Karnataka Unlock: 2ನೇ ಹಂತದ ಅನ್​ಲಾಕ್: ಸೋಮವಾರದಿಂದಲೇ ಸರ್ಕಾರಿ ಬಸ್ ಓಡಾಟ ಆರಂಭ, ಎಲ್ಲಾ ಅಂಗಡಿ ಓಪನ್, ಶರತ್ತುಗಳು ಅನ್ವಯ

| Updated By: guruganesh bhat

Updated on: Jun 20, 2021 | 3:03 PM

Karnataka Lockdown: ಡಿಸಿಎಂ ಡಾ. ಅಶ್ವತ್ಥ್ ನಾರಾಯಣ, ಗೃಹಸಚಿವ ಬಸವರಾಜ ಬೊಮ್ಮಾಯಿ‌, ಆರೋಗ್ಯ ಸಚಿವ ಡಾ. ಸುಧಾಕರ್, ಸಚಿವರಾದ ಆರ್. ಅಶೋಕ್, ಅರವಿಂದ ಲಿಂಬಾವಳಿ, ಸಿಎಸ್ ರವಿಕುಮಾರ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

Karnataka Unlock: 2ನೇ ಹಂತದ ಅನ್​ಲಾಕ್: ಸೋಮವಾರದಿಂದಲೇ ಸರ್ಕಾರಿ ಬಸ್ ಓಡಾಟ ಆರಂಭ, ಎಲ್ಲಾ ಅಂಗಡಿ ಓಪನ್, ಶರತ್ತುಗಳು ಅನ್ವಯ
ಬಿ.ಎಸ್​. ಯಡಿಯೂರಪ್ಪ (ಸಂಗ್ರಹ ಚಿತ್ರ)
Follow us on

ಬೆಂಗಳೂರು: 2ನೇ ಹಂತದ ಕರ್ನಾಟಕ ಅನ್​ಲಾಕ್ ಭಾಗವಾಗಿ ಪಾಸಿಟಿವಿಟಿ ರೇಟ್ ಆಧಾರದ ಮೇಲೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ನಿರ್ಬಂಧ ಸಡಿಲಿಸಿ ಬೆಳಗ್ಗೆಯಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಜಿಲ್ಲೆ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಮಾತ್ರ ಈ ಸಡಿಲಿಕೆ ಅನ್ವಯವಾಗಲಿದೆ. ಜತೆಗೆ ಈ ಜಿಲ್ಲೆಗಳಲ್ಲಿ ಸೋಮವಾರದಿಂದ (ಜೂನ್ 21) ಸರ್ಕಾರಿ ಬಸ್​ಗಳ ಶೇ 50ರ ಅವಕಾಶದೊಂದಿಗೆ  ಓಡಾಟಕ್ಕೆ ಅನುಮತಿ ನೀಡಲಾಗಿದ್ದು ಇನ್ನಷ್ಟು ವಿನಾಯಿತಿಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ. ಆದರೆ ಶೇ 5 ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ಈ ಸಡಿಲಿಕೆ ಅನ್ವಯ ಆಗುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಇಂದು ಘೋಷಿಸಿರುವ ನಿಯಮಗಳು ಜುಲೈ 5ರವರೆಗೂ ಮುಂದುವರೆಯಲಿದೆ.

ಎಸಿ ಬಳಸದೇ ಹೋಟೆಲ್‌ಗಳನ್ನೂ ತೆರೆಯಲು ಅವಕಾಶವಿದೆ. ಬಸ್, ಮೆಟ್ರೋಗಳಲ್ಲಿ ಶೇ.50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗುತ್ತದೆ. ಜಿಮ್‌ಗಳಲ್ಲಿ ಶೇ.50ರಷ್ಟು ಜನರಿಗೆ ಅವಕಾಶವಿದೆ. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗೆ ಅನುಮತಿ ನೀಡಲಾಗಿದೆ. ಆದರೆ ಇಂದು ಘೋಷಿಸಲಾದ ಈ ಎಲ್ಲ ಸಡಿಲಿಕೆಗಳೂ ಪಾಸಿಟಿವಿಟಿ ದರ ಶೇ 5ಕ್ಕಿಂತ ಕಡಿಮೆ ಇರುವ 16 ಜಿಲ್ಲೆಗಳಿಗೆ ಮಾತ್ರ ಅನ್ವಯವಾಗಲಿದೆ.

ಕೊವಿಡ್ ಪಾಸಿಟಿವಿಟಿ ದರ ಶೇ 5ಕ್ಕಿಂತ ಹೆಚ್ಚಿರುವ 13 ಜಿಲ್ಲೆಗಳಲ್ಲಿ ಲಾಕ್‌ಡೌನ್ ವಿಸ್ತರಣೆಯಾಗಲಿದೆ. ಕಳೆದ ಬಾರಿ ಘೋಷಣೆಯಾಗಿದ್ದ ನಿಯಮಗಳೇ ಮುಂದುವರೆಯಲಿವೆ. ಸರ್ಕಾರಿ ಕಚೇರಿಗಳಲ್ಲಿ ಶೇ.50ರಷ್ಟು ಸಿಬ್ಬಂದಿ ಕೆಲಸ ನಿರ್ವಹಿಸಬಹುದು. ಸಿನಿಮಾ ಮಂದಿರ, ದೇಗುಲಗಳಲ್ಲಿ ನಿರ್ಬಂಧ ಮುಂದುವರಿಕೆ ಆಗಲಿದೆ. ಮುಖ್ಯವಾಗಿ ಮೈಸೂರು ಜಿಲ್ಲೆಯಲ್ಲಿ ಶೇ.10ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವಿದ್ದು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧ ಮುಂದುವರೆಯಲಿದೆ

ನೈಟ್ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಮುಂದುವರೆಯಲಿದೆ
ಪ್ರತಿದಿನ ಸಂಜೆ 7ಗಂಟೆಯಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಎಲ್ಲ ಜಿಲ್ಲೆಗಳಲ್ಲೂ ಮುಂದುವರೆಯಲಿದೆ. ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಕರ್ಫ್ಯೂ ಸಹ ರಾಜ್ಯದಲ್ಲಿ ಎಂದಿನಂತೆ ಮುಂದುವರೆಯಲಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಘೋಷಿಸಿದ್ದಾರೆ.

ಕರ್ನಾಟಕದಲ್ಲಿ 2ನೇ ಹಂತದ ಅನ್​ಲಾಕ್ ಪ್ರಕ್ರಿಯೆಯ ಕುರಿತು ನಿರ್ಧಾರ ಕೈಗೊಳ್ಳಲು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕೊವಿಡ್ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಯಿತು. ಡಿಸಿಎಂ ಡಾ. ಅಶ್ವಥ್ ನಾರಾಯಣ, ಗೃಹಸಚಿವ ಬಸವರಾಜ ಬೊಮ್ಮಾಯಿ‌, ಆರೋಗ್ಯ ಸಚಿವ ಡಾ. ಸುಧಾಕರ್, ಸಚಿವರಾದ ಆರ್. ಅಶೋಕ್, ಅರವಿಂದ ಲಿಂಬಾವಳಿ, ಸಿಎಸ್ ರವಿಕುಮಾರ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

(Karnataka Unlock 2nd step Permission to open all stores from morning to 5 pm and all KSRTC BMTC Buses will start from June 21 says CM Yediyurappa)

ಇದನ್ನೂ ಓದಿ: ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪರೀಕ್ಷೆಗಳನ್ನು ರದ್ದುಪಡಿಸಲು ಉನ್ನತ ಶಿಕ್ಷಣ ಇಲಾಖೆಗೆ ವಿದ್ಯಾರ್ಥಿಗಳಿಂದ ಒತ್ತಡ

ತೆಲಂಗಾಣದಲ್ಲಿ ನಾಳೆಯಿಂದಲೇ ಸಂಪೂರ್ಣ ಅನ್​ಲಾಕ್​; ಯಾವುದಕ್ಕೂ ನಿರ್ಬಂಧ ಇಲ್ಲ

Published On - 7:09 pm, Sat, 19 June 21