Karnataka Rains: ಕರ್ನಾಟಕದಲ್ಲಿ ಮಳೆ ಅಬ್ಬರ; ಈ ಜಿಲ್ಲೆಗೆ ರೆಡ್ ಅಲರ್ಟ್, ಇಂದು ಸಹ ಶಾಲಾ ಕಾಲೇಜುಗಳಿಗೆ ರಜೆ
ಕರ್ನಾಟಕದಾದ್ಯಂತ ಭಾರಿ ಮಳೆ ಮುಂದುವರಿದಿದ್ದು, ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಹಲವು ಜಿಲ್ಲೆಗಳಲ್ಲಿ ಮನೆ, ತೋಟಗಳಿಗೆ ನೀರು ನುಗ್ಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಜುಲೈ 31ರವರೆಗೂ ಭಾರೀ ಮಳೆಯ ಮುನ್ಸೂಚನೆ ಇದೆ.

ಬೆಂಗಳೂರು, ಜುಲೈ 26: ಕರ್ನಾಟಕದ (Karnataka) ಹಲವೆಡೆ ಮಳೆ (Rain) ಅಬ್ಬರ ಮುಂದುವರಿದಿದೆ. ರಣಭೀಕರ ಮಳೆಯಿಂದಾಗಿ ಮನೆ, ತೋಟಗಳಿಗೆ ನೀರು ನುಗ್ಗುವ ಮೂಲಕ ಅವಾಂತರಗಳು ಸೃಷ್ಟಿಯಾಗಿವೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಹ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಾಂತ ಇಂದು ಮತ್ತು ನಾಳೆ ರೆಡ್ ಅಲರ್ಟ್ ನೀಡಲಾಗಿದ್ದು, ಜುಲೈ 30ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದಾದ್ಯಂತ ಜುಲೈ 31ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮುಂದಿನ ಐದಾರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Karnataka Rains: ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್, ಕರ್ನಾಟಕದ ಈ ಜಿಲ್ಲೆಗಳಲ್ಲಿ ಜು. 31ರವರೆಗೂ ಭಾರಿ ಮಳೆ
ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ಭಾಗದಲ್ಲಿ 120 ಮಿಲೀ ಮೀಟರ್ಗೂ ಹೆಚ್ಚು ಮಳೆ ಸುರಿದಿದೆ. ಶರಾವತಿ, ಅಘನಾಶಿನಿ, ಗುಂಡ್ಲಬಾಳ ನದಿಗಳು ಅಪಾಯ ಮಟ್ಟ ಮೀರಿ ಹರಿದು ನದಿ ಪಾತ್ರದ ಗ್ರಾಮಗಳು ಜಲಾವೃತವಾಗಿವೆ. ಕುಮಟಾ, ಹೊನ್ನಾವರ, ಸಿದ್ದಾಪುರದಲ್ಲಿ ಮನೆ, ತೋಟಕ್ಕೆ ನೀರು ನುಗ್ಗಿ ಆಹಾರ ಪದಾರ್ಥಗಳು ನೀರು ಪಾಲಾಗಿದೆ.
ಶಾಲಾ ಕಾಲೇಜುಗಳಿಗೆ ಎಲ್ಲೆಲ್ಲಿ ರಜೆ?
ಉತ್ತರ ಕನ್ನಡ ಜಿಲ್ಲೆಯ 7 ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಯಿಡಾ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆಯಾಗಿದ್ದರೆ, ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ತಾಲೂಕಿನ ಶಾಲಾ ಕಾಲೇಜಿಗೆ ರಜೆ ನೀಡಲಾಗಿದೆ.
ಇನ್ನು ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಷ್ಟೇ ಅಲ್ಲ ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, N.R.ಪುರ ತಾಲೂಕಿನ ಶಾಲೆಗಳಿಗೂ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ನಾಳೆಯ ಹವಾಮಾನ: ಮುಂದುವರೆದ ವರುಣಾರ್ಭಟ, ಈ ಜಿಲ್ಲೆಗಳಲ್ಲಿ ಶಾಲೆ-ಕಾಲೇಜ್ಗಳಿಗೆ ರಜೆ
ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿದೆ. ಶೀತ ವಾತಾವರಣ ಹಿನ್ನೆಲೆ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ನೀಡಿ ಡಿಸಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಈ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ಸೂಚಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:04 am, Sat, 26 July 25








