ನಾಯಕತ್ವ ಬದಲಾವಣೆಯ ಬಹುಚರ್ಚಿತ ಸಂಗತಿ ಮಧ್ಯೆ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ

ಸದ್ಯ ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಆಗುತ್ತಿರುವ ಕ್ಷಿಪ್ರ ಬೆಳವಣಿಗೆಗಳನ್ನ ನೋಡುತ್ತಿದ್ದರೆ, ಸಿಎಂ ಕುರ್ಚಿ ಫೈಟ್​ ಒಂದು ರೀತಿಯಲ್ಲಿ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಂತೆ ಕಾಣಿಸುತ್ತಿದೆ.ಯಾಕಂದ್ರೆ ಅದಕ್ಕೆ ತಕ್ಕಂತೆಯೇ ಹೈಕಮಾಂಡ್ ಮಟ್ಟದಲ್ಲಿ ಬೆಳವಣಿಗಳು ಕೂಡ ಆಗುತ್ತಿವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರಿಗೂ ಡೆಲ್ಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ಕೊಟ್ಟಿದೆ. ಹೀಗಾಗಿ ಇಂದು (ಮೇ 25) ರಾತ್ರಿ ಉಭಯ ನಾಯಕರು ಪ್ರತ್ಯೇಕವಾಗಿ ದೆಹಲಿಗೆ ತೆರಳಲಿದ್ದಾರೆ. ಇದರ ನಡುವೆ ಇದೀಗ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆಯಾಗಿದೆ.

ನಾಯಕತ್ವ ಬದಲಾವಣೆಯ ಬಹುಚರ್ಚಿತ ಸಂಗತಿ ಮಧ್ಯೆ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ
Siddaramaiah

Updated on: May 25, 2026 | 7:16 PM

ಬೆಂಗಳೂರು, ಮೇ 25): ರಾಜ್ಯದಿಂದ ಹಿಡಿದು ಹೈಕಮಾಂಡ್​ವರೆಗೂ ಕ್ಷಿಪ್ರ ಬೆಳವಣಿಗೆಗಳು ಆಗುತ್ತಿದೆ. ಇಷ್ಟು ದಿನ ನಡೆದ ಅಧಿಕಾರ ಹಂಚಿಕೆ ಪಗಡೆಯಾಟಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಸಿಎಂ ಕುರ್ಚಿ ಫೈಟ್ ಕಂಪ್ಲೀಟ್ ಹೈಕಮಾಂಡ್​ ಅಂಗಳಕ್ಕೆ ಶಿಫ್ಟ್ ಆಗಿದ್ದು, ಸಿಎಂ ಸಿದ್ದರಾಮಯ್ಯ,  (Siddaramaiah) ಡಿಕೆ ಶಿವಕುಮಾರ್  (DK Shivakumar)ಸೇರಿದಂತೆ ಸಚಿವರ ಹಾಗೂ ಕಾಂಗ್ರೆಸ್ (Congress) ಶಾಸಕರು ದೆಹಲಿಯತ್ತ ಮುಖ ಮಾಡಿದ್ದಾರೆ. ಹೀಗಾಗಿ ಸಹಜವಾಗಿಯೇ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಬ್ರೇಕ್ ಹಾಕುತ್ತಾ ಅಥವಾ ಅಧಿಕಾರ ಹಸ್ತಾಂತರ ಪ್ರಕ್ರಿಯೆಗೆ ಗ್ರೀನ್ ಸಿಗ್ನಲ್ ನೀಡುತ್ತಾ ಎನ್ನುವ ಕುತೂಹಲ ಇದ್ದೇ ಇದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆಯಾಗಿದೆ. ಹೌದು…ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್‌ ಹಾಗೂ ಸಿಎಂ ಸಿದ್ದರಾಮಯ್ಯ ಹೆಚ್ಚುವರಿ ಖಾತೆಗಳ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈ ಬಗ್ಗೆ ರಾಜಭವನದಿಂದ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.

ಮುಖ್ಯಾಂಶಗಳು

  • ಕರ್ನಾಟಕ ಕಾಂಗ್ರೆಸ್​​​ನಲ್ಲಿ ಗರಿಗೆದರಿ ರಾಜಕೀಯ ಬೆಳವಣಿಗೆಗಳು
  • ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಯತ್ತ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್
  • ಈ ಮಧ್ಯೆ ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ
  • ಹೆಚ್ಚುವರಿ ಖಾತೆ ಉಳಿಸಿಕೊಂಡ ಸಿಎಂ ಸಿದ್ದರಾಮಯ್ಯ
  • ದಿವಂಗತ ಸುಧಾರಕ್ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ವೆಂಕಟೇಶ್ ಹೆಗಲಿಗೆ

ಸುಧಾಕರ್ ಖಾತೆ ವೆಂಕಟೇಶ್ ಹೆಗಲಿಗೆ

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್‌ ಅವರು ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾಗಿದ್ದರು. ಹೀಗಾಗಿ ಈ ಇಲಾಖೆಯ ಹೊಣೆಯನ್ನು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್‌ (K Venkatesh) ಅವರಿಗೆ ಯೋಜನೆ ಮತ್ತು ಸಾಂಖ್ಯಿಕ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಇದನ್ನೂ ನೋಡಿ: ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಹಿಂದಿದೆ ರೋಚಕ ಸ್ಟೋರಿ

ಇನ್ನು ಕೆ.ಎನ್‌.ರಾಜಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಸಹಕಾರ ಇಲಾಖೆ ಮತ್ತು ಬಿ.ನಾಗೇಂದ್ರ ರಾಜೀನಾಮೆಯಿಂದ ತೆರವಾಗಿರುವ ಯುವ ಜನ ಕ್ರೀಡೆ ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಖಾತೆಯನ್ನು ಸಿಎಂ ಸಿದ್ದರಾಮಯ್ಯ ಅವರು ಯಾರಿಗೂ ಹಂಚಿಕೆ ಮಾಡದೆ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ.

ಸಿಎಂ ಬಳಿ ಇರುವ ಖಾತೆಗಳು ಯಾವುವು?

ಸಿಎಂ ಸಿದ್ದರಾಮಯ್ಯ ಅವರು ಪ್ರಸ್ತುತ ಹಣಕಾಸು, ಸಂಸದೀಯ ವ್ಯವಹಾರಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಗುಪ್ತಚರ ಇಲಾಖೆ, ವಾರ್ತಾ ಇಲಾಖೆ, ಯುವಜನ ಸೇವೆ ಮತ್ತು ಕ್ರೀಡೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಸಹಕಾರ ಖಾತೆ (ಕೃಷಿ ಮಾರುಕಟ್ಟೆ ಹೊರತುಪಡಿಸಿ) ಅನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಇದರೊಂದಿಗೆ ಇಲಾಖೆ ಹಂಚಿಕೆಯಾಗದ ಉಳಿದೆಲ್ಲಾ ಖಾತೆಗಳ ಜವಾಬ್ದಾರಿಯೂ ಸಿಎಂ ಅವರ ಬಳಿಯೇ ಮುಂದುವರಿಯಲಿದೆ.

ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂಬ ಚರ್ಚೆಗಳು ನಡೆಯುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರ ದೆಹಲಿಗೆ ಪ್ರವಾಸ ಮಾಡಲಿದ್ದಾರೆ. ಸಂಪುಟ ಪುನಾರಚನೆ ಆದಲ್ಲಿ ಕೆಲವು ಸಚಿವರನ್ನು ಕೈ ಬಿಡಲಾಗುವುದು ಎಂಬ ಚರ್ಚೆಗಳು ನಡೆಯುತ್ತಿದ್ದವು. ಈ ಸಂಭಾವ್ಯ ಪಟ್ಟಿಯಲ್ಲಿ ಕೆ ವೆಂಕಟೇಶ್ ಅವರ ಹೆಸರೂ ಇತ್ತು. ಆದರೆ ಇದೀಗ ವೆಂಕಟೇಶ್ ಅವರಿಗೆ ಹೆಚ್ಚುವರಿ ಖಾತೆ ನೀಡಲಾಗಿದೆ. ಈ ಮೂಲಕ ಸಚಿವ ಸಂಪುಟ ಪುನಾರಚನೆ ಆಗುತ್ತೋ ಇಲ್ವಾ ಎನ್ನುವ ಚರ್ಚೆಗೆ ಗ್ರಾಸವಾಗಿದೆ.

ಸದ್ಯ ಸಂಪುಟ ಪುನಾರಚನೆ ಆಗಬೇಕೆಂದು ಶಾಸಕರು ಒತ್ತಾಯಿಸಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಾತ್ರವಲ್ಲದೇ ಹಲವು ಶಾಸಕರು ದೆಹಲಿಯತ್ತ ಹೊರಟ್ಟಿದ್ದಾರೆ. ಒಂದು ವೇಳೆ ಸಂಪುಟ ಪುನಾರಚನೆ ಆಗದಿದ್ದರೇ ಸಚಿವಾಕಾಂಕ್ಷಿಗಳ ಮುಂದಿನ ನಡೆ ಏನು ಎಂಬುವುದು ಸಾಕಷ್ಟು ಕುತೂಹಲವನ್ನು ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:14 pm, Mon, 25 May 26

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us