ರೂ 100ಕ್ಕೆ ಒಂದು ಟನ್ ಮರಳು, 10 ಲಕ್ಷದೊಳಗಿನ ಮನೆ ನಿರ್ಮಾಣಕ್ಕೆ ಸರ್ಕಾರದ ಸಹಾಯಹಸ್ತ: ಗಣಿ ಸಚಿವ ಮುರುಗೇಶ ನಿರಾಣಿ
ಉಚಿತ ಮರಳು ನೀತಿ ಜೊತೆಗೆ ಏಪ್ರಿಲ್ 30ರೊಳಗೆ ಹೊಸ ಮರಳು ನೀತಿಯನ್ನು ಜಾರಿ ಮಾಡಲಿದ್ದೇವೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಕಟ್ಟಿಕೊಳ್ಳುವವರಿಗೆ ಇದರಿಂದ ಅನುಕೂಲವಾಗಲಿದೆ. ಹಳ್ಳ-ಕೊಳ್ಳ, ಚೆಕ್ಡ್ಯಾಂ, ಝರಿಗಳಲ್ಲಿ ಉಚಿತವಾಗಿ ಮರಳು ತೆಗೆದು ಎತ್ತಿನ ಗಾಡಿ ಮೂಲಕ ಸಾಗಾಣಿಕೆಗೆ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದರು.

ಕಲಬುರ್ಗಿ: ಜನಸಾಮಾನ್ಯರು ಹಾಗೂ ಕಡುಬಡವರು ಕಡಿಮೆ ದರದಲ್ಲಿ ಮನೆಗಳನ್ನು ಕಟ್ಟಿಸಿಕೊಳ್ಳಲು ಅನುಕೂಲವಾಗುವಂತೆ ಇದೇ 30ರಿಂದ ರಾಜ್ಯಾದ್ಯಂತ ಉಚಿತ ಮರಳು ನೀತಿ ಜಾರಿಗೆ ಬರಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಇಂದು ಪ್ರಕಟಿಸಿದರು. ನಗರದಲ್ಲಿ ಸಚಿವರಾದ ಆನಂದ್ ಸಿಂಗ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ವಿತರಣೆ ಮಾಡಬೇಕೆಂಬುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಹೀಗಾಗಿ ಇದೇ 30ರಿಂದ ಅನ್ವಯವಾಗುವಂತೆ ಉಚಿತ ಮರಳು ನೀತಿ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.
₹ 10 ಹತ್ತು ಲಕ್ಷದ ಒಳಗಿನ ಮನೆ ನಿರ್ಮಾಣಕ್ಕೆ ₹ 100ಕ್ಕೆ ಒಂದು ಟನ್ ಮರಳು ವಿತರಣೆ ಮಾಡಲಿದ್ದೇವೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಕಟ್ಟಿಕೊಳ್ಳುವವರಿಗೆ ಇದರಿಂದ ಅನುಕೂಲವಾಗಲಿದೆ. ಹಳ್ಳ-ಕೊಳ್ಳ, ಚೆಕ್ಡ್ಯಾಂ, ಝರಿಗಳಲ್ಲಿ ಉಚಿತವಾಗಿ ಮರಳು ತೆಗೆದು ಎತ್ತಿನ ಗಾಡಿ ಮೂಲಕ ಸಾಗಾಣಿಕೆಗೆ ಅವಕಾಶ ನೀಡಲಾಗುವುದು. ಉಚಿತ ಮರಳು ನೀತಿ ಜೊತೆಗೆ ಏಪ್ರಿಲ್ 30ರೊಳಗೆ ಹೊಸ ಮರಳು ನೀತಿಯನ್ನು ಜಾರಿ ಮಾಡಲಿದ್ದೇವೆ. ಈಗಾಗಲೇ ಮರಳು ನೀತಿ ಸಿದ್ದವಾಗಿದ್ದು, ದೇಶಕ್ಕೆ ಮಾದರಿಯಾಗುವಂತಹ ನೀತಿ ಇದಾಗಲಿದೆ. ಅಕ್ರಮ ಮರಳುಗಾರಿಕೆ ತಡೆಗಟ್ಟುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದ್ದು, ಬೇರೆ ರಾಜ್ಯಗಳು ಕೂಡ ಕರ್ನಾಟಕ ಮಾದರಿಯನ್ನು ಅನುಸರಿಸಲಿದ್ದಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಬಿಜೆಪಿ ಗೆಲ್ಲುವ ವಿಶ್ವಾಸ ಏಪ್ರಿಲ್ 17ರಂದು ನಡೆಯಲಿರುವ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ದಾಖಲೆ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿ ಲೋಕಸಭೆ,ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ದಾಖಲೆ ಮತಗಳ ಅಂತರದಿಂದ ಗೆಲ್ಲಲಿದ್ದಾರೆ. ಕಾಂಗ್ರೆಸ್ ಏನೇ ಆರೋಪ ಮಾಡಿದರೂ ಜನರು ನಂಬುವುದಿಲ್ಲ. ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಸಾರಿಗೆ ಇಲಾಖೆ ಸಿಬ್ಬಂದಿಗಳು ಕಳೆದ 5 ದಿನಗಳಿಂದ ನಡೆಸುತ್ತಿರುವ ಮುಷ್ಕರ ಕಾನೂನು ಬಾಹಿರವಾಗಿದೆ. ಇದಕ್ಕೆ ಯಾವುದೇ ರೀತಿಯ ಕಾನೂನಿನ ಮಾನ್ಯತೆ ಇಲ್ಲ. ಆರನೇ ವೇತನ ಆಯೋಗವನ್ನು ಜಾರಿ ಮಾಡಲು ಯಾವುದೇ ಕಾರಣಕ್ಕೂ ಆಗುವುದಿಲ್ಲ. ಈ ಬಗ್ಗೆ ಈಗಾಗಲೇ ಸಿಎಂ ಯಡಿಯೂರಪ್ಪ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ ಎಂದು ಅವರು ಹೇಳಿದರು.
ಆದರೂ ಕೆಲವರು ರಾಜಕೀಯ ಪ್ರೇರಿತವಾಗಿ ಹೋರಾಟ ಮಾಡುವುದು ಸರಿಯಲ್ಲ. ಕಾರ್ಮಿಕರ ಒಂಬತ್ತು ಬೇಡಿಕೆಗಳಲ್ಲಿ ಎಂಟು ಬೇಡಿಕೆಗಳನ್ನು ಸರಕಾರ ಈಡೇರಿಸಿದೆ. ಇದನ್ನು ಅರ್ಥ ಮಾಡಿಕೊಂಡು ಸಾರಿಗೆ ಸಿಬ್ಬಂದಿ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕೆಂದು ಮನವಿ ಮಾಡಿದರು. ಉಪಚುನಾವಣೆ ನಂತರ ವೇತನ ಹೆಚ್ಚಳ ಮಾಡುವ ಸ್ಪಷ್ಟ ಭರವಸೆ ನೀಡಲಾಗಿದೆ. ನೌಕರರು ಕೂಡಲೇ ಪ್ರತಿಭಟನೆ ಕೈ ಬಿಟ್ಟು ಸರ್ಕಾರದ ಜೊತೆ ಮಾತುಕತೆಗೆ ಮುಂದಾಗಬೇಕು. ಪ್ರತಿಭಟನೆ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಕಾರ್ಮಿಕರು ಹೋರಾಟಕ್ಕೆ ಇಳಿಯುವಾಗ ರಾಜಕೀಯ ಪ್ರೇರಿತ ವ್ಯಕ್ತಿ ಇಟ್ಟುಕೊಂಡು ಹೋಗುವುದು ಸರಿಯಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಆಕ್ಷೇಪಿಸಿದರು.
ಇದನ್ನೂ ಓದಿ: ಶೀಘ್ರದಲ್ಲೇ ಮರಳು ನೀತಿ: ಬಡವರಿಗೆ ಟನ್ಗೆ 100ರಿಂದ 200 ರೂ. ದರದಲ್ಲಿ ಮರಳು
ಇದನ್ನೂ ಓದಿ: 10 ಲಕ್ಷಕ್ಕಿಂತ ಕಡಿಮೆ ವೆಚ್ಚದಲ್ಲಿ ಮನೆ ಕಟ್ಟೋರಿಗೆ ಉಚಿತ ಮರಳು ಪೂರೈಕೆ ಬಗ್ಗೆ ಚಿಂತನೆ -ಸಚಿವ ನಿರಾಣಿ
( Karnataka Sand policy will introduced by April 30 gives 1 ton sand to 100 rs says Karnataka minister Murugesh Nirani)