
ಬೆಂಗಳೂರು, ಮೇ 23: ಕರ್ನಾಟಕದಲ್ಲಿ (Karnataka) ಮೇ 29ರವರೆಗೆ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ಘೋಷಿಸಲಾಗಿದೆ. ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಕೊಪ್ಪಳ ಮತ್ತು ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ.
ಬೆಂಗಳೂರಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿಯಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ದಾವಣಗೆರೆ, ವಿಜಯನಗರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ಸುರಿದಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ವಿಶೇಷವಾಗಿ ಕೊಪ್ಪಳ ಜಿಲ್ಲೆಯಲ್ಲಿ ಭಾರಿ ಗಾಳಿ ಸಹಿತ ಮಳೆಯಿಂದ ವ್ಯಾಪಕ ಬೆಳೆ ಹಾನಿಯಾಗಿದೆ. ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಒಟ್ಟು 166.4 ಹೆಕ್ಟೇರ್ ಬೆಳೆ ನಾಶವಾಗಿದೆ. ಇದರಲ್ಲಿ 165.2 ಹೆಕ್ಟೇರ್ ತೋಟಗಾರಿಕಾ ಬೆಳೆಗಳಾದ ಬಾಳೆ ಮತ್ತು ವೀಳ್ಯದೆಲೆ ಬೆಳೆಗಳು ಸೇರಿವೆ. ಇದರ ಜೊತೆಗೆ, ಸುಮಾರು 1.5 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಕಬ್ಬು ಸಹ ಮಳೆಯಿಂದ ಹಾನಿಗೊಳಗಾಗಿದೆ. ಹಾನಿಗೊಳಗಾದ ಪ್ರದೇಶಗಳ ಸಮೀಕ್ಷೆಗಾಗಿ ಈಗಾಗಲೇ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿದ್ದಾರೆ.
ಇದನ್ನೂ ಓದಿ: Bengaluru Weather Update: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಜಿಟಿ ಜಿಟಿ ಮಳೆ: ತಂಪಾದ ಉದ್ಯಾನ ನಗರಿ!
ಇನ್ನು ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆ ಆರೆಂಜ್ ಅಲರ್ಟ್ ನೀಡಲಾಗಿದೆ. ನಾಗರಿಕರು ಸುರಕ್ಷಿತವಾಗಿರಲು ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಇಲಾಖೆ ಸೂಚಿಸಿದೆ. ಹವಾಮಾನ ವೈಪರೀತ್ಯದಿಂದ ಉಂಟಾಗುವ ಅನಾಹುತಗಳನ್ನು ತಡೆಯಲು ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:50 pm, Sat, 23 May 26