ಸಂಚಾರಿ ನಿಯಮ ಉಲ್ಲಂಘನೆ ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸ್ ಇಲಾಖೆ ಅಲರ್ಟ್: ಅಧಿಕಾರಿ, ಸಿಬ್ಬಂದಿಗೆ ವಾರ್ನಿಂಗ್
Karnataka police traffic violations: ಪೊಲೀಸರೇ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಬೆನ್ನಲ್ಲೇ ಇದೀಗ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಡಿಜಿಪಿ ಪ್ರಭುಶಂಕರ್ ಅವರು ಖಡಕ್ ಸೂಚನೆ ನೀಡಿದ್ದಾರೆ.

ಬೆಂಗಳೂರು, ಆಗಸ್ಟ್ 01: ಜನಸಾಮಾನ್ಯರಿಗೆ ನಿಯಮಗಳ ಪಾಠ ಮಾಡುವ ಪೊಲೀಸರೇ ಸಂಚಾರಿ ನಿಯಮಗಳನ್ನು ಗಾಳಿಗೆ ತೂರುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಈ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ, ಸಂಚಾರಿ ನಿಯಮ (Traffic Rule) ಉಲ್ಲಂಘಿಸುವ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಕುರಿತು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಪೊಲೀಸ್ ಉಪ ಮಹಾನಿರೀಕ್ಷಕ ಪ್ರಭುಶಂಕರ್ ರಾಜ್ಯಾದ್ಯಂತ ಸುತ್ತೋಲೆ ಹೊರಡಿಸಿದ್ದಾರೆ.
ಸುತ್ತೋಲೆಯಲ್ಲಿ ಏನಿದೆ?
ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಡಿಐಜಿ ಖಡಕ್ ಸೂಚನೆ ನೀಡಿದ್ದಾರೆ. ಸಂಚಾರ ನಿಯಂತ್ರಣ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಅಪರಾಧಗಳನ್ನು ತಡೆಗಟ್ಟುವಲ್ಲಿ ಪೊಲೀಸ್ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
ಪೊಲೀಸ್ ನಿಯಮ ಉಲ್ಲಂಘಣೆ: ಸಾರ್ವಜನಿಕರಿಂದ ಆಕ್ರೋಶ
ಅಲ್ಲದೆ, ಸಂಚಾರ ನಿಯಂತ್ರಣ ಮಾಡುವುದು ಮತ್ತು ನಿಯಮ ಉಲ್ಲಂಘಿಸುವ ವಾಹನ ಸವಾರರ ವಿರುದ್ಧ ಕ್ರಮ ಕೈಗೊಳ್ಳುವ ಜವಾಬ್ದಾರಿಯನ್ನೂ ಹೊಂದಿದ್ದಾರೆ. ಆದರೆ, ಸ್ವತಃ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯೇ ಸಮವಸ್ತ್ರದಲ್ಲಿದ್ದಾಗ ಹೆಲ್ಮೆಟ್ ಇಲ್ಲದೆ ವಾಹನ ಚಾಲನೆ ಮಾಡುವುದು, ಚಾಲನೆ ವೇಳೆ ಮೊಬೈಲ್ ಬಳಕೆ, ಟ್ರಿಪಲ್ ರೈಡಿಂಗ್, ನೋ ಪಾರ್ಕಿಂಗ್ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲಿಸುವುದು, ಏಕಮಾರ್ಗದ ರಸ್ತೆಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವುದು ಹಾಗೂ ಕಾರು ಚಲಾಯಿಸುವಾಗ ಸೀಟ್ ಬೆಲ್ಟ್ ಧರಿಸದಿರುವುದು ಸೇರಿದಂತೆ ಹಲವಾರು ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಇದನ್ನೂ ಓದಿ: 319 KAS ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಅರ್ಜಿ ಸಲ್ಲಿಕೆ ಯಾವಾಗಿನಿಂದ? ಇಲ್ಲಿದೆ ವಿವರ
ಇನ್ನು ಈ ಘಟನೆಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮಾಧ್ಯಮಗಳಲ್ಲಿಯೂ ವರದಿಯಾಗುತ್ತಿವೆ. ಆದ್ದರಿಂದ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಪೊಲೀಸ್ ಇಲಾಖೆ ಸಂಚಾರ ವಿಭಾಗ ಸೇರಿದಂತೆ ಎಲ್ಲಾ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ವಾಹನ ಚಾಲನೆಯಲ್ಲಿ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಕ್ತ ಸೂಚನೆ ಹಾಗೂ ನಿರ್ದೇಶನ ನೀಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




