Karnataka weather Today: ಕರ್ನಾಟಕದಲ್ಲಿ ಇಂದಿನಿಂದ ಮಳೆ ಹೆಚ್ಚಳ; ಆ. 28ರಿಂದ ಹಳದಿ ಅಲರ್ಟ್ ಘೋಷಣೆ
Karnataka Rain Today: ಆ. 28ರಿಂದ 2 ದಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

Rain in Karnataka: ಕರ್ನಾಟಕದಲ್ಲಿ ಮೂರ್ನಾಲ್ಕು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಹಾಗೇ, ಆ. 28 ಮತ್ತು 29ರಂದು ಕರ್ನಾಟಕದ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಬಾರಿ ಜೂನ್ ಮತ್ತು ಜುಲೈ ತಿಂಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಿತ್ತು. ಆದರೆ, ಆಗಸ್ಟ್ನಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕಳೆದೆರಡು ತಿಂಗಳಿಗೆ ಹೋಲಿಸಿದರೆ ಮಳೆಯ ಪ್ರಮಾಣ ಇಳಿಮುಖವಾಗಿದೆ. ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಕೂಡ ಮಳೆಯಾಗುವ ಸಾಧ್ಯತೆಯಿದ್ದು, ಆ. 28ರಿಂದ 2 ದಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈಗಾಗಿ, ಈ 13 ಜಿಲ್ಲೆಗಳಲ್ಲಿ ಆ. 28 ಮತ್ತು 29ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದಲೇ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಆ. 27ರವರೆಗೆ ಮಳೆ ಹೆಚ್ಚಾಗಲಿದೆ. ಬಳಿಕ ಆ. 28 ಮತ್ತು 29ರಂದು ಭಾರೀ ಮಳೆಯಾಗಲಿದೆ. ಇಂದಿನಿಂದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಕರ್ನಾಟಕದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ.
ರಾಜ್ಯದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಹಗುರ ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇನ್ನೆರಡು ದಿನ ಮಳೆಯಾಗಲಿದೆ. ಚಿಕ್ಕಬಳ್ಳಾಪುರದ ನಂದಿ ಬೆಟ್ಟದ ಬಳಿ ಮಳೆಯಿಂದ ಭಾರೀ ಭೂಕುಸಿತವಾಗಿದೆ. ಹೀಗಾಗಿ, ರಸ್ತೆಗಳು ಬಂದ್ ಆಗಿವೆ. ರಾತ್ರೋರಾತ್ರಿ ಸುರಿದ ಮಳೆಯಿಂದ ರಸ್ತೆಯ ಪಕ್ಕ ಭೂಕುಸಿತವಾಗಿ, ರಸ್ತೆ ಮಾರ್ಗ ಬಂದ್ ಆಗಿದೆ.
ಈ ಬಾರಿ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ದಕ್ಷಿಣ ಒಳನಾಡಿನ 16 ಜಿಲ್ಲೆಯ ಪೈಕಿ 10 ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿಯ ಮೂರು ಜಿಲ್ಲೆಯಲ್ಲಿಯೂ ಇಂದಿನಿಂದ ಆ. 27ರವರೆಗೆ ವ್ಯಾಪಕ ಮಳೆಯಾಗಲಿದೆ. ತಮಿಳುನಾಡು ಮತ್ತು ಕೇರಳ, ಬಿಹಾರ, ಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಗಳಲ್ಲಿ ಆ. 27ರವರೆಗೆ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಸ್ಸಾಂ, ಮೇಘಾಲಯದಲ್ಲಿ ಇಂದು ಭಾರೀ ಮಳೆಯಾಗಲಿದೆ.
ಕರಾವಳಿಯಲ್ಲಿ ವಾಡಿಕೆಗಿಂತ ಶೇ.18 ಕಡಿಮೆ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಶೇ.31 ಮತ್ತು ದಕ್ಷಿಣ ಒಳನಾಡಿನಲ್ಲಿ ಶೇ.7ರಷ್ಟು ಮಳೆ ಹೆಚ್ಚಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ವಾರದಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಬೆಂಗಳೂರು ಸುತ್ತಮುತ್ತ ಇನ್ನೆರಡು ದಿನ ಮೋಡ ಕವಿದ ವಾತಾವರಣವಿರಲಿದೆ.
ಇಂದು ಮತ್ತು ನಾಳೆ ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ಬಿಹಾರ, ಉತ್ತರಾಖಂಡ, ಉತ್ತರ ಪ್ರದೇಶ, ಕೇರಳ, ತಮಿಳುನಾಡು, ಪುದುಚೆರಿಯಲ್ಲಿ ಭಾರೀ ಮಳೆಯಾಗಲಿದೆ. ಅರುಣಾಚಲಪ್ರದೇಶ, ಸಿಕ್ಕಿಂ, ಒರಿಸ್ಸಾ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರದಲ್ಲಿ ಕೂಡ ಇಂದು ವ್ಯಾಪಕ ಮಳೆಯಾಗಲಿದೆ. ಜಾರ್ಖಂಡ್, ಜಮ್ಮು ಕಾಶ್ಮೀರ, ಲಡಾಖ್, ಹಿಮಾಚಲಪ್ರದೇಶ, ಮಹಾರಾಷ್ಟ್ರ, ಛತ್ತೀಸ್ಗಢ, ಆಂಧ್ರಪ್ರದೇಶ, ಹರಿಯಾಣ, ದೆಹಲಿ, ಪಂಜಾಬ್, ಮಧ್ಯಪ್ರದೇಶ, ಗುಜರಾತ್ನಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ.
ಇದನ್ನೂ ಓದಿ: Karnataka Weather Today: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಆ. 27ರವರೆಗೂ ಕರಾವಳಿಯಲ್ಲಿ ಭಾರೀ ಮಳೆ
(Karnataka weather Today: Heavy Rainfall in Bengaluru and 12 Districts till August 29 Karnataka Rain Weather Forecast)




