
ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನಕಲಬುರಗಿ, ಯಾದಗಿರಿ, ಬೀದರ್, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ.
ಮಾಲೂರು, ಜಿಕೆವಿಕೆ, ಸೈದಾಪುರ, ಬೆಂಗಳೂರು ಎಚ್ಎಎಲ್, ಮುಧೋಳ, ಹುಲಸೂರು, ಬೆಂಗಳೂರು ನಗರ, ಗೋಪಾಲನಗರದಲ್ಲಿ ಮಳೆಯಾಗಿದೆ. ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಎಚ್ಎಎಲ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Bangalore rain: ಬೆಂಗಳೂರಿನಲ್ಲಿ ಇಂದು ಕೂಡ ಮುಂದುವರೆದ ಮಳೆ: ನಗರದ ಹಲವೆಡೆ ಸಾಧಾರಣ ವರ್ಷಧಾರೆ
ಮೇ 6ರ ಆಸುಪಾಸಿನಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮೋಚಾ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮೇ 7ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಅಮೆರಿಕದ ಹವಾಮಾನ ಮುನ್ಸೂಚನೆ ಘಟಕವಾದ ಗ್ಲೋಬಲ್ ಫೋರ್ಕಾಸ್ಟ್ ಸಿಸ್ಟಮ್ (GFS) ಮತ್ತು ಮಧ್ಯಮ-ಶ್ರೇಣಿಯ ಹವಾಮಾನ ಮುನ್ಸೂಚನೆಗಳ ಯುರೋಪಿಯನ್ ಕೇಂದ್ರ (ECMWF)ದ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ರಚನೆ ಕುರಿತ ವರದಿ ಬೆನ್ನಲ್ಲೇ ಐಎಂಡಿ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಐಎಂಡಿಯ ಹವಾಮಾನ ಶಾಸ್ತ್ರದ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಅವರು, ‘ಚಂಡಮಾರುತದ ಪರಿಚಲನೆ ಆರಂಭವಾದ 48 ಗಂಟೆಗಳಲ್ಲಿ ಅದರ ಪ್ರಭಾವದಿಂದಾಗಿ ಅದೇ ಪ್ರದೇಶದಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳಬಹುದು. ಕೆಲವು ಹವಾಮಾನ ಮುನ್ಸೂಚನೆ ಘಟಕಗಳು ಇದು ಸೈಕ್ಲೋನ್ ಎಂದು ಸೂಚಿಸುತ್ತಿವೆ. ನಾವು ತೀವ್ರ ನಿಗಾ ಇಡುತ್ತಿದ್ದೇವೆ. ಈ ಬಗ್ಗೆ ನಿಯಮಿತವಾಗಿ ಅಪ್ಡೇಟ್ಗಳನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ