ಬೆಂಗಳೂರು, ಮಾರ್ಚ್ 10: ಬೆಂಗಳೂರು (Bengaluru), ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲಿ ಈ ವಾರ ಮುಂಗಾರುಪೂರ್ವ ಮಳೆಯಾಗುವ (ಬೇಸಗೆ ಮಳೆ) (Pre Monsoon Rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ತಾಪಮಾನ ಹೆಚ್ಚುತ್ತಿರುವ ಸಂದರ್ಭದಲ್ಲೇ ಐಎಂಡಿ ಈ ಮುನ್ಸೂಚನೆ ನೀಡಿದೆ. ಮಾರ್ಚ್ 7 ರಂದು ಬೆಂಗಳೂರು ನಗರದಲ್ಲಿ ಈ ವರ್ಷದ ಅತ್ಯಂತ ಗರಿಷ್ಠ ತಾಪಮಾನ ದಾಖಲಾಗಿತ್ತು. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮಾರ್ಚ್ 11 ರಿಂದ 13 ರವರೆಗೆ ಬೆಂಗಳೂರು ನಗರ ಸೇರಿದಂತೆ 12 ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಅತಿಯಾದ ತಾಪಮಾನದ ಕಾರಣ ಮುಂಗಾರಪೂರ್ವ ಮಳೆ ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ಮುಖ್ಯಸ್ಥ ಎನ್ ಪುವಿಯರಸನ್ ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನ ಮತ್ತು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದರೆ, ರಾಜ್ಯದ ಇತರ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಸ್ವಲ್ಪ ಮಟ್ಟಿನ ಮಳೆಯಾದರೂ ತಾಪಮಾನ ಏರಿಕೆಯಿಂದ ಮುಕ್ತಿ ದೊರೆಯದೇ ಇರಬಹುದು. ಮಾರ್ಚ್ 11 ರಂದು ಬೆಂಗಳೂರು ನಗರದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34 ಮತ್ತು 20 ಡಿಗ್ರಿ ಸೆಲ್ಶಿಯಸ್ ಆಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಐಎಂಡಿ ಪ್ರಕಾರ, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ತಾಪಮಾನ ಮತ್ತು ಆರ್ದ್ರತೆಯ ವಾತಾವರಣ ಇರಲಿದೆ.
ಬೆಂಗಳೂರಿನಲ್ಲಿ ಆರೋಗ್ಯ ಸಮಸ್ಯೆ ಇರುವವರು, ಶಿಶುಗಳು, ವೃದ್ಧರು ಮತ್ತು ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರು ಬಿಸಿಲಿಗೆ ಹೋಗುವುದನ್ನು ತಪ್ಪಿಸುವಂತೆ ಐಎಂಡಿ ಎಚ್ಚರಿಕೆ ನೀಡಿದೆ.
ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪೌರಕಾರ್ಮಿಕರಿಗೆ ವಾರದ ರಜೆಯೊಂದಿಗೆ ಅರ್ಧ ದಿನದ ಕೆಲಸವನ್ನು ಘೋಷಿಸುವಂತೆ ಅಖಿಲ ಭಾರತ ಕೇಂದ್ರೀಯ ಕಾರ್ಮಿಕ ಸಂಘಗಳ ಮಂಡಳಿ ಸರ್ಕಾರವನ್ನು ಒತ್ತಾಯಿಸಿದೆ. ಈ ಕುರಿತು ನಗರಾಭಿವೃದ್ಧಿ ಮತ್ತು ಸಮಾಜ ಕಲ್ಯಾಣ ಇಲಾಖೆಗಳಿಗೆ ಪತ್ರ ಬರೆದು ವಿನಂತಿ ಮಾಡಲಾಗಿದೆ.
ಇದನ್ನೂ ಓದಿ: ಮುಂದಿನ ವಾರ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಪೌರಕಾರ್ಮಿಕರಿಗೆ ಕುಡಿಯುವ ನೀರು, ಓಆರ್ಎಸ್ ಮತ್ತು ಮಜ್ಜಿಗೆ ಒದಗಿಸಬೇಕು. ಶಾಖದ ಪ್ರಭಾವದಿಂದ ಕಾರ್ಮಿಕರನ್ನು ರಕ್ಷಿಸಲು ಐ ಶೇಡ್ಸ್, ಟೋಪಿಗಳು ಮತ್ತು ಛತ್ರಿಗಳನ್ನು ಸಹ ಒದಗಿಸಬೇಕು ಎಂದು ಕಾರ್ಮಿಕ ಸಂಘಗಳ ಮಂಡಳಿ ಮನವಿ ಮಾಡಿದೆ.