
ತುಮಕೂರು, ಸೆಪ್ಟೆಂಬರ್ 18: ಕ್ಷೇತ್ರ ಮರುವಿಂಗಡಣೆ ಖಚಿತವಾಗಿದ್ದು, ಮಧುಗಿರಿ ಕ್ಷೇತ್ರ ರಚನೆಯಾದರೆ ತಾವು ಚುನಾವಣೆಗೆ ಸ್ಪರ್ಧಿಸುವುದಾಗಿ ಮಾಜಿ ಸಚಿವ, ಶಾಸಕ ಕೆಎನ್ ರಾಜಣ್ಣ ಶುಕ್ರವಾರ ಹೇಳಿದ್ದಾರೆ. ಮಹಿಳಾ ಮೀಸಲಾತಿ ವಿಧೇಯಕಕ್ಕೂ ತಮ್ಮ ಬೆಂಬಲವಿದೆ ಎಂದು ಅವರು ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ರಾಜಣ್ಣ, ಕ್ಷೇತ್ರ ಮರುವಿಂಗಡಣೆ ಬಳಿಕ ಮಧುಗಿರಿ ಉಪವಿಭಾಗಕ್ಕೆ ಒಂದು ಲೋಕಸಭಾ ಕ್ಷೇತ್ರ ಬರುವ ಸಾಧ್ಯತೆಯಿದೆ. ಆಗ ತಾವು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.
ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಕೇಂದ್ರ ಸರ್ಕಾರ ಮನಸ್ಸು ಮಾಡಿದರೆ ಯಾವುದೇ ವಿಧೇಯಕ ಅಂಗೀಕಾರವಾಗುವುದು ಕಷ್ಟವಲ್ಲ. ತಾವು ಮಹಿಳಾ ಮೀಸಲಾತಿ ವಿಧೇಯಕದ ಪರವಾಗಿರುವುದಾಗಿ ಹೇಳಿದ್ದಾರೆ. ವಿಶೇಷವೆಂದರೆ, ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡಿರಲಿಲ್ಲ. ಇದೀಗ ಕಾಂಗ್ರೆಸ್ ಹೈಕಮಾಂಡ್ ನಿಲುವಿಗೂ ಮೀರಿ ರಾಜಣ್ಣ ಮಹಿಳಾ ಮೀಸಲಾತಿ ವಿಧೇಯಕ ಪರ ಹೇಳಿಕೆ ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದದ ಪ್ರಶ್ನಾತೀತ ನಾಯಕರು ಎಂದು ರಾಜಣ್ಣ ಹೇಳಿದ್ದಾರೆ. ಸಿದ್ದರಾಮಯ್ಯ ಬಲವಾಗಿದ್ದರೆ ಕಾಂಗ್ರೆಸ್ ಪಕ್ಷವೂ ಬಲವಾಗಿರುತ್ತದೆ. ಅವರು ದುರ್ಬಲರಾದರೆ ಪಕ್ಷವೂ ದುರ್ಬಲಗೊಳ್ಳುತ್ತದೆ ಎಂದು ಗುರುವಾರ ಮಧುಗಿರಿಯಲ್ಲಿ ಹೇಳಿಕೆ ನೀಡಿದ್ದರು. ಇದೀಗ ಮುಂದುವರಿದು, ಸಿದ್ದರಾಮಯ್ಯ ಅವರು ತಮ್ಮನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಲು ಪ್ರಯತ್ನಿಸಿದ್ದರು. ಆದರೆ ಆ ಪ್ರಯತ್ನಕ್ಕೆ ಪ್ರತಿಫಲ ಸಿಕ್ಕಿಲ್ಲ ಎಂಬ ಕಾರಣಕ್ಕೆ ಅವರ ಮಾತು ನಡೆಯುವುದಿಲ್ಲ ಎಂದು ಹೇಳುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ವಿಚಾರದಲ್ಲಿ ತಮಗೆ ಯಾವುದೇ ಹಿನ್ನಡೆಯಾಗಿಲ್ಲ ಎಂದಿರುವ ಅವರು, ಸಿದ್ದರಾಮಯ್ಯ ಅವರ ಪ್ರಯತ್ನಕ್ಕೆ ಫಲ ಸಿಗದಿರುವುದನ್ನು ವೈಯಕ್ತಿಕ ಹಿನ್ನಡೆಯಾಗಿ ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ. ‘ನಾನೀಗ ಮುಖ್ಯಮಂತ್ರಿ ಅಲ್ಲ, ನನ್ನ ಮಾತು ಎಷ್ಟು ನಡೆಯುತ್ತದೆ? ಎಷ್ಟು ನಡೆಯುವುದಿಲ್ಲ ಎಂಬುದು ನನಗೆ ಮಾತ್ರ ಗೊತ್ತು’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಗುರುವಾರ ಮಾರ್ಮಿಕವಾಗಿ ಹೇಳಿದ್ದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತುಮಕೂರಿಗೆ ಆಗಮಿಸಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಕಾರ್ಯಕ್ರಮಗಳ ಬಳಿಕ ಸಿದ್ದರಾಮಯ್ಯ ಅವರು ತುಮಕೂರಿನ ಕ್ಯಾತಸಂದ್ರದಲ್ಲಿರುವ ರಾಜಣ್ಣ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ರಾಜಣ್ಣ ನಿವಾಸದಲ್ಲೇ ಊಟ ಮಾಡಲಿದ್ದು, ಊಟದ ವೇಳೆ ರಾಜಕೀಯ ವಿಚಾರಗಳ ಬಗ್ಗೆಯೂ ಚರ್ಚೆ ನಡೆಯುವ ನಿರೀಕ್ಷೆಯಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ಸ್ಟ್ರಾಂಗ್ ಇದ್ರೆ ಕಾಂಗ್ರೆಸ್ ಪಕ್ಷವೂ ಸ್ಟ್ರಾಂಗ್, ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ