ಶಿಕ್ಷಣ ಇಲಾಖೆ ಎಡವಟ್ಟಿನಿಂದ ಫಲಿತಾಂಶ ಕುಸಿತದ ಭೀತಿಯಲ್ಲಿ SSLC ವಿದ್ಯಾರ್ಥಿಗಳು! ಸರ್ಕಾರದ ವಿರುದ್ಧ ಪೋಷಕರ ಆಕ್ರೋಶ

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಅಂಕಗಳನ್ನೇ ನೀಡುವಂತೆ ಆದೇಶಿಸಿದೆ. ಆದರೆ, ಸರ್ಕಾರ ಅಂತಿಮ ಕ್ಷಣದಲ್ಲಿ ಗ್ರೇಡ್ ಘೋಷಣೆ ಮಾಡಿದ್ದರಿಂದ ವಿದ್ಯಾರ್ಥಿಗಳು ತೃತೀಯ ಭಾಷೆ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಇದರಿಂದ ಫಲಿತಾಂಶ ಕುಸಿತದ ಭೀತಿ ಎದುರಾಗಿದ್ದು, ಇದಕ್ಕೆ ಶಿಕ್ಷಣ ಇಲಾಖೆಯ ಬೇಜವಾಬ್ದಾರಿ ನಡೆಯೇ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ಇಲಾಖೆ ಎಡವಟ್ಟಿನಿಂದ ಫಲಿತಾಂಶ ಕುಸಿತದ ಭೀತಿಯಲ್ಲಿ SSLC ವಿದ್ಯಾರ್ಥಿಗಳು! ಸರ್ಕಾರದ ವಿರುದ್ಧ ಪೋಷಕರ ಆಕ್ರೋಶ
ಸಾಂದರ್ಭಿಕ ಚಿತ್ರ
Image Credit source: TV9 Network
Edited By:

Updated on: Apr 17, 2026 | 12:21 PM

ಬೆಂಗಳೂರು, ಏಪ್ರಿಲ್ 17: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Exam) ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಶಿಕ್ಷಣ ಇಲಾಖೆಯ ಗೊಂದಲದ ನಿರ್ಧಾರಗಳಿಗೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹಿಂದಿ (Hindi) ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ವಿದ್ಯಾರ್ಥಿಗಳಿಗೆ ಅಂಕಗಳನ್ನೇ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ಆದರೆ, ಇದುವೇ ಈಗ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಕಾರಣವಾಗಿದೆ. ಶಿಕ್ಷಣ ಇಲಾಖೆ ಪರೀಕ್ಷೆಗೆ ಕೆಲವೇ ದಿನಗಳಿರುವಾಗ ಇಂಥ ಗೊಂದಲದ ನಿರ್ಧಾರ ಪ್ರಕಟಿಸಿದ್ದರಿಂದ ವಿದ್ಯಾರ್ಥಿಗಳು ಆ ಪರೀಕ್ಷೆಯನ್ನು ಹಗುರವಾಗಿ ಪರಿಗಣಿಸಿದ್ದಾರೆ. ಈಗ ಕೋರ್ಟ್ ಅಂಕ ನೀಡಲು ಆದೇಶಿಸಿದ್ದರಿಂದ ಫಲಿತಾಂಶದಲ್ಲಿ ಕುಸಿತ ಆಗಬಹುದು ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಗೊಂದಲ ಸೃಷ್ಟಿಸಿದ ಸರ್ಕಾರದ ನಡೆ

ಪರೀಕ್ಷೆ ಆರಂಭವಾಗುವ ಕೇವಲ ಎರಡು ದಿನಗಳ ಮೊದಲು ಶಿಕ್ಷಣ ಸಚಿವರು ಪತ್ರಿಕಾಗೋಷ್ಠಿ ನಡೆಸಿ, ತೃತೀಯ ಭಾಷೆಗೆ ಅಂಕಗಳ ಬದಲಾಗಿ ಗ್ರೇಡ್ ವ್ಯವಸ್ಥೆ ಜಾರಿಗೆ ತರುವುದಾಗಿ ಘೋಷಿಸಿದ್ದರು. ಸರ್ಕಾರದ ಈ ಆಕಸ್ಮಿಕ ನಿರ್ಧಾರದಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ‘ಗ್ರೇಡ್ ತಾನೇ ಬರುವುದು’ ಎಂಬ ಉದಾಸೀನತೆಯಿಂದ ಅನೇಕರು ಪರೀಕ್ಷೆ ಬರೆದಿದ್ದರು. ಆದರೆ ಈಗ ಕೋರ್ಟ್ ಅಂಕ ನೀಡುವಂತೆ ಆದೇಶಿಸಿರುವುದು ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಫಲಿತಾಂಶ ಕುಸಿತದ ಆತಂಕ ಮೂಡಿಸಿದೆ.

ಪೋಷಕರು ಮತ್ತು ಖಾಸಗಿ ಶಾಲೆಗಳ ಆಕ್ರೋಶ

ಶಿಕ್ಷಣ ಇಲಾಖೆಯ ಈ ಚೆಲ್ಲಾಟದ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ (KAMS) ಮತ್ತು ಪೋಷಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶೈಕ್ಷಣಿಕ ವರ್ಷ ಮುಗಿಯುವ ಹಂತದಲ್ಲಿ ಇಂತಹ ನಿಯಮಗಳನ್ನು ಜಾರಿಗೆ ತರುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ. ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳನ್ನು ಪದೇ ಪದೇ ಗೊಂದಲಕ್ಕೆ ದೂಡುತ್ತಿರುವುದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೃತೀಯ ಭಾಷೆ ಗ್ರೇಡ್ ವ್ಯವಸ್ಥೆ ವಿವಾದದ ಹಿನ್ನೆಲೆ

ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಮೇಲಿನ ಪರೀಕ್ಷಾ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಎಸ್‌ಎಸ್‌ಎಲ್‌ಸಿ ಹಿಂದಿ ಹಾಗೂ ಇತರೆ ತೃತೀಯ ಭಾಷಾ ವಿಷಯಗಳಿಗೆ ಅಂಕಗಳ ಬದಲಾಗಿ ಗ್ರೇಡ್ ನೀಡುವ ಬಗ್ಗೆ ಘೋಷಣೆ ಮಾಡಿತ್ತು. ಅಂತಿಮ ಕ್ಷಣದಲ್ಲಿ ತಂದ ಈ ಬದಲಾವಣೆ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು.

ಇದನ್ನೂ ಓದಿ: SSLC ಪರೀಕ್ಷೆಯಲ್ಲಿ ಹಿಂದಿಗೆ ಗ್ರೇಡ್ ನೀಡಲು ಹೊರಟಿದ್ದ ಸರ್ಕಾರಕ್ಕೆ ತೀವ್ರ ಮುಖಭಂಗ: ಅಂಕ ನೀಡಲು ಹೈಕೋರ್ಟ್ ಆದೇಶ

ಪರೀಕ್ಷೆಯ ಮಧ್ಯದಲ್ಲಿ ಅಥವಾ ಫಲಿತಾಂಶದ ಹಂತದಲ್ಲಿ ಇಂತಹ ಪ್ರಮುಖ ನೀತಿ ಬದಲಾವಣೆಗಳನ್ನು ಮಾಡುವುದು ಕಾನೂನುಬಾಹಿರ ಎಂದು ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯವು ಈ ವಾದವನ್ನು ಎತ್ತಿಹಿಡಿದಿದ್ದು, ಶೈಕ್ಷಣಿಕ ವರ್ಷದ ಆರಂಭದಲ್ಲೇ ಇಂತಹ ಬದಲಾವಣೆಗಳನ್ನು ತಿಳಿಸಬೇಕೆಂದು ಸರ್ಕಾರಕ್ಕೆ ಕಿವಿಮಾತು ಹೇಳಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us