Karnataka Weather Forecast: ಕರ್ನಾಟಕ ಕರಾವಳಿ, ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ, ಗಾಳಿಯ ಮುನ್ಸೂಚನೆ
ಕರ್ನಾಟಕ ಹವಾಮಾನ ಮುನ್ಸೂಚನೆ ಜುಲೈ 21: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ 30-40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.

ಮುಖ್ಯಾಂಶಗಳು
- ಕರಾವಳಿಯಲ್ಲಿ ಮುಂದುವರಿಯಲಿದೆ ಮಳೆ
- ಒಳನಾಡಿನ ಜಿಲ್ಲೆಗಳಲ್ಲಿ ಗಾಳಿಯ ಎಚ್ಚರಿಕೆ
- ಕಮ್ಮರಡಿಯಲ್ಲಿ 11 ಸೆಂ.ಮೀ. ಮಳೆ ದಾಖಲು
ಬೆಂಗಳೂರು, ಜುಲೈ 21: ಕರ್ನಾಟಕದ ಅನೇಕ ಕಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯಲಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು (Bengaluru) ಕೇಂದ್ರ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಅಲ್ಲಲ್ಲಿ ಮಳೆಯಾಗಲಿದೆ.
ಬೆಂಗಳೂರಿಗೂ ಮಳೆ ಮುನ್ಸೂಚನೆ
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲೂ ಸಾಧಾರಣ ಮಳೆಯೊಂದಿಗೆ 30-40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.
ಜುಲೈ 22ರಂದೂ ಇದೇ ರೀತಿಯ ಹವಾಮಾನ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಅನೇಕ ಕಡೆ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಎಲ್ಲೆಲ್ಲಿ ಭಾರಿ ಮಳೆಯಾಗಿದೆ? ಎಷ್ಟು?
ಜುಲೈ 20 ರ ಸಂಜೆಗೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಮ್ಮರಡಿಯಲ್ಲಿ ಅತಿ ಹೆಚ್ಚು 11 ಸೆಂ.ಮೀ. ಮಳೆಯಾಗಿದೆ. ಉಡುಪಿ ಜಿಲ್ಲೆಯ ಸಿದ್ದಾಪುರದಲ್ಲಿ 10 ಸೆಂ.ಮೀ. ಮಳೆ ದಾಖಲಾಗಿದೆ.
- ಸುಬ್ರಹ್ಮಣ್ಯ (ದಕ್ಷಿಣ ಕನ್ನಡ) – 8 ಸೆಂ.ಮೀ.
- ಬೆಳ್ತಂಗಡಿ (ದಕ್ಷಿಣ ಕನ್ನಡ) – 7 ಸೆಂ.ಮೀ.
- ಜಗಲ್ಬೆಟ್ (ಉತ್ತರ ಕನ್ನಡ) – 7 ಸೆಂ.ಮೀ.
- ಕೆಂಭಾವಿ (ಯಾದಗಿರಿ) – 7 ಸೆಂ.ಮೀ.
- ಮಂಗಳೂರು ವೀಕ್ಷಣಾಲಯ – 7 ಸೆಂ.ಮೀ.
- ಮೂಡುಬಿದಿರೆ (ದಕ್ಷಿಣ ಕನ್ನಡ) – 7 ಸೆಂ.ಮೀ.
- ಸುಳ್ಯ (ದಕ್ಷಿಣ ಕನ್ನಡ) – 7 ಸೆಂ.ಮೀ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




