ವಾಲ್ಮೀಕಿ ನಿಗಮ ಹಗರಣ ಕೇಸ್: 5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ
ಕರ್ನಾಟಕ ಮಹಿರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ. ಈ ಪ್ರಕರಣ ಸಂಬಂಧ ಹಿಂದೆ ಹಲವರ ಮನೆ, ಕಚೇರಿಗಳ ಮೇಲೆ ದಾಳಿ ಮಾಡಿದ್ದ ಇಡಿ, ಇದೀಗ ಕೆಲವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಕ್ರಮವು ಹಗರಣದ ತನಿಖೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಬೆಂಗಳೂರು, (ಆಗಸ್ಟ್ 27): ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Karnataka Valmiki Corporation) ನಡೆದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯ (ಇಡಿ) ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ನೆಕ್ಕುಂಟಿ ನಾಗರಾಜ್, ಚಂದ್ರಮೋಹನ್, ಗೋಲಪಲ್ಲಿ ಕಿಶೋರ್ ರೆಡ್ಡಿ ಮತ್ತು ಎಟಕೇರಿ ಸತ್ಯನಾರಾಯಣ ಅವರಿಗೆ ಸೇರಿದ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಇಡಿ ಅಧಿಕೃತವಾಗಿ ಹೇಳಿಕೊಂಡಿದೆ.
ನೆಕ್ಕುಂಟಿ ನಾಗರಾಜ್, ಚಂದ್ರ ಮೋಹನ್, ಕಿಶೋರ್ ರೆಡ್ಡಿ ಹಾಗೂ ಸತ್ಯನಾರಾಯಣ ಅವರಿಗೆ ಸೇರಿದ 4.5 ಕೋಟಿ ರೂಪಾಯಿ ಮೌಲ್ಯದ ಜಮೀನು ಹಾಗೂ ಫ್ಲ್ಯಾಟ್ ಮುಟ್ಟುಗೋಲು ಹಾಕಿಕೊಂಡಿದೆ. ಹಾಗೆಯೇ ಇಡಿ ಅಧಿಕಾರಿಗಳು, 4.45 ಕೋಟಿ ರೂ. ಮೌಲ್ಯದ ಭೂಮಿ, ಫ್ಲಾಟ್ಗಳು ಮತ್ತು ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ನಲ್ಲಿ ಇದ್ದ 50 ಲಕ್ಷ ರೂ. ನಗದನ್ನು ಜಪ್ತಿ ಮಾಡಿದ್ದಾರೆ.
ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ಕರ್ನಾಟಕದಲ್ಲಿ ಏಕಕಾಲಕ್ಕೆ 8 ಕಡೆ ಇ.ಡಿ ದಾಳಿ
ED, Bengaluru has provisionally attached properties, in the form of immovable properties and bank balance, to the extent of Rs. 5 Crore (approx.) under the provisions of PMLA, 2002 in the caseof Karnataka Maharshi Valmiki Scheduled Tribes Development Corporation Limited…
— ED (@dir_ed) August 27, 2025
ಹಗರಣದ ಹಣದಲ್ಲಿ ಆರೋಪಿಗಳು ಲ್ಯಾಂಬೋರ್ಗಿನಿ ಕಾರು ಸೇರಿದಂತೆ ಹಲವು ಐಷಾರಾಮಿ ವಾಹನಗಳನ್ನು ಖರೀದಿಸಿರುವುದು ಇಡಿ ತನಿಖೆಯಲ್ಲಿ ಪತ್ತೆಯಾಗಿದೆ. ನಿಗಮದ ಹಣವನ್ನು ದುರುಪಯೋಗಪಡಿಸಿಕೊಂಡು ವೈಯಕ್ತಿಕ ಸಂಪತ್ತನ್ನು ಸೃಷ್ಟಿಸಿಕೊಂಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಇಡಿ, ಹಣ ಅಕ್ರಮ ವರ್ಗಾವಣೆ ಕಾಯ್ದೆ (PMLA) ಅಡಿಯಲ್ಲಿ ತನಿಖೆಯನ್ನು ಮುಂದುವರಿಸಿದೆ. ಈ ಹಗರಣದಲ್ಲಿ ಇನ್ನೂ ಹಲವು ಪ್ರಭಾವಿಗಳ ಹೆಸರು ಹೊರಬರುವ ಸಾಧ್ಯತೆ ಇದೆ.
ಪ್ರಕರಣದ ಹಿನ್ನೆಲೆ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷರಾಗಿದ್ದ ಚಂದ್ರಶೇಕರನ್ ಅವರು 2024ರ ಮೇ 26ರಂದು ಶಿವಮೊಗ್ಗದ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆ ವೇಳೆ ಅವರು ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆಯಾಗಿದ್ದು, ಮೇಲಿನವರ ಆದೇಶದಂತೆ ನಿಗಮದ ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಉಲ್ಲೇಖಿಸಿದ್ದರು. ಅದರ ಬೆನ್ನಲ್ಲೇ ನಿಗಮು ನಡೆಸಿದ ಆಂತರಿಕ ತನಿಖೆಯಲ್ಲಿ 89.62 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿರುವುದು ಕಂಡುಬಂದಿತ್ತು. ಬಳಿಕ ಸಿಬಿಐ ಹಾಗೂ ಕರ್ನಾಟಕ ಪೊಲೀಸರು ದಾಖಲಿಸಿರುವ ಎಫ್ಐಆರ್ ಆಧಾರದ ಮೇಲೆ ಇಡಿ ಸಹ ಪ್ರಕರಣದಲ್ಲಿ ಪ್ರವೇಶ ಮಾಡಿ ತನಿಖೆ ನಡೆಸುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




