AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ವಿವಿಧೆಡೆ ಉತ್ತಮ ಮಳೆ: ತುಂಗಾ ಜಲಾಶಯ ಭರ್ತಿ, ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ಭಾರಿ ಮಳೆ ಸುರಿಯುತ್ತಿದ್ದು, ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ.

ಕರ್ನಾಟಕದ ವಿವಿಧೆಡೆ ಉತ್ತಮ ಮಳೆ: ತುಂಗಾ ಜಲಾಶಯ ಭರ್ತಿ, ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ
ಕರ್ನಾಟಕ ರಾಜ್ಯ ಹವಮಾನ ವರದಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jun 17, 2021 | 7:00 PM

Share

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ಭಾರಿ ಮಳೆ ಸುರಿಯುತ್ತಿದ್ದು, ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ. ಜಲಾಶಯದ ಗೇಟ್​ಗಳನ್ನು ತೆರೆದು ನದಿಗೆ 33,700 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ತುಂಗಾ ನದಿತೀರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಬೇಕೆಂದು ಜಲಾಶಯದ ಸಹಾಯಕ ಮುಖ್ಯ ಎಂಜಿನಿಯರ್‌ ಹರೀಶ್ ಸೂಚಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಶಿವಮೊಗ್ಗ ನಗರವೂ ಸೇರಿದಂತೆ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಾಗಿದ್ದು, ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಮತ್ತು ಕರ್ನಾಟಕದ ಬೆಳಗಾವಿ ಜಿಲ್ಲೆಯ ವಿವಿಧೆಡೆ ಮಳೆ ಆರ್ಭಟ ಮುಂದುವರಿದಿದೆ. ಧಾರಾಕಾರ ಮಳೆಗೆ ಬೆಳಗಾವಿ ಜಿಲ್ಲೆಯ 6 ಸೇತುವೆಗಳು ಜಲಾವೃತಗೊಂಡಿವೆ. ಹುಕ್ಕೇರಿ ತಾಲೂಕಿನಲ್ಲಿ ಹೀರಣ್ಯಕೇಶಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ನಾಗನೂರು-ಗೋಟೂರ ಸೇತುವೆ, ವೇದಗಂಗಾ ಹಾಗೂ ದೂದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಭೀವಶಿ-ಜತ್ರಾಟ, ಭೋಜ-ಕಾರದಗಾ, ಅಕ್ಕೋಳ-ಸಿದ್ನಾಳ, ಮಮದಾಪೂರ-ಹುನ್ನರಗಿ, ಭೋಜವಾಡಿ-ಕುನ್ನೂರು ಸೇತುವೆಗಳು ಮುಳುಗಡೆಯಾಗಿವೆ.

ಸೇತುವೆಗಳ ಮುಳುಗಡೆಯಿಂದಾಗಿ 12 ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ. ಚಿಕ್ಕೋಡಿ, ನಿಪ್ಪಾಣಿ ತಾಲ್ಲೂಕಿನಲ್ಲೂ ಹಲವು ಸೇತುವೆಗಳು ಮುಳುಗಿವೆ. ಮಳೆ ಹಿನ್ನೆಲೆಯಲ್ಲಿ ಕೃಷ್ಣಾ ನದಿ ನೀರಿನ‌ ಪ್ರಮಾಣದಲ್ಲೂ ಭಾರಿ ಏರಿಕೆ ಕಂಡುಬಂದಿದೆ. ಜೂನ್‌ ತಿಂಗಳಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದ ಭೀತಿ ತಲೆದೋರಿದೆ.

ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಲ್ಲಿ ಹರಿವಿನ ಪ್ರಮಾಣ ಹೆಚ್ಚಾಗಿದೆ. ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲ್ಲೂಕಿನಲ್ಲಿರುವ ಹಿಪ್ಪರಗಿ ಬ್ಯಾರೇಜ್​ಗೆ 20 ಸಾವಿರ ಕ್ಯೂಸೆಕ್​ ಒಳಹರಿವು ಇದೆ. ಹಿಪ್ಪರಗಿ ಬ್ಯಾರೇಜ್​ನಿಂದ 19,000 ಕ್ಯೂಸೆಕ್​ ಹೊರಹರಿವು ಇದೆ. ಸದ್ಯ ಹಿಪ್ಪರಗಿ ಬ್ಯಾರೇಜ್​ನಲ್ಲಿ 3.58 ಟಿಎಂಸಿ ನೀರು ಸಂಗ್ರಹವಾಗಿದೆ.

ಹಾವೇರಿ ಜಿಲ್ಲೆಯ ಆಲದಕಟ್ಟಿ, ಯತ್ತಿನಹಳ್ಳಿ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಕಳೆದ 15 ನಿಮಿಷಗಳಿಂದ ಮಳೆ ಸುರಿಯುತ್ತಿದೆ. ಜಿಲ್ಲೆಯ ಬಹುತೇಕ ಕಡೆ ಮೋಡ ಕವಿದ ವಾತಾವರಣವಿದೆ. ಮಳೆರಾಯನ ಆಗಮನದಿಂದ ಜಿಲ್ಲೆಯ ರೈತರಲ್ಲಿ ಸಂತಸ ಮೂಡಿದೆ.

ಉಡುಪಿಯಲ್ಲಿ ತೌತೆ ಹಾನಿ ಅಧ್ಯಯನ ತೌತೆ ಚಂಡಮಾರುತದಿಂದ ಉಡುಪಿ ಜಿಲ್ಲೆಯಲ್ಲಿ ಆಗಿರುವ ಹಾನಿಯ ಬಗ್ಗೆ ಅಧ್ಯಯನಕ್ಕೆಂದು ಕೇಂದ್ರ ಸರ್ಕಾರದ ತಂಡ ಬಂದಿದೆ. ಕೇಂದ್ರ ಗೃಹ ಇಲಾಖೆ ಅಧಿಕಾರಿ ಸುಶೀಲ್ ಪಾಲ್ ನೇತೃತ್ವದ ತಂಡವು ಜಿಲ್ಲೆಯ ವಿವಿಧೆಡೆ ಎರಡು ದಿನ ಸಂಚರಿಸಿ, ಕೇಂದ್ರ ಗೃಹ ಇಲಾಖೆಗೆ ವರದಿ ನೀಡಲಿದೆ. ಜಿಲ್ಲಾಧಿಕಾರಿ ಜಿ.ಜಗದೀಶ್, ಉಪವಿಭಾಗಾಧಿಕಾರಿ ಕೆ.ರಾಜು, ಎಎಸ್​ಪಿ ಕುಮಾರಚಂದ್ರ ಕೇಂದ್ರ ತಂಡದ ಅಧಿಕಾರಿಗಳೊಂದಿಗೆ ಗ್ರಾಮ ಸಂಚಾರದಲ್ಲಿ ಪಾಲ್ಗೊಂಡಿದ್ದರು.

ಅಬ್ಬರದ ಮಳೆಗೆ ಶಿರಸಿ ತಾಲೂಕಿನ ಜಾಜಿ ಗುಡ್ಡದಲ್ಲಿ ಭೂ ಕುಸಿತ ಉಂಟಾಗಿದ್ದು ಈ ಗ್ರಾಮದ ಏಳುಮನೆಗಳ ಜನರನ್ನು ಸ್ಥಳಾಂತರಿಸಲು ಶಿರಸಿ ತಹಶಿಲ್ದಾರ್ ಎಂ.ಆರ್ .ಕುಲಕರ್ಣಿ ಆದೇಶ ನೀಡಿದ್ದಾರೆ. ಜಿಲ್ಲೆಯ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಬ್ಬರದ ಮಳೆ ಮುಂದುವರೆದಿದೆ. ಈ ತಿಂಗಳ 18 ರವರೆಗೂ ಜಿಲ್ಲೆಯಾದ್ಯಂತ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಮಾಹಿತಿಯಂತೆ ಜಿಲ್ಲೆಯಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆ ಮುಂದುವರೆಯುವ ಸೂಚನೆಯಿದೆ.

(Karnataka Weather Good Rains in Shivamogga Belagavi Water Released from Gajanur Dam)

ಇದನ್ನೂ ಓದಿ: Jog Falls : ಧಾರಾಕಾರ ಮಳೆ ಹಿನ್ನೆಲೆ ವಿಶ್ವ ವಿಖ್ಯಾತ ಜೋಗ್ ಫಾಲ್ಸ್​ಗೆ ಮತ್ತೆ ಜೀವ ಕಳೆ

ಇದನ್ನೂ ಓದಿ: Karnataka Weather: ಮಲೆನಾಡಿನಲ್ಲಿ ಹನಿ ಕಡಿಯದೇ ಸುರಿಯುತ್ತಿದೆ ಮಳೆ; ಭಾರೀ ಗಾಳಿ, ಮಳೆಗೆ ಜನಜೀವನ ಅಸ್ತವ್ಯಸ್ತ

Published On - 6:07 pm, Thu, 17 June 21