Karnataka Weather Today: ಇಂದಿನಿಂದ 3 ದಿನ ಕರ್ನಾಟಕದಲ್ಲಿ ಮಳೆ ಸಾಧ್ಯತೆ; ಕೇರಳ, ತಮಿಳುನಾಡು, ಆಂಧ್ರದಲ್ಲೂ ವರುಣನ ಆರ್ಭಟ

Karnataka Rain | ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರಿನಲ್ಲಿ ಆ. 15ರವರೆಗೂ ಮಳೆ ಸುರಿಯಲಿದೆ. ನೆರೆಯ ಆಂಧ್ರಪ್ರದೇಶ, ತಮಿಳುನಾಡು, ಕೇರಳದಲ್ಲೂ ಮಳೆ ಅಬ್ಬರಿಸಲಿದೆ.

Karnataka Weather Today: ಇಂದಿನಿಂದ 3 ದಿನ ಕರ್ನಾಟಕದಲ್ಲಿ ಮಳೆ ಸಾಧ್ಯತೆ; ಕೇರಳ, ತಮಿಳುನಾಡು, ಆಂಧ್ರದಲ್ಲೂ ವರುಣನ ಆರ್ಭಟ
ಮಳೆಯ ಸಾಂಕೇತಿಕ ಚಿತ್ರ
Follow us
| Updated By: Skanda

Updated on: Aug 13, 2021 | 6:23 AM

Karnataka Rains: ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 15ರವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಆ. 16ರಂದು ರಾಜ್ಯದಲ್ಲಿ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಈಗಾಗಲೇ ಉತ್ತರ ಭಾರತದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ದಕ್ಷಿಣ ಭಾರತದಲ್ಲೂ ಮಳೆಯಾಗುತ್ತಿದ್ದು, ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲೂ ಈ ವಾರಾಂತ್ಯದವರೆಗೂ ಮಳೆಯ ಆರ್ಭಟ ಹೆಚ್ಚಾಗಲಿದೆ. ಇಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದ್ದು, ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಕಲ್ಯಾಣ ಕರ್ನಾಟಕದಲ್ಲಿ ನಿನ್ನೆಯಿಂದ ಮಳೆ ಕೊಂಚ ಕಡಿಮೆಯಾಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಮಳೆ ಮುಂದುವರೆಯಲಿದೆ.

ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇತ್ತ ಬೆಂಗಳೂರಿನಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಬೆಂಗಳೂರಿನಲ್ಲಿ 209 ಸೂಕ್ಷ್ಮ ವಲಯಗಳನ್ನು ಗುರುತಿಸಲಾಗಿದ್ದು, ಮಳೆ ಬಂದರೆ ಈ ಭಾಗಗಳಲ್ಲಿ ಇರುವ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗುವುದರಿಂದ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಇಂದು ಸಂಜಯವರೆಗೂ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆಯ ಬಳಿಕ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ಜುಲೈ ತಿಂಗಳ ಅಂತ್ಯದಲ್ಲಿ ಸುರಿದ ಭಾರೀ ಮಳೆಯಿಂದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿತ್ತು. ಆ ಮಳೆಯಿಂದ ಕರ್ನಾಟಕದ 13 ಜಿಲ್ಲೆಗಳಲ್ಲಿ 2.3 ಲಕ್ಷ ಹೆಕ್ಟೇರ್ ಬೆಳೆ ಹಾನಿ ಉಂಟಾಗಿದೆ. ಮಳೆಯ ಹೊಡೆತಕ್ಕೆ 10,538 ಮನೆಗಳು ಹಾನಿಯಾಗಿವೆ. ವಿದ್ಯುತ್ ಕಂಬಗಳು, ಸೇತುವೆಗಳು ಮುರಿದು ಬಿದ್ದು ಕೋಟ್ಯಂತರ ರೂ. ನಷ್ಟವಾಗಿದೆ. ಹಲವಾರು ಜನರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಈ ವರ್ಷದ ಪ್ರವಾಹದಲ್ಲಿ ಕರ್ನಾಟಕದ 14 ಜನರು ಸಾವನ್ನಪ್ಪಿದ್ದಾರೆ. ಭಾರೀ ಪ್ರವಾಹದಿಂದ ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ ಸೇರಿ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹೆಚ್ಚು ನಷ್ಟವಾಗಿದೆ.

ಈಶಾನ್ಯ ಮತ್ತು ಪೂರ್ವ ಭಾರತದಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ. ಕರ್ನಾಟಕ ಮಾತ್ರವಲ್ಲದೆ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಧ್ಯಪ್ರದೇಶ ರಾಜ್ಯಗಳಲ್ಲೂ ಇನ್ನೆರಡು ದಿನ ವ್ಯಾಪಕ ಮಳೆಯಾಗಲಿದೆ. ಮಣಿಪುರ, ತ್ರಿಪುರ, ಮಿಜೋರಾಂ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಜಾರ್ಖಂಡ್, ಬಿಹಾರ, ಒರಿಸ್ಸಾ, ಆಂಧ್ರಪ್ರದೇಶ, ಉತ್ತರಾಖಂಡ, ಸಿಕ್ಕಿಂ, ಗೋವಾ, ಮಹಾರಾಷ್ಟ್ರ, ಕೇರಳದಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಭಾನುವಾರದವರೆಗೂ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರೆಯಲಿದೆ.

ಇದನ್ನೂ ಓದಿ: Karnataka Dams Water Level: ಡ್ಯಾಂಗಳಲ್ಲಿ ತಗ್ಗಿದ ನೀರಿನ ಪ್ರಮಾಣ; ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Bengaluru Rain: ಅನಿರೀಕ್ಷಿತ ಮಳೆಯಿಂದ ತಂಪಾಯ್ತು ಬೆಂಗಳೂರು; ನಾಳೆಯೂ ತುಂತುರು ಮಳೆ ಸಾಧ್ಯತೆ

(Karnataka Weather Today Heavy Rain Lashes till Sunday in Bengaluru and Coastal Karnataka Rain)