ರಾಜ್ಯದಲ್ಲಿ ಇನ್ನೂ 5 ದಿನ ಮುಂದುವರಿಯಲಿದೆ ಭಾರೀ ಮಳೆ; ಅಲರ್ಟ್​​ ಘೋಷಿಸಿದ ಹವಾಮಾನ ಇಲಾಖೆ

ರಾಜ್ಯದಲ್ಲಿ ಇನ್ನೂ 5 ದಿನ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇನ್ನೂ 5 ದಿನ ಮುಂದುವರಿಯಲಿದೆ ಭಾರೀ ಮಳೆ; ಅಲರ್ಟ್​​ ಘೋಷಿಸಿದ ಹವಾಮಾನ ಇಲಾಖೆ
ಮಳೆ
Edited By:

Updated on: Aug 01, 2022 | 2:34 PM

ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನ ಮಳೆ (Rain) ಅಬ್ಬರ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಭಾರೀ ಮಳೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ (Meteorological Department) ಅಲರ್ಟ್ ಘೋಷಣೆ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ನಾಳೆಯಿಂದ ಮೂರು ದಿನ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆಗಸ್ಟ್ 3, 4ರಂದು ಹಾಗೂ ಮಂಡ್ಯ ಮತ್ತು ರಾಮನಗರದಲ್ಲಿ ಆಗಸ್ಟ್ 4 ರಂದು ಭಾರಿ ಮಳೆ ಬೀಳುವ ಮುನ್ಸೂಚನೆ ಹಿನ್ನೆಲೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಧಾರವಾಡ, ಗದಗ, ಬಳ್ಳಾರಿ, ಮಂಡ್ಯ, ರಾಮನಗರದಲ್ಲಿ ಆಗಸ್ಟ್ 2ರಿಂದ 4ರವೆರೆಗೆ ಹಾಗೂ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿಯಲ್ಲಿ ಆಗಸ್ಟ್ 4ರಂದು ಮಳೆಯಾಗಲಿದೆ. ಈ ಸಂಬಂಧ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಉಳಿದಂತೆ ರಾಜ್ಯದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ನಿನ್ನೆ (ಜುಲೈ 31) ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ನಿನ್ನೆ ಒಂದೇ ದಿನ ಕಲಬುರಗಿಯಲ್ಲಿ 90 ಮಿ.ಮೀ ಮಳೆಯಾಗಿದೆ. ಮುಂದಿನ ನಾಲ್ಕೈದು ದಿನ 115 ಮಿಮೀನಿಂದ 204 ಮಿಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಆಗಸ್ಟ್ 3 ರವರೆಗೆ ಸಾಧಾರಣಕ್ಕಿಂತ ಹೆಚ್ಚು ಮಳೆಯಾದರೆ, ಆಗಸ್ಟ್ 4ರಂದು ಭಾರಿ ಮಳೆ ಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ವಾಡಿಕೆಗಿಂತ ಹೆಚ್ಚು ಮಳೆ
ಬೆಂಗಳೂರಿನಲ್ಲಿ ಜೂನ್ 1ರಿಂದ ಜುಲೈ 31ರವರೆಗೆ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದಿದೆ. 165 ಮಿಮೀ ಮಳೆ ಬದಲಾಗಿ 297 ಮಿಮೀ ಮಳೆಯಾಗಿದ್ದು, ಶೇ. 79 ಹೆಚ್ಚು ಸುರಿದಿದೆ. ಶನಿವಾರ ರಾತ್ರಿ ಮತ್ತು ಭಾನುವಾರ ಸುರಿದ ಭಾರಿ ಮಳೆಯಿಂದ ಸಿಲಿಕಾನ್ ಸಿಟಿಯಲ್ಲಿ 10ಕ್ಕೂ ಹೆಚ್ಚು ಮರಗಳು ಉರುಳಿದ್ದು, 100ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಹೀಗಾಗಿ ಜನ ಎಚ್ಚರಿಕೆಯಿಂದ ಇರುವಂತೆ ರಾಜ್ಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಚಲಿಸುತ್ತಿದ್ದ ಬಿಎಂಟಿಸಿ ಬಸ್​ ಮೇಲೆ ಉರುಳಿಬಿದ್ದ ಮರ: ಬೆಂಗಳೂರಿನ ಎಂಜಿ ರಸ್ತೆಯ ಇಂಡಿಯಾ ಗ್ಯಾರೇಜ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್​ ಮೇಲೆ ಮರ ಉರುಳಿಬಿದ್ದಿದೆ. ಅದೃಷ್ಟವಶಾತ್ ಬಸ್​ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ. ಇಂದು ಬೆಳಗ್ಗೆ 9.15ರ ಸುಮಾರಿಗೆ ಶಿವಾಜಿನಗರದಿಂದ ವರ್ತೂರು ಕಡೆ ಬಸ್ ಹೊರಟಿತ್ತು.