ ಪರಿಶೀಲನೆ ಸಮಯದಲ್ಲಿ ಆದಾಯವು 32 ಸಾವಿರ ರೂ.ಕ್ಕಿಂತ ಹೆಚ್ಚಿರುವುದು ಕಂಡುಬಂತು. 23,14,544 ಮಂದಿಯ ಪೈಕಿ 32 ಸಾವಿರ ರೂ.ಕ್ಕಿಂತ ಹೆಚ್ಚು ಹಾಗೂ 1.20 ಲಕ್ಷ ರೂ.ಕ್ಕಿಂತ ಕಡಿಮೆ ವಾರ್ಷಿಕ ಆದಾಯ ಇರುವಂತಹ ಫಲಾನುಭವಿಗಳ ಪಿಂಚಣಿಯನ್ನು ಮುಂದುವರೆಸುವಂತೆ ಈ ಮೊದಲು ಸೂಚಿಸಿದ್ದೆ. ಅದರಂತೆ 23,14,544 ಮಂದಿಯ ಪೈಕಿ ಪರಿಶೀಲನೆಯ ನಂತರ 32 ಸಾವಿರ ರೂ.ಕ್ಕಿಂತ ಹೆಚ್ಚು ಹಾಗೂ 1.20 ಲಕ್ಷ ರೂ ಒಳಗಿನ ವಾರ್ಷಿಕ ಆದಾಯ ಮಿತಿಯನ್ನು ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರಿಸಲು ತೀರ್ಮಾನಿಸಿದ್ದೇವೆ’ ಎಂದು ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:58 pm, Wed, 19 August 26

Loading...
Unable to load recommendations.
Follow Us