AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಐಎಡಿಬಿ ಭೂಮಿ ಹಂಚಿಕೆ ಪ್ರಕರಣ: ಖರ್ಗೆ ಕುಟುಂಬಕ್ಕೂ ಬಿಸಿಮುಟ್ಟಿಸಲು ಮುಂದಾದ ರಾಜ್ಯಪಾಲರು

ಒಂದೆಡೆ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟು ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿರುವ ರಾಜ್ಯಪಾಲ ಥಾವರ್​​ ಚಂದ್ ಗೆಹ್ಲೋಟ್ ಇದೀಗ ಇನ್ನಿಬ್ಬರು ಸಚಿವ ವಿರುದ್ಧವೂ ತನಿಖೆಗೆ ಅನುಮತಿ ಕೊಟ್ಟು ಸರ್ಕಾರವನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡಲಿದ್ದಾರೆಯೇ ಎಂಬ ಅನುಮಾನ ಈಗ ಮೂಡಿದೆ. ಇದಕ್ಕೆ ಕಾರಣ, ನಡೆದಿರುವ ಬೆಳವಣಿಗೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ಕೆಐಎಡಿಬಿ ಭೂಮಿ ಹಂಚಿಕೆ ಪ್ರಕರಣ: ಖರ್ಗೆ ಕುಟುಂಬಕ್ಕೂ ಬಿಸಿಮುಟ್ಟಿಸಲು ಮುಂದಾದ ರಾಜ್ಯಪಾಲರು
ಎಂಬಿ ಪಾಟೀಲ್, ಪ್ರಿಯಾಂಕ್ ಖರ್ಗೆ, ಥಾವರ್ ಚಂದ್ ಗೆಹ್ಲೋಟ್
ಪ್ರಸನ್ನ ಗಾಂವ್ಕರ್​
| Updated By: Ganapathi Sharma|

Updated on: Sep 24, 2024 | 10:38 AM

Share

ಬೆಂಗಳೂರು, ಸೆಪ್ಟೆಂಬರ್ 24: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್‌ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನಿವೇಶನ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಕಾನೂನು ತಜ್ಞರಿಂದ ಮಾಹಿತಿ ಪಡೆದಿದ್ದಾರೆ. ಇದರೊಂದಿಗೆ, ಮುಡಾದಲ್ಲಿ ಸಿಎಂ ಸಿದ್ದರಾಮಯ್ಯಗೆ ಕಂಟಕ ಎದುರಾದಂತೆ ಎಐಸಿಸಿ ಅಧ್ಯಕ್ಷರಿಗೂ ಸಮಸ್ಯೆ ಎದುರಾಗಲಿದೆಯಾ ಎಂಬ ಅನುಮಾನ ಮೂಡಿದೆ.

ಖರ್ಗೆ ವಿರುದ್ಧದ ದೂರಿನ ಬಗ್ಗೆ ಈಗಾಗಲೇ ಕಾನೂನು ತಜ್ಞರ ಮಾಹಿತಿ ಪಡೆದಿದ್ದ ರಾಜ್ಯಪಾಲರು, ದೂರಿನಲ್ಲಿ ದಾಖಲಾದ ಅಂಶಗಳ ಕೂಲಂಕುಶ ಮಾಹಿತಿಯೊಂದಿಗೆ ಅಭಿಪ್ರಾಯ ನೀಡುವಂತೆ ಸೂಚನೆ ನೀಡಿದ್ದರು. ಇದೀಗ ಕಾನೂನು ತಜ್ಞರು ರಾಜ್ಯಪಾಲರಿಗೆ ಅಭಿಪ್ರಾಯ ಸಲ್ಲಿಕೆ ಮಾಡಿದ್ದಾರೆ.

ಕೆಐಎಡಿಬಿ ಭೂಮಿ ಹಂಚಿಕೆ ಸಂಬಂಧ ತಜ್ಞರ ಅಭಿಪ್ರಾಯವೇನು?

ರಾಜ್ಯಪಾಲರಿಗೆ ಸಲ್ಲಿಕೆ ಮಾಡಿರುವ ಅಭಿಪ್ರಾಯದಲ್ಲಿ ತಜ್ಞರು, ತರಾತುರಿಯಲ್ಲಿ ಭೂಮಿ ಹಂಚಿಕೆ ಮಾಡಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಅರ್ಜಿ ಸಲ್ಲಿಕೆಯಾದ ಎರಡೇ ದಿನಗಳಲ್ಲಿ ಭೂ ಹಂಚಿಕೆ ಪ್ರಕ್ರಿಯೆ ಮಾಡಿರುವುದರಿಂದ ಪ್ರಶ್ನೆ ಮೂಡಿದೆ ಎಂದಿದ್ದಾರೆ.

ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್​ಗೆ ಎದುರಾಗಲಿದೆಯೇ ಕಂಟಕ?

ಇದೀಗ ರಾಜ್ಯಪಾಲರು ತಜ್ಞರ ಅಭಿಪ್ರಾಯ ಪರಿಶೀಲಿಸಿ ಪ್ರಕರಣದ ಸಂಬಂಧ ಹೆಚ್ಚಿನ ತನಿಖೆಗೆ ಆದೇಶಿಸುವ ಸಾಧ್ಯತೆ ಇದೆ. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಎಂಬಿ ಪಾಟೀಲ್ ವಿರುದ್ಧ ತನಿಖೆಗೆ ಅನುಮತಿ ನೀಡುವ ಸಾಧ್ಯತೆ ಇದೆ. ನಿಯಮ ಲೋಪ ಆಧರಿಸಿ ರಾಜ್ಯಪಾಲರಿಂದ ತನಿಖೆಗೆ ಆದೇಶ ಸಾಧ್ಯತೆ ಇದೆ.

ಇದನ್ನೂ ಓದಿ: ತಮ್ಮ ಕುಟುಂಬದ ವಿರುದ್ಧ ಸಿಎ ಸೈಟ್ ಹಂಚಿಕೆ ಆರೋಪಕ್ಕೆ ಸ್ಪಷ್ಟನೆ ನೀಡಿದ ಪ್ರಿಯಾಂಕ್ ಖರ್ಗೆ

ಒಂದು ವೇಳೆ ಪ್ರಿಯಾಂಕ್ ಖರ್ಗೆ ಹಾಗೂ ಎಂಬಿ ಪಾಟೀಲ್ ವಿರುದ್ಧ ರಾಜ್ಯಪಾಲರು ತನಿಖೆಗೆ ಆದೇಶಿಸಿದಲ್ಲಿ ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ನಡುವಣ ಸಂಘರ್ಷ ತಾರಕ್ಕೇರಲಿದೆ. ಈಗಾಗಲೇ ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಸರ್ಕಾರ ಸಿಡಿದೆದ್ದಿದೆ. ವಿವಿಗಳಿಗೆ ಕುಲಪತಿ ನೇಮಕ ವಿಚಾರದಲ್ಲಿ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ನಿಟ್ಟಿನಲ್ಲಿ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದೀಗ ಮತ್ತೊಂದು ಸುತ್ತಿನ ಕದನಕ್ಕೆ ಅಖಾಡ ಸಿದ್ಧವಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ