ಗೃಹಜ್ಯೋತಿ ದುಡ್ಡು ಸರ್ಕಾರ ಕೊಡದಿದ್ರೆ ಜನರಿಂದಲೇ ವಸೂಲಿ? ಎಸ್ಕಾಂಗಳ ಪ್ರಸ್ತಾವಕ್ಕೆ ಬಿಜೆಪಿ ಕಿಡಿ
ಕರ್ನಾಟಕದ ಗೃಹಜ್ಯೋತಿ ಯೋಜನೆಯು ಎಸ್ಕಾಂಗಳಿಗೆ ಸರ್ಕಾರದಿಂದ ಹಣ ಸಂದಾಯವಾಗದ ಕಾರಣ ಸ್ಥಗಿತಗೊಳ್ಳಲಿವೆಯೇ? ಕೆಲವು ಮಾಧ್ಯಮ ವರದಿಗಳು ಇಂಥದ್ದೊಂದು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಈ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. ಸರ್ಕಾರ ಹಣ ಪಾವತಿಸದಿದ್ದರೆ ಎಸ್ಕಾಂಗಳು ವಿದ್ಯುತ್ ಬಿಲ್ ಅನ್ನು ಜನರಿಂದಲೇ ವಸೂಲಿ ಮಾಡಲು ಪ್ರಸ್ತಾಪಿಸಿದ್ದು, ಗೃಹಜ್ಯೋತಿ ರದ್ದಾಗಲಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ.

ಬೆಂಗಳೂರು, ಫೆಬ್ರವರಿ 24: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆಗೆ ಶೀಘ್ರದಲ್ಲಿಯೇ ಎಸ್ಕಾಂಗಳು ಅಂತ್ಯ ಹಾಡಲಿವೆಯೇ? ಇಂತಹದೊಂದು ಅನುಮಾನಕ್ಕೆ ಕೆಲವು ವರದಿಗಳು ಕಾರಣವಾಗಿದ್ದು, ಇದರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗೃಹಜ್ಯೋತಿ ಹಣವನ್ನು ಸರ್ಕಾರ ಮುಂಚಿತವಾಗಿ ಪಾವತಿ ಮಾಡಬೇಕು. ಇಲ್ಲವಾದರೆ, ಆ ದುಡ್ಡನ್ನು ಜನರಿಂದಲೇ ವಸೂಲಿ ಮಾಡಲು ಅವಕಾಶ ಒದಗಿಸಬೇಕು ಎಂದು ಮನವಿ ಮಾಡಿ ಕರ್ನಾಟಕದ ವಿವಿಧ ಎಸ್ಕಾಂಗಳು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಮನವಿ ಮಾಡಿರುವುದಾಗಿ ವರದಿಯಾಗಿದೆ. ಒಂದು ವೇಳೆ ಈ ಪ್ರಸ್ತಾವನೆಗೆ ಅನುಮತಿ ಸಿಕ್ಕಿದರೆ, ಎಸ್ಕಾಂಗಳು ವಿದ್ಯುತ್ ಬಿಲ್ಲನ್ನು ಗ್ರಾಹಕರಿಂದಲೇ ವಸೂಲಿ ಮಾಡಲಿವೆ. ಹಾಗಾದರೆ ಗೃಹಜ್ಯೋತಿ ಯೋಜನೆಯ ಪ್ರಯೋಜನ ಜನರಿಗೆ ಸಿಗಲಾರದು.
ಈ ಮಾಧ್ಯಮ ವರದಿಗಳ ಬೆನ್ನಲ್ಲೇ, ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಜಯೇಂದ್ರ ಹೇಳಿದ್ದೇನು?
ಬಿಟ್ಟಿ ಭಾಗ್ಯಗಳಲ್ಲಿ ಒಂದಾದ ಗೃಹ ಜ್ಯೋತಿ ನಂದಿಸಲು ಎಸ್ಕಾಂಗಳು ಸನ್ನದ್ಧವಾಗಿವೆ. 15 ಬಾರಿ ಬಜೆಟ್ ಮಂಡಿಸಿರುವ ದಾಖಲೆ ತಮ್ಮದೆಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಿಟ್ಟಿ ಭಾಗ್ಯಗಳಿಗೆ ಹಣ ಸರಿದೂಗಿಸಲು ಸಮತೋಲನ ಕಳೆದುಕೊಂಡಿರುವುದು ಅವರು ಅಧಿಕಾರಕ್ಕೆ ಬಂದ ದಿನದಿಂದಲೂ ಅನಾವರಣಗೊಳ್ಳುತ್ತಿದೆ. ಆರ್ಥಿಕ ದೂರದೃಷ್ಟಿತ್ವವಿಲ್ಲದ, ಬದ್ಧತೆಯಿಲ್ಲದ ಮತ ಬ್ಯಾಂಕ್ ಆಧಾರಿತ ಯೋಜನೆಗಳು ಸೊರಗುತ್ತಿದೆ, ಅಭಿವೃದ್ಧಿ ಎನ್ನುವುದು ಗಗನಕುಸುಮವಾಗಿದೆ, ಬೆಲೆ ಏರಿಕೆಯ ಬಿಸಿ ಜನಸಾಮಾನ್ಯರನ್ನು ಹೈರಾಣಾಗಿಸುತ್ತಿದೆ. ಇದರ ನಡುವೆ ಪಂಚ ಗ್ಯಾರಂಟಿಯ ಯೋಜನೆಗಳು ತೋರಿಕೆಗೆ, ಹೇಳಿಕೆಗೆ ಮಾತ್ರ ಎಂಬಂತೆ ಜನರಿಗೆ ತಲುಪುವಲ್ಲಿ ಬಹುತೇಕ ವಿಫಲವಾಗಿವೆ ಎಂದು ವಿಜಯೇಂದ್ರ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಹಣ ಸ್ಥಗಿತಗೊಂಡಂತೆ ಕಾಣುತ್ತಿದೆ, ಅನ್ನಭಾಗ್ಯ ಯೋಜನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕೊಡುವ ಗರೀಬ್ ಕಲ್ಯಾಣ್ ಅನ್ನ ಯೋಜನೆಯ 5 ಕೆಜಿ ಅಕ್ಕಿಯ ಹೊರತುಪಡಿಸಿ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಹೆಚ್ಚುವರಿ 5 ಕೆಜಿಯ ಅಕ್ಕಿಯೂ ಇಲ್ಲ, ಬದಲಾಗಿ ಹಣವೂ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿಲ್ಲ. ಯುವ ನಿಧಿ ಯೋಜನೆ ಅರ್ಜಿ ಕರೆಯುವ ಪ್ರಕಟಣೆಗಳನ್ನು ಬಿಟ್ಟರೆ ಯುವಜನರ ಖಾತೆಗಳಿಗೆ ಜಮೆಯಾದ ಬಗ್ಗೆ ಈವರೆಗೆ ವಿವರಗಳೇ ಲಭ್ಯವಾಗಿಲ್ಲ, ಶಕ್ತಿ ಯೋಜನೆಯಿಂದಾಗಿ ಕೆ.ಎಸ್.ಆರ್.ಟಿ.ಸಿ ಈಗಾಗಲೇ ನಷ್ಟದ ಹಾದಿ ಹಿಡಿದಿದೆ, ಹೆಚ್ಚುವರಿ ದರ ಏರಿಕೆ ಪರೋಕ್ಷವಾಗಿ ಪ್ರಯಾಣಿಕರ ಮೇಲೆ ಹೇರಲಾಗಿದೆ. ಇದೀಗ ಗೃಹ ಜ್ಯೋತಿ ಯೋಜನೆಗೆ ಸರ್ಕಾರ ಎಸ್ಕಾಂ ಗಳಿಗೆ ಹಣ ಪಾವತಿಸದ ಪರಿಣಾಮ ಯೋಜನೆ ಫಲಾನುಭವಿಗಳಿಂದಲೇ ವಸೂಲಿ ಮಾಡುವುದಕ್ಕಾಗಿ ಅಧಿಕಾರಿಗಳು ಸಜ್ಜಾಗಿ ನಿಂತಿದ್ದಾರೆ. ಆ ಮೂಲಕ ಗೃಹ ಜ್ಯೋತಿಗೆ ಇತಿಶ್ರೀ ಹಾಡುವ ಮುನ್ಸೂಚನೆ ನೀಡಿದ್ದಾರೆ ಎಂದು ವಿಜಯೇಂದ್ರ ಪತ್ರಿಕಾ ವರದಿಯ ತುಣುಕನ್ನು ಉಲ್ಲೇಖಿಸಿ ಆರೋಪಿಸಿದ್ದಾರೆ.

ವಿಜಯೇಂದ್ರ ಟ್ವೀಟ್
ಪಂಚ ಭಾಗ್ಯಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೇವಲ ಒಂದೂವರೆ ವರ್ಷದಲ್ಲೇ ಯೋಜನೆಗಳನ್ನು ಕಾರ್ಯಗತ ಮಾಡುವಲ್ಲಿ ಸಂಪೂರ್ಣ ಎಡವಿದೆ ಹಾಗೂ ಸರ್ಕಾರದ ಆಡಳಿತ ವ್ಯವಸ್ಥೆ ನಿಷ್ಕ್ರಿಯಗೊಂಡಿದ್ದು, ಕೃಷಿ ಸೇರಿದಂತೆ ಯಾವುದೇ ಕ್ಷೇತ್ರಗಳ ಅಭಿವೃದ್ಧಿಗೂ ಬಿಡಿಗಾಸು ಇಲ್ಲದೆ ಬರಿಗೈಯಲ್ಲಿ ಕೈ ಚಾಚಿ ಕುಳಿತಿರುವುದು ಕರ್ನಾಟಕದ ದೌರ್ಭಾಗ್ಯವಾಗಿದೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಬಹಿರಂಗ ಪತ್ರ: ಕುತೂಹಲ ಮೂಡಿಸಿದ ನಡೆ
ಕಾಂಗ್ರೆಸ್ಸಿಗರಿಗೆ ಅಧಿಕಾರ ಅನುಭವಿಸಲು ಜನ ಆಯ್ಕೆ ಮಾಡಿಲ್ಲ, ರಾಜ್ಯವನ್ನು ಸಮರ್ಥವಾಗಿ ಮುನ್ನಡೆಸಿ ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವ ನಿರೀಕ್ಷೆಯಲ್ಲಿ ಚುನಾಯಿಸಿದ್ದಾರೆ. ಆದರೆ ಜನರ ನಿರೀಕ್ಷೆ, ಅಪೇಕ್ಷೆಗಳೆಲ್ಲವೂ ಮಣ್ಣು ಪಾಲಾಗುತ್ತಿವೆ. ಸ್ವಪ್ರತಿಷ್ಠೆ, ಸ್ವಾರ್ಥ, ಭ್ರಷ್ಟಾಚಾರದಲ್ಲಿ ಮುಳುಗೇಳುವ ಗುರಿಯನ್ನು ಮಾತ್ರ ಈ ಕಾಂಗ್ರೆಸ್ ಸರ್ಕಾರ ಇಟ್ಟುಕೊಂಡಂತೆ ಕಾಣುತ್ತಿದೆ. 2025 ಜನತೆ ಹಾಗೂ ರಾಜ್ಯದ ಪಾಲಿಗೆ ಕರಾಳ ವರ್ಷವಾಗುವ ಸೂಚನೆ ಕಾಣುತ್ತಿದೆ, ಜನಾಕ್ರೋಶ ಭುಗಿಲೇಳುವ ಮುನ್ನ ಕಾಂಗ್ರೆಸ್ ಸರ್ಕಾರ ರಾಜೀನಾಮೆ ಕೊಟ್ಟು ತಮ್ಮ ವೈಫಲ್ಯವನ್ನು ಒಪ್ಪಿಕೊಳ್ಳಲಿ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:27 pm, Mon, 24 February 25