
ಬೆಂಗಳೂರು, ಆಗಸ್ಟ್ 6: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ (Monsoon Rain) ಪ್ರಮಾಣ ತಗ್ಗಿರುವ ಹಿನ್ನೆಲೆಯಲ್ಲಿ ಪ್ರಮುಖ ಜಲಾಶಯಗಳಿಗೆ ಒಳಹರಿವು (Dam Water Level) ಕಡಿಮೆಯಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯಕ್ಕೆ ಬುಧವಾರ ಬೆಳಗ್ಗೆ 19,275 ಕ್ಯೂಸೆಕ್ ಇದ್ದ ಒಳಹರಿವು ಇಂದು 10,176 ಕ್ಯೂಸೆಕ್ಗೆ ಇಳಿಕೆಯಾಗಿದೆ. 124.80 ಅಡಿ ಗರಿಷ್ಠ ಮಟ್ಟದ ಕೆಆರ್ಎಸ್ ಡ್ಯಾಂನಲ್ಲಿ ಸದ್ಯ 105.87 ಅಡಿ ನೀರು ಸಂಗ್ರಹವಾಗಿದೆ. ಕುಡಿಯುವ ಉದ್ದೇಶಕ್ಕಾಗಿ ಜಲಾಶಯದಿಂದ 2,015 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಸದ್ಯ 27.770 ಟಿಎಂಸಿ ನೀರು ಸಂಗ್ರಹವಿದೆ.
ಮೈಸೂರು ಭಾಗದಲ್ಲೂ ಕಬಿನಿ ಜಲಾಶಯದ ಒಳಹರಿವು ಕಡಿಮೆಯಾಗಿದೆ. ಸದ್ಯ ಜಲಾಶಯಕ್ಕೆ 13,969 ಕ್ಯೂಸೆಕ್ ಒಳಹರಿವು ಇದ್ದು, ಹೊರಹರಿವನ್ನು 7,000 ಕ್ಯೂಸೆಕ್ಗೆ ಇಳಿಸಲಾಗಿದೆ. ಜಲಾಶಯದಲ್ಲಿ 81.82 ಅಡಿ ನೀರಿನ ಮಟ್ಟವಿದ್ದು, 18.13 ಟಿಎಂಸಿ ನೀರು ಸಂಗ್ರಹವಾಗಿದೆ. ಒಳಹರಿವು ಕಡಿಮೆಯಾದ ಹಿನ್ನೆಲೆಯಲ್ಲಿ ನದಿಗೆ ನೀರು ಬಿಡುವ ಪ್ರಮಾಣವನ್ನು 27,000 ಕ್ಯೂಸೆಕ್ನಿಂದ 7,000 ಕ್ಯೂಸೆಕ್ಗೆ ಇಳಿಸಲಾಗಿದೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಬಸವಸಾಗರ ಜಲಾಶಯಕ್ಕೆ 1.50 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, 1.45 ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿಯಲ್ಲಿರುವ ಜಲಾಶಯದಲ್ಲಿ ಸದ್ಯ 2858.15 ಅಡಿ ನೀರಿನ ಮಟ್ಟವಿದೆ. ಜಲಾಶಯಕ್ಕೆ 3,562 ಕ್ಯೂಸೆಕ್ ಒಳಹರಿವು ಇದ್ದು, ನದಿಗೆ 3,883 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಹಾಸನ ತಾಲೂಕಿನ ಗೊರೂರು ಸಮೀಪದ ಹೇಮಾವತಿ ಜಲಾಶಯದಲ್ಲಿ ಸದ್ಯ 2913.36 ಅಡಿ ನೀರಿನ ಮಟ್ಟವಿದ್ದು, 29.318 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 6,758 ಕ್ಯೂಸೆಕ್ ಒಳಹರಿವು ಇದೆ. 500 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ 2921.92 ಅಡಿ ನೀರಿನ ಮಟ್ಟವಿದ್ದು, 37.026 ಟಿಎಂಸಿ ನೀರು ಸಂಗ್ರಹವಾಗಿತ್ತು. ಆಗ 7,282 ಕ್ಯೂಸೆಕ್ ಒಳಹರಿವು, ನದಿಗೆ 2,400 ಕ್ಯೂಸೆಕ್ ಹಾಗೂ ಕಾಲುವೆಗೆ 4,600 ಕ್ಯೂಸೆಕ್ ನೀರು ಹೊರಹರಿವು ಇತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:35 am, Thu, 6 August 26