
ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವೆಡೆ ಭಾರಿ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಭಾರತೀಯ ಹವಾಮಾನ ಇಲಾಖೆ (IMD) ಜುಲೈ 27 ಮತ್ತು 28ರಂದು ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಹಾಗೂ ಬಿರುಗಾಳಿಯ ಮುನ್ಸೂಚನೆ (Weather Forecast) ನೀಡಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇಂದು (ಜುಲೈ 27 ರಂದು) ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ. ಜುಲೈ 28 ರಂದೂ ಸಹ ಈ ಮೂರು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಜುಲೈ 27 ರಂದು ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ 40-50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಜುಲೈ 28 ರಂದು ಬೀದರ್, ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.
ಜುಲೈ 27 ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ದಾವಣಗೆರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 30-40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಜುಲೈ 28 ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ ನೀಡಲಾಗಿದೆ.
ಭಾನುವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಮುಂಗಾರು ಸಾಮಾನ್ಯವಾಗಿದ್ದರೆ, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಭಾಗದ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವೆಡೆ ಮಳೆಯಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ಗುಡುಗು, ಮಿಂಚು ಹಾಗೂ ಬಿರುಗಾಳಿಯ ಸಾಧ್ಯತೆ ಇರುವುದರಿಂದ ಮೀನುಗಾರರು, ಪ್ರವಾಸಿಗರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ