Karnataka Weather Today: ಕರಾವಳಿ ಸೇರಿ ಹಲವೆಡೆ ಇನ್ನೂ 4 ದಿನ ವರುಣನ ಅಬ್ಬರ; ಕೇರಳ, ತಮಿಳುನಾಡಿನಲ್ಲೂ ಭಾರೀ ಮಳೆ

| Updated By: ಆಯೇಷಾ ಬಾನು

Updated on: Aug 17, 2021 | 6:28 AM

Karnataka Rain: ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಮಳೆಯಾಗುವ ಸಾಧ್ಯತೆಯಿದೆ.

Karnataka Weather Today: ಕರಾವಳಿ ಸೇರಿ ಹಲವೆಡೆ ಇನ್ನೂ 4 ದಿನ ವರುಣನ ಅಬ್ಬರ; ಕೇರಳ, ತಮಿಳುನಾಡಿನಲ್ಲೂ ಭಾರೀ ಮಳೆ
ಮಳೆ ನೀರು ನಿಂತು ಅಡಿಕೆ ಬೆಳೆ ನಾಶ
Follow us on

Karnataka Rain: ಬೆಂಗಳೂರು: ಕರ್ನಾಟಕದಲ್ಲಿ ಮಳೆಯ (Karnataka Rains) ಆರ್ಭಟ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಬಹುತೇಕ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆಯಲಿದೆ. ಇಂದಿನಿಂದ ಆಗಸ್ಟ್ 20ರವರೆಗೆ ವ್ಯಾಪಕ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರಿನಲ್ಲೂ (Bengaluru Rain) ನಿನ್ನೆ ಸಂಜೆಯಿಂದ ಮಳೆ ಹೆಚ್ಚಾಗಿದೆ. ಇಂದು ಕೂಡ ಸಂಜೆ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಭಾರತದಲ್ಲೂ ಮಳೆಯಾಗುತ್ತಿದ್ದು, ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ ಆ. 20ರವರೆಗೂ ಮಳೆಯ ಆರ್ಭಟ ಹೆಚ್ಚಾಗಲಿದೆ.

ಇಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದ್ದು, ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಕೂಡ ಇಂದು ಮಳೆ ಮುಂದುವರೆಯಲಿದೆ.

ಈಗಾಗಲೇ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಮಂಗಳವಾರದವರೆಗೂ ಚದುರಿದ ಮಳೆಯಾಗಲಿದೆ. ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇತ್ತ ಬೆಂಗಳೂರಿನಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ.

ಈ ಬಾರಿ ಕೊಡಗಿನ ಮಡಿಕೇರಿ, ವಿರಾಜಪೇಟೆ, ಸೋಮವಾರ ಪೇಟೆ ಮುಂತಾದ ಕಡೆಗಳಲ್ಲಿ ಕಳೆದ ವರ್ಷಗಳಿಗಿಂತ ದಾಖಲೆಯ ಪ್ರಮಾಣದ ಮಳೆಯಾಗಿದೆ. ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಭರ್ತಿಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕೊಡಗಿನಲ್ಲಿ ದಾಖಲೆಯ ಮಳೆಯಾಗಿದೆ.

ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಬಿಹಾರ, ತೆಲಂಗಾಣ, ಜಾರ್ಖಂಡ್, ಆಂಧ್ರಪ್ರದೇಶ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಇಂದು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ವಿಪರೀತ ಮಳೆಯಾಗುವ ನಿರೀಕ್ಷೆಯಿದೆ. ಉಕ್ಕಿ ಹರಿಯುತ್ತಿದ್ದ ಗಂಗಾ ನದಿಯ ನೀರಿನ ಮಟ್ಟ ಇಂದು ಕೊಂಚ ಇಳಿಕೆಯಾಗಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ ಕೂಡ ಇನ್ನೆರಡು ದಿನ ಮಳೆಯಾಗಲಿದೆ.

ಒರಿಸ್ಸಾದ ಬಹುತೇಕ ಭಾಗಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಿಜೋರಾಂ, ಮಣಿಪುರ, ತ್ರಿಪುರ, ಸಿಕ್ಕಿಂ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಗೋವಾ, ಛತ್ತೀಸ್​ಗಢ, ಆಂಧ್ರಪ್ರದೇಶ, ತೆಲಂಗಾಣ, ಅಂಡಮಾನ್ ನಿಕೋಬಾರ್, ತಮಿಳುನಾಡು, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ.

ಈಗಾಗಲೇ ಬೆಂಗಳೂರಿನಲ್ಲಿ 209 ಸೂಕ್ಷ್ಮ ವಲಯಗಳನ್ನು ಗುರುತಿಸಲಾಗಿದ್ದು, ಮಳೆ ಬಂದರೆ ಈ ಭಾಗಗಳಲ್ಲಿ ಇರುವ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗುವುದರಿಂದ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಈ ವರ್ಷ ಕೊಡಗಿನಲ್ಲಿ ದಾಖಲೆಯ ಪ್ರಮಾಣದ ಮಳೆಯಾಗಿದೆ. ಜುಲೈ ತಿಂಗಳ ಅಂತ್ಯದಲ್ಲಿ ಸುರಿದ ಭಾರೀ ಮಳೆಯಿಂದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿತ್ತು. ಆ ಮಳೆಯಿಂದ ಕರ್ನಾಟಕದ 13 ಜಿಲ್ಲೆಗಳಲ್ಲಿ 2.3 ಲಕ್ಷ ಹೆಕ್ಟೇರ್ ಬೆಳೆ ಹಾನಿ ಉಂಟಾಗಿದೆ. ಮಳೆಯ ಹೊಡೆತಕ್ಕೆ 10,538 ಮನೆಗಳು ಹಾನಿಯಾಗಿವೆ. ವಿದ್ಯುತ್ ಕಂಬಗಳು, ಸೇತುವೆಗಳು ಮುರಿದು ಬಿದ್ದು ಕೋಟ್ಯಂತರ ರೂ. ನಷ್ಟವಾಗಿದೆ. ಹಲವಾರು ಜನರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಈ ವರ್ಷದ ಪ್ರವಾಹದಲ್ಲಿ ಕರ್ನಾಟಕದ 14 ಜನರು ಸಾವನ್ನಪ್ಪಿದ್ದಾರೆ. ಭಾರೀ ಪ್ರವಾಹದಿಂದ ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ ಸೇರಿ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹೆಚ್ಚು ನಷ್ಟವಾಗಿದೆ.

ಇದನ್ನೂ ಓದಿ: Karnataka Weather Today: ಇಂದಿನಿಂದ 3 ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮಾಹಿತಿ

Karnataka Dams Water Level: ತುಂಗಭದ್ರಾ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

(Karnataka Weather Today: Heavy Rain over Dakshina Kannada and Udupi till August 20 Karnataka Rain)