
ಬೆಂಗಳೂರು, ಮೇ 28: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಹೈಡ್ರಾಮಾ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಅವರ ರಾಜೀನಾಮೆ ಸಲ್ಲಿಕೆಗೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಇದೇ ಸಂದರ್ಭದಲ್ಲಿ ರಾಜ್ಯಪಾಲ (Karnataka Governor) ಥಾವರ್ ಚಂದ್ ಗೆಹ್ಲೋಟ್ ದಿಢೀರನೆ ಬೆಂಗಳೂರು ತೊರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ. ರಾಜಕೀಯ ವರ್ತುಲಗಳಲ್ಲಿ ಮೂಡಿದ್ದ ಈ ಗೊಂದಲಗಳ ನಡುವೆಯೇ, ರಾಜ್ಯಪಾಲರು ಕೇಂದ್ರ ಸ್ಥಾನದಲ್ಲಿ ಇಲ್ಲದಿದ್ದರೂ ಮುಖ್ಯಮಂತ್ರಿಗಳು ರಾಜೀನಾಮೆ ಪತ್ರವನ್ನು ಸಲ್ಲಿಸಲು ಸಂವಿಧಾನದಲ್ಲಿ ಅವಕಾಶವಿರುವುದು ಗೊತ್ತಾಗಿದೆ. ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ರಾಜಭವನದ (ಲೋಕಭವನ) ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲು ಗಂಭೀರ ಚಿಂತನೆ ನಡೆಸಿದ್ದಾರೆ.
ಸಾಂವಿಧಾನಿಕ ನಿಯಮಗಳ ಪ್ರಕಾರ, ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಪತ್ರವನ್ನು ವಿಶೇಷ ಕಾರ್ಯದರ್ಶಿಗೆ ಸಲ್ಲಿಸಿದರೆ, ಅವರು ರಾಜ್ಯಪಾಲರು ಇಂದೋರ್ ಪ್ರವಾಸ ಮುಗಿಸಿ ವಾಪಸ್ ಬಂದ ತಕ್ಷಣ ಅದನ್ನು ಅವರ ವಿವೇಚನೆಗೆ ಕಳುಹಿಸಿಕೊಡಲಿದ್ದಾರೆ. ಆದರೆ, ಕೇವಲ ಪತ್ರ ತಲುಪಿದ ತಕ್ಷಣ ರಾಜೀನಾಮೆ ಅಂಗೀಕಾರವಾಗುವುದಿಲ್ಲ. ರಾಜೀನಾಮೆ ಅಂಗೀಕರಿಸುವ ಮುನ್ನ ರಾಜ್ಯಪಾಲರು ಮುಖ್ಯಮಂತ್ರಿಗಳನ್ನು ಖುದ್ದಾಗಿ ಲೋಕಭವನಕ್ಕೆ ಕರೆಸಿ, ಮುಖಾಮುಖಿ ಮಾತುಕತೆ ನಡೆಸಿದ ಬಳಿಕವಷ್ಟೇ ಅದಕ್ಕೆ ಅಧಿಕೃತ ಮುದ್ರೆ ಒತ್ತಲಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಲೋಕಭವನಕ್ಕೆ ಭೇಟಿ ನೀಡಬೇಕಾಗುತ್ತದೆ.
ಮತ್ತೊಂದೆಡೆ, ಇಂದು ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಲೋಕಭವನಕ್ಕೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಆದಾಗ್ಯೂ, ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿರುವುದರಿಂದ ತುರ್ತು ಕರೆ ಬಂದರೆ ತಕ್ಷಣವೇ ಕರ್ತವ್ಯಕ್ಕೆ ಹಾಜರಾಗುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇಂದು ರಾತ್ರಿಯೊಳಗಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿಗೆ ಮರಳುವುದು ನಿಶ್ಚಿತ ಎನ್ನಲಾಗಿದೆ. ಏಕೆಂದರೆ ನಾಳೆ ಬೆಳಗ್ಗೆ 9 ಗಂಟೆಗೆ ಭಾರತದ ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಶಿಷ್ಟಾಚಾರದ (Protocol) ಪ್ರಕಾರ ಹೆಚ್ಎಎಲ್ (HAL) ವಿಮಾನ ನಿಲ್ದಾಣದಲ್ಲಿ ಉಪರಾಷ್ಟ್ರಪತಿಗಳನ್ನು ಸ್ವಾಗತಿಸಲು ರಾಜ್ಯಪಾಲರು ಖುದ್ದಾಗಿ ತೆರಳಬೇಕಾಗಿರುವುದರಿಂದ, ಇಂದು ಸಂಜೆ ಅಥವಾ ತಡರಾತ್ರಿಯೊಳಗೆ ಗೆಹ್ಲೋಟ್ ಅವರು ಬೆಂಗಳೂರಿಗೆ ಮರಳಲಿದ್ದಾರೆ. ಹೀಗಾಗಿ, ಇಂದು ಸಂಜೆಯೊಳಗೆ ಕರ್ನಾಟಕದ ರಾಜಕೀಯ ಬಿಕ್ಕಟ್ಟಿಗೆ ಒಂದು ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ