Karnataka Weather Forecast: ಕರ್ನಾಟಕದ ಈ ಭಾಗಗಳಲ್ಲಿ ಮಳೆ ಮುಂದುವರಿಕೆ, ಕರಾವಳಿಯಲ್ಲಿ 40 ಕಿ.ಮೀ ವೇಗದ ಗಾಳಿ ಸಾಧ್ಯತೆ

ಕರ್ನಾಟಕ ಹವಾಮಾನ ಆಗಸ್ಟ್​ 31: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನವೂ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Karnataka Weather Forecast: ಕರ್ನಾಟಕದ ಈ ಭಾಗಗಳಲ್ಲಿ ಮಳೆ ಮುಂದುವರಿಕೆ, ಕರಾವಳಿಯಲ್ಲಿ 40 ಕಿ.ಮೀ ವೇಗದ ಗಾಳಿ ಸಾಧ್ಯತೆ
ಸಾಂದರ್ಭಿಕ ಚಿತ್ರ
Image Credit source: PTI

Updated on: Aug 31, 2026 | 6:39 AM

ಮುಖ್ಯಾಂಶಗಳು

  • ಕರಾವಳಿಯಲ್ಲಿ ಎರಡು ದಿನ ಮಳೆ ಸಾಧ್ಯತೆ
  • 40 ಕಿ.ಮೀ ವೇಗದ ಗಾಳಿ ಬೀಸುವ ಮುನ್ಸೂಚನೆ
  • ಉತ್ತರ ಕನ್ನಡದ ನಿಲ್ಕುಂದದಲ್ಲಿ 6 ಸೆಂ.ಮೀ ಮಳೆ ದಾಖಲು

ಬೆಂಗಳೂರು, ಆಗಸ್ಟ್ 31: ಕರ್ನಾಟಕದಲ್ಲಿ ಮುಂಗಾರು ಮಳೆ (Monsoon Rain) ಮತ್ತೆ ಚುರುಕು ಕಳೆದುಕೊಂಡಿದ್ದು, ಒಳನಾಡು ಭಾಗಗಳಲ್ಲಿ ದುರ್ಬಲವಾಗಿದೆ. ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ಕರಾವಳಿ ಕರ್ನಾಟಕದಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ (Weather Forecast) ನೀಡಿದೆ.

ಕರಾವಳಿಯಲ್ಲಿ ಮಳೆ, ಗಾಳಿಯ ಮುನ್ಸೂಚನೆ

ಆಗಸ್ಟ್ 31ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗಬಹುದು. ಇದೇ ವೇಳೆ 30ರಿಂದ 40 ಕಿ.ಮೀ ವೇಗದ ನಿರಂತರ ಗಾಳಿ ಬೀಸುವ ಸಾಧ್ಯತೆಯಿದೆ. ಸೆಪ್ಟೆಂಬರ್ 1ರಂದು ಕೂಡ ಕರಾವಳಿ ಜಿಲ್ಲೆಗಳಲ್ಲಿ ಇದೇ ರೀತಿಯ ವಾತಾವರಣ ಮುಂದುವರಿಯುವ ಮುನ್ಸೂಚನೆ ಇದೆ.

ಉತ್ತರ ಒಳನಾಡಿನಲ್ಲಿ ಎಲ್ಲೆಲ್ಲಿ ಮಳೆ?

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಆಗಸ್ಟ್ 31 ಹಾಗೂ ಸೆಪ್ಟೆಂಬರ್ 1ರಂದು ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯನ್ನೂ ಹವಾಮಾನ ಇಲಾಖೆ ಸೂಚಿಸಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಿಗೂ ಮಳೆ

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಎರಡೂ ದಿನ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 1ರಂದು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಒಂದೆರಡು ಕಡೆ ಹಗುರ ಮಳೆಯಾಗುವ ಮುನ್ಸೂಚನೆ ಇದೆ.

ರಾಜ್ಯದಲ್ಲಿ ಮುಂಗಾರು ಹೇಗಿದೆ?

ಐಎಂಡಿ ಬೆಂಗಳೂರು ವರದಿ ಪ್ರಕಾರ, ಕರಾವಳಿ ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದರೆ, ಒಳನಾಡು ಕರ್ನಾಟಕದಲ್ಲಿ ದುರ್ಬಲವಾಗಿದೆ. ಕರಾವಳಿ ಭಾಗದ ಬಹುತೇಕ ಸ್ಥಳಗಳಲ್ಲಿ ಮಳೆಯಾಗಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಮಳೆ ದಾಖಲಾಗಿದೆ.

ಎಲ್ಲೆಲ್ಲಿ ಎಷ್ಟು ಮಳೆ?

ಭಾನುವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ನಿಲ್ಕುಂದದಲ್ಲಿ 6 ಸೆಂ.ಮೀ ಮಳೆಯಾಗಿದೆ. ದಕ್ಷಿಣ ಕನ್ನಡದ ಸುಬ್ರಹ್ಮಣ್ಯದಲ್ಲಿ 3 ಸೆಂ.ಮೀ, ಉಡುಪಿ ಜಿಲ್ಲೆಯ ಕೊಲ್ಲೂರು ಮತ್ತು ಕೋಟಾದಲ್ಲಿ ಕ್ರಮವಾಗಿ 3 ಹಾಗೂ 2 ಸೆಂ.ಮೀ ಮಳೆ ದಾಖಲಾಗಿದೆ. ಉತ್ತರ ಕನ್ನಡದ ಜೋಯಿಡಾದಲ್ಲಿ 2 ಸೆಂ.ಮೀ, ಉಡುಪಿಯಲ್ಲಿ 2 ಸೆಂ.ಮೀ ಹಾಗೂ ಉತ್ತರ ಕನ್ನಡದ ಗೇರುಸೊಪ್ಪದಲ್ಲಿ 2 ಸೆಂ.ಮೀ ಮಳೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us