ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲಿಸಲ್ಲ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಶಕ್ತಿ ಯೋಜನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆ ಕಾಂಗ್ರೆಸ್ ಪಕ್ಷದ ಆಂತರಿಕ ವಲಯದಲ್ಲಿ ಮತ್ತು ಕರ್ನಾಟಕ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಧ್ಯ ಪ್ರವೇಶ ಮಾಡಿದ್ದರು. ಇದೀಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟೀಕರಣ ನೀಡಿದ್ದು, ಯೋಜನೆ ಯಾವುದೇ ಕಾರಣಕ್ಕೂ ಸ್ಥಗಿತವಾಗದು ಎಂದಿದ್ದಾರೆ.

ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲಿಸಲ್ಲ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ
ರಾಮಲಿಂಗಾ ರೆಡ್ಡಿ
Poornima Agali Nagaraj Edited By:

Updated on: Nov 02, 2024 | 3:19 PM

ಬೆಂಗಳೂರು, ನವೆಂಬರ್ 2: ಬಜೆಟ್​​ನಲ್ಲಿ ಏನಿದೆಯೋ ಅದರಂತೆ ಗ್ಯಾರಂಟಿ ಯೋಜನೆಗಳನ್ನು ಕೊಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವರು, ಜನಪ್ರತಿನಿಧಿಗಳಿಗೆ ಖಡಕ್ ಸೂಚನೆ ಕೊಟ್ಟ ನಂತರ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಇತರ ನಾಯಕರು ತಮ್ಮ ಹೇಳಿಕೆಗಳ ವರಸೆ ಬದಲಾಯಿಸಿದ್ದರು. ಇದೀಗ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೂಡ ಶಕ್ತಿ ಯೋಜನೆ ಬಗ್ಗೆ ಮಾತನಾಡಿದ್ದಾರೆ. ಯೋಜನೆಯನ್ನು ನಿಲ್ಲಿಸಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು ಸಾರಿಗೆ ಇಲಾಖೆ ನುಡಿದಂತೆಯೇ ನಡೆಸಿಕೊಂಡು ಬರುತ್ತಿದೆ. ಯಾವುದೇ ಕಾರಣಕ್ಕೂ ನಾವು ಯೋಜನೆಯನ್ನು ನಿಲ್ಲಿಸುವುದಿಲ್ಲ. ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.

ಅನ್ನಭಾಗ್ಯ ಯೋಜನೆ ಅಡಿ ನೇರನಗದು ವರ್ಗಾವಣೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ ಅನ್ವಯವಾಗುತ್ತದೆ. ಆದರೆ ಶಕ್ತಿ ಯೋಜನೆ ಹಾಗಲ್ಲ. ಎಲ್ಲ ಮಹಿಳೆಯರಿಗೂ ಇದರ ಪ್ರಯೋಜನ ದೊರೆಯುತ್ತಿದೆ. ಈ ಯೋಜನೆ ಅಡಿ ಯಾವ ಮಹಿಳೆಯರು ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಆದರೂ ಯೋಜನೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ಖರ್ಗೆ ಖಡಕ್​ ಮಾತಿನ ನಂತರ ಶಕ್ತಿ ಯೋಜನೆ ಬಗ್ಗೆ ಡಿಕೆಶಿ ವರಸೆ ಬದಲು

ಕೆಲವು ಮಹಿಳೆಯರು ತಾವು ಟಿಕೆಟ್ ಖರೀದಿಸಿ ಪ್ರಯಾಣ ಮಾಡುತ್ತೇವೆ. ಶಕ್ತಿ ಯೋಜನೆ ಬೇಕಾಗಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎರಡು ದಿನಗಳ ಹಿಂದೆ ಹೇಳಿಕೆ ನೀಡಿದ್ದರು.. ಇದು ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ, ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೆ, ಈ ಮೊದಲು ಹೇಳಿದಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದರು. ಖರ್ಗೆ ಹೇಳಿಕೆ ವಿಚಾರ ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಕೂಡ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದಕ್ಕೂ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಮೂಲಕ ಗ್ಯಾರಂಟಿ ಚರ್ಚೆ ರಾಷ್ಟ್ರ ಮಟ್ಟಕ್ಕೆ ತಲುಪಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:44 pm, Sat, 2 November 24

Poornima Agali Nagaraj
Follow Us