AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀವ್ರಗೊಂಡ ಕುಡಿಯುವ ನೀರಿನ ಅಭಾವ: ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ಸಿಎಂ ಸೂಚನೆ, ಡಿಸಿಗಳಿಗೂ ಖಡಕ್ ಎಚ್ಚರಿಕೆ

ಕರ್ನಾಟಕದ 114 ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಭೀಕರವಾಗಿದ್ದು, ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮಕ್ಕೆ ಸೂಚಿಸಿದ್ದಾರೆ. ನೀರಿನ ಪೂರೈಕೆಗಾಗಿ 419 ಕೋಟಿ ರೂಪಾಯಿ ಮೀಸಲಿಡಲಾಗಿದ್ದು, ಅನುದಾನ ಬಿಡುಗಡೆ ಮಾಡುವಂತೆ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ. ಟ್ಯಾಂಕರ್ ಮೂಲಕ ನೀರು ಪೂರೈಸಲು ಮತ್ತು ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆಯಲು ಸರ್ಕಾರ ನಿರ್ಧರಿಸಿದೆ.

ತೀವ್ರಗೊಂಡ ಕುಡಿಯುವ ನೀರಿನ ಅಭಾವ: ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ಸಿಎಂ ಸೂಚನೆ, ಡಿಸಿಗಳಿಗೂ ಖಡಕ್ ಎಚ್ಚರಿಕೆ
ಸಿಎಂ ಸಿದ್ದರಾಮಯ್ಯImage Credit source: tv9
ಗಣಪತಿ ಶರ್ಮಾ
|

Updated on: Apr 25, 2026 | 10:41 AM

Share

ಬೆಂಗಳೂರು, ಏಪ್ರಿಲ್ 25: ಕರ್ನಾಟಕದ (Karnataka) ಹಲವು ಜಿಲ್ಲೆಗಳಲ್ಲಿ ರಣ ಬಿಸಿಲಿನ ಜೊತೆಗೆ ಕುಡಿಯುವ ನೀರಿನ (Drinking Water) ಸಮಸ್ಯೆ ಉಲ್ಬಣಿಸುತ್ತಿದ್ದು, ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಜನರಿಗೆ ಕುಡಿಯುವ ನೀರಿನ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ನೇರ ಹೊಣೆ ಎಂದು ಸಿಎಂ ಮತ್ತೊಮ್ಮೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕುಡಿಯುವ ನೀರಿನ ಪೂರೈಕೆಗಾಗಿ ಈಗಾಗಲೇ ಸರ್ಕಾರ 419.50 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ. ಜಿಲ್ಲಾಧಿಕಾರಿಗಳ ವರದಿಯ ಆಧಾರದ ಮೇಲೆ ಹೆಚ್ಚುವರಿ ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ಸಿಎಂ ಸೂಚಿಸಿದ್ದಾರೆ. ಕಂದಾಯ, ಪಂಚಾಯತ್ ರಾಜ್ ಮತ್ತು ನಗರಾಭಿವೃದ್ಧಿ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.

ಟ್ಯಾಂಕರ್ ಮತ್ತು ಖಾಸಗಿ ಬೋರ್‌ವೆಲ್ ಮೊರೆ

ರಾಜ್ಯದ 114 ತಾಲೂಕುಗಳ 598 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಸದ್ಯ 137 ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ನೀರಿನ ಲಭ್ಯತೆ ಹೆಚ್ಚಿಸಲು ಖಾಸಗಿ ಬೋರ್‌ವೆಲ್ ಮತ್ತು ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆಯಲು ಸರ್ಕಾರ ನಿರ್ಧರಿಸಿದೆ. ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ ಸದ್ಯ 321.93 ಟಿಎಂಸಿ ನೀರು ಲಭ್ಯವಿದ್ದು, ಸೋರಿಕೆ ತಡೆದು ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲು ಸೂಚಿಸಲಾಗಿದೆ.

ಟಾಸ್ಕ್‌ಫೋರ್ಸ್ ಸಭೆ ಮತ್ತು ಆರೋಗ್ಯ ಮುನ್ನೆಚ್ಚರಿಕೆ

ಪ್ರತಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ತಕ್ಷಣವೇ ‘ಟಾಸ್ಕ್‌ಫೋರ್ಸ್’ ಸಭೆ ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಬಿಸಿಲಿನ ತಾಪದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಎದುರಿಸಲು ಆರೋಗ್ಯ ಇಲಾಖೆಯೊಂದಿಗೆ ಸೇರಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರು ಮತ್ತು ಜಿ.ಪಂ. ಸಿಇಒಗಳಿಗೆ ಸಿಎಂ ನಿರ್ದೇಶನ ನೀಡಿದ್ದಾರೆ.

ವರದಿ: ಈರಣ್ಣ ಬಸವ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us