ಕರ್ನಾಟಕದಾದ್ಯಂತ ಮುಂದುವರಿದ ಮಳೆ ಅಬ್ಬರ; ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ

ಕರ್ನಾಟಕದಾದ್ಯಂತ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆಯಿಂದ ಭಾರಿ ಅನಾಹುತ ಸಂಭವಿಸಿದೆ. ಅತ್ತ ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗಗಳಲ್ಲಿಯೂ ಮಳೆಯಾಗುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿವೆ. ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿವೆ. ರಾಜ್ಯದ ಎಲ್ಲೆಲ್ಲಿ ಮಳೆ ಪರಿಸ್ಥಿತಿ ಹೇಗಿದೆ? ಮುಂದಿನ ಕೆಲವು ದಿನಗಳು ಹವಾಮಾನ ಇಲಾಖೆ ಯಾವ ಜಿಲ್ಲೆಗೆ ಯಾವ ಅಲರ್ಟ್ ನೀಡಿದೆ ಎಂಬ ವರದಿ ಇಲ್ಲಿದೆ.

ಕರ್ನಾಟಕದಾದ್ಯಂತ ಮುಂದುವರಿದ ಮಳೆ ಅಬ್ಬರ; ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ
ಧುಮ್ಮಿಕ್ಕಿ ಹರಿಯುತ್ತಿರುವ ಜೋಗ ಜಲಪಾತ
Edited By:

Updated on: Jun 28, 2024 | 6:55 AM

ಬೆಂಗಳೂರು, ಜೂನ್ 28: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದೆ. ರಣ ಮಳೆಗೆ ಜೀವಗಳು ಅಪಾಯದಲ್ಲಿ ಸಿಲುಕುತ್ತಿದ್ದು ಜನರು ತತ್ತರಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಅನಾಹುತಗಳಿಂದ ಎರಡೇ ದಿನಗಳಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಉಳ್ಳಾಲ ತಾಲೂಕಿನ ಕುತ್ತಾರುವಿನ ಮದನಿನಗರದಲ್ಲಿ ಮನೆ ಕುಸಿದು ನಾಲ್ವರು ಮೃತಪಟ್ಟಿದ್ದರೆ, ಮಂಗಳೂರು ನಗರದ ರೋಸಾರಿಯೊ ಶಾಲೆ ಹಿಂಭಾಗದಲ್ಲಿ ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ್ದಾರೆ. ಗುರುವಾರ ಸಂಜೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ಮಳೆ ನೀರಿನಲ್ಲಿ ವಿದ್ಯುತ್‌ ಪ್ರವಹಿಸಿ 20 ವರ್ಷದ ಯುವತಿ ಪ್ರತೀಕ್ಷಾ ಶೆಟ್ಟಿ ಅಸುನೀಗಿದ್ದಾಳೆ.

ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಇಂದೂ ರಜೆ

ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಶುಕ್ರವಾರ ಕೂಡಾ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ. ಏತನ್ಮಧ್ಯೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನದಲ್ಲಿ ಭಾರಿ ಮಳೆಗೆ ನೆಲ ಶಕ್ತಿ ಕಳೆದುಕೊಂಡಿದೆ. ಮನೆಯ ಆವರಣದಲ್ಲಿದ್ದ ಬಾವಿ ಕಣ್ಣೆದುರಿಗೇ ಕುಸಿದು ಹೋಗಿದೆ. ಬಾವಿ ಕುಸಿಯುವ ದೃಶ್ಯ ಮೊಬೈಲ್‌ ಫೋನ್‌ನಲ್ಲಿ ಸೆರೆಯಾಗಿದೆ.

ಜೋಗ ಭೋರ್ಗರೆತ, ಆಗುಂಬೆಗೆ ಭಾರಿ ವಾಹನಗಳ ನಿರ್ಬಂಧ

ವಿಶ್ವವಿಖ್ಯಾತ ಜೋಗ ಜಲಪಾತ ಭೋರ್ಗರೆದು ಧುಮ್ಮಿಕ್ಕುತ್ತಿದೆ. ಶಿವಮೊಗ್ಗ ಸುತ್ತಮುತ್ತಲೂ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜೋಗ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಇನ್ನು, ತೀರ್ಥಹಳ್ಳಿ ಭಾಗದಲ್ಲಿ ವರ್ಷಧಾರೆಯಿಂದಾಗಿ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಆಗುಂಬೆಯಲ್ಲಿ ಭೂಕುಸಿತ ಭೀತಿ ಇರುವುದರಿಂದ ಸೆಪ್ಟೆಂಬರ್ 15ರವರೆಗೆ ವಾಹನ ಸಂಚಾರ ಬಂದ್‌ ಮಾಡಲಾಗಿದೆ.

ತುಂಗಭದ್ರಾ ಡ್ಯಾಂ ತುಂಬಿರುವುದು

ಕೊಚ್ಚಿ ಹೋಯ್ತು ಕಾರು; ಇಬ್ಬರ ಜೀವಕ್ಕೆ ಮರವೇ ಆಸರೆ

ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಇಬ್ಬರು ಪವಾಡ ಸದೃಶ ರೀತಿಯಲ್ಲಿ ಬಚಾವ್ ಆಗಿದ್ದಾರೆ.

ಘಟ್ಟಪ್ರದೇಶದಲ್ಲಿನ ಮಳೆಗೆ ಕುಮಾಧಾರಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ಕುಕ್ಕೆ ಸುಬ್ರಹ್ಮಣ್ಯ ಬಳಿ ಸ್ನಾನಘಟ್ಟ, ಕಿಂಡಿ ಆಣೆಕಟ್ಟು ಸಂಪೂರ್ಣ ಮುಳುಗಡೆ ಆಗಿದೆ. ನೇತ್ರಾವತಿ ನದಿ ಕೂಡಾ ಮೈದುಂಬಿ ಹರಿಯುತ್ತಿದೆ. ಕಾವೇರಿ ನದಿ ಉಕ್ಕಿ ಹರೀತಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತವಾಗಿದೆ. ಪವಿತ್ರ ಸ್ನಾನಘಟ್ಟ ಮುಳುಗಿ, ಮುಖ್ಯ ದ್ವಾರದವೆರಗೂ ನೀರು ತಲುಪಿದೆ. ಭಕ್ತರು ಪುಣ್ಯ ಸ್ನಾನ ಮಾಡಲಾಗದೆ ಪರದಾಡ್ತಿದ್ದಾರೆ. ಪಿಂಡ ಪ್ರಧಾನಕ್ಕೂ ತೊಂದರೆ ಉಂಟಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಬಳಿ ಭದ್ರಾನದಿ ಮೈತುಂಬಿದೆ. ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಗೆ 4-5 ಅಡಿಯಷ್ಟೇ ಬಾಕಿ ಇದೆ.

ಕಾಸರಗೋಡಿನ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತಗೊಂಡಿರುವುದು

ಅರಬ್ಬಿ ಸಮುದ್ರದಲ್ಲಿ ರಕ್ಕಸಗಾತ್ರದ ಅಲೆಗಳು ಅಪ್ಪಳಿಸುತ್ತಿದ್ದು, ಕ್ಷಣಕ್ಷಣಕ್ಕೂ ಕಡಲಕೊರತೆ ಹೆಚ್ಚಾಗುತ್ತಿದೆ. ಮೀನುಗಾರರೇ ತಡೆಗೋಡೆ ಹಾಕುತ್ತಿದ್ದಾರೆ. ಇನ್ನು ಕಾರವಾರದ ದೇವಬಾಗ್ ಕಡಲತೀರದಲ್ಲಿ ಕಡಲಕೊರೆತ ಹೆಚ್ಚಾಗಿದ್ದು, ರೆಸಾರ್ಟ್‌ನ ನಾಲ್ಕು ಕಾಟೇಜ್‌ಗಳಿಗೆ ಹಾನಿಯಾಗಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ವರುಣಾರ್ಭಟಕ್ಕೆ ನಲುಗಿದ ಜನ: ಎಲ್ಲೆಲ್ಲಿ ಏನಾಗಿದೆ?

ರಾಜ್ಯದಲ್ಲಿ ಇನ್ನೂ 4 ದಿನ ಮಳೆಯಾಟ ಮುಂದುವರೆಯಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us