ಕಾದಾಟದ ವೇಳೆ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಚಿಕಿತ್ಸೆ ಫಲಿಸದೆ ಸಾವು

ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಆನೆಗಳ ಕಾದಾಟದಿಂದ ಗಂಭೀರ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವನ್ನಪ್ಪಿದೆ. ಕಾವೇರಿ ನದಿಯಲ್ಲಿ ಸ್ನಾನಕ್ಕೆ ಕರೆದೊಯ್ದಾಗ ಕಂಜನ್ ಮತ್ತು ಮಾರ್ತಾಂಡ ಆನೆಗಳ ನಡುವೆ ಘರ್ಷಣೆ ನಡೆದಿತ್ತು. ಗಾಯಾಳು ಆನೆಗೆ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಅದಕ್ಕೆ ಸ್ಪಂದಿಸದೆ ಕೊನೆಯುಸಿರು ಎಳೆದಿರೋದಾಗಿ ಡಿಎಫ್​​ಒ ಮಾಹಿತಿ ನೀಡಿದ್ದಾರೆ. ಆನೆಗಳ ಘರ್ಷಣೆ ವೇಳೆ ಸಿಲುಕಿ ಪ್ರವಾಸಿ ಮಹಿಳೆಯೋರ್ವರು ಕೂಡ ನಿನ್ನೆ ಮೃತಪಟ್ಟಿದ್ದರು.

ಕಾದಾಟದ ವೇಳೆ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಚಿಕಿತ್ಸೆ ಫಲಿಸದೆ ಸಾವು
ಮಾರ್ತಾಂಡ ಆನೆ ಸಾವು
Edited By:

Updated on: May 20, 2026 | 12:40 PM

ಮಡಿಕೇರಿ, ಮೇ 19: ಆನೆಗಳ ನಡುವಿನ ಕಾದಾಟದಿಂದಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ನಿನ್ನೆ (ಮೇ 18) ಕುಶಾಲನಗರದ ದುಬಾರೆ ಕ್ಯಾಂಪ್​​ನಲ್ಲಿ ನಡೆದಿತ್ತು. ಆನೆಗಳ ನಡುವೆ ಸಿಲುಕಿ ಪ್ರವಾಸಕ್ಕೆ ಬಂದಿದ್ದ ಚೆನ್ನೈ ಮೂಲದ ಮಹಿಳೆ ದಾರುಣವಾಗಿ ಉಸಿರು ಚೆಲ್ಲಿದ್ದರು. ಅವರ ಮಗು ಮತ್ತು ಪತಿ ಕೂದಲೆಳೆ ಅಂತರದಲ್ಲಿ ಬಚಾವ್​​ ಆಗಿದ್ದರು. ಆ ಬೆನ್ನಲ್ಲೇ ಕಾದಾಟದ ವೇಳೆ ಗಂಭಿರವಾಗಿ ಗಾಯಗೊಂಡಿದ್ದ ಆನೆ ಮಾರ್ತಾಂಡ ಕೂಡ ಚಿಕಿತ್ಸೆ ಫಲಕಾರಿಯಾಗದೆ ಇಂದು (ಮೇ 19) ಮೃತಪಟ್ಟಿದೆ.

ಮುಖ್ಯಾಂಶಗಳು

  • ದುಬಾರೆ ಕ್ಯಾಂಪ್​​ನಲ್ಲಿ ಚಿಕಿತ್ಸೆ ಫಲಿಸದೆ ಮಾರ್ತಾಂಡ ಆನೆ ಸಾವು
  • ಕಾದಾಟದ ವೇಳೆ ನಿನ್ನೆ ಗಂಭೀರ ಗಾಯಗೊಂಡಿದ್ದ ಮಾರ್ತಾಂಡ
  • ಸ್ನಾನಕ್ಕೆ ಕರೆದೊಯ್ದದ್ದ ವೇಳೆ ಅಟ್ಯಾಕ್​​ ನಡೆಸಿದ್ದ ಕಂಜನ್​​ ಆನೆ

ನಿನ್ನೆ ಸ್ನಾನಕ್ಕೆಂದು ಕಾವೇರಿ ನದಿಗೆ ಮಾವುತರು ಕಂಜನ್​​ ಮತ್ತು ಮಾರ್ತಾಂಡ ಆನೆಗಳನ್ನು ಕರೆತಂದಿದ್ದರು. ಈ ವೇಳೆ ಅವುಗಳ ನಡುವೆ ಕಾದಾಟ ಆರಂಭವಾಗಿದ್ದು, ದಂತದಿಂದ ತಿವಿದು ಕಂಜನ್​​ ಆನೆ ಮಾರ್ತಾಂಡ ಆನೆಯನ್ನು ನೆಲಕ್ಕೆ ಉರುಳಿಸಿತ್ತು. ಆ ಬಳಿಕ ಕೆಲ ಸಮಯದವರೆಗೂ ಆನೆಗಳು ಕಾದಾಡಿದ್ದವು. ಮಾವುತರು ಎಷ್ಟೇ ಪ್ರಯತ್ನ ಪಟ್ಟರೂ ಮದವೇರಿದಂತೆ ವರ್ತಿಸುತ್ತಿದ್ದ ಕಂಜನ್​​ ಆನೆಯನ್ನು ನಿಯಂತ್ರಿಸಲು ಸಾಧ್ಯವಾಗಿರಲಿಲ್ಲ. ಈ ವೇಳೆ ಮಾರ್ತಾಂಡ ಆನೆ ಗಂಭೀರವಾಗಿ ಗಾಯಗೊಂಡಿತ್ತು. ಗಾಯಗೊಂಡಿದ್ದ ಮಾರ್ತಾಂಡಗೆ ಶಿಬಿರದಲ್ಲೇ ಚಿಕಿತ್ಸೆ ನೀಡಲಾಗ್ತಿತ್ತು. ಆದರೆ ಅಂತಿಮವಾಗಿ ಚಿಕಿತ್ಸೆ ಫಲಕಾರಿಯಾಗದೆ ಅದು ಇಂದು ಮೃತಪಟ್ಟಿದೆ ಎಂದು ಡಿಎಫ್ಒ ಅಭಿಷೇಕ್​​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ದುಬಾರೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಅವುಗಳ ನಡುವೆ ಸಿಲುಕಿ ಮಹಿಳೆ ಸಾವು

ವೈರಲ್​​ ಆಗಿದ್ದ ಆನೆಗಳ ಕಾದಾಟದ ವಿಡಿಯೋ

ಕಾವೇರಿ ನದಿಯಲ್ಲಿಯೇ ಆನೆಗಳ ನಡುವೆ ಕಾದಾಟ ನಡೆದು ಅವುಗಳ ನಡುವೆ ಸಿಲುಕಿ ಮಹಿಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್​​ ಆಗಿತ್ತು. ಆ ಬೆನ್ನಲ್ಲೇ ಅರಣ್ಯ ಸಚಿವರು ಇಂತಹ ಘಟನೆಗಳ ತಡೆಗೆ ಕ್ರಮಕ್ಕೆ ಆದೇಶಿಸಿದ್ದರು. ರಾಜ್ಯದಲ್ಲಿರುವ ಎಲ್ಲ ಸಾಕಾನೆ ಶಿಬಿರದಲ್ಲಿ ಮೇ 19ರಿಂದಲೇ ಪ್ರವಾಸಿಗರು ಆನೆಯ ಬಳಿ ಹೋಗದಂತೆ, ಕನಿಷ್ಠ 100 ಅಡಿ ದೂರದಲ್ಲಿ ನಿಂತು ಆನೆ ಮೈತೊಳೆಯುವುದನ್ನು ವೀಕ್ಷಿಸುವಂತೆ ಮತ್ತು ಯಾವುದೇ ಕಾರಣಕ್ಕೂ ಆನೆಗಳ ಬಳಿ ಹೋಗಿ ಸೆಲ್ಫಿ, ಫೋಟೋ ತೆಗೆಸಿಕೊಳ್ಳಲು, ಮೈತೊಳೆಯಲು ಅವಕಾಶ ನೀಡಬಾರದು. ಬಾಳೆಹಣ್ಣು, ಬೆಲ್ಲ, ಕಬ್ಬು ಇತ್ಯಾದಿ ಯಾವುದೇ ಆಹಾರವನ್ನು ಪ್ರವಾಸಿಗರ ಕೈಯಿಂದ ಆನೆಗಳಿಗೆ ತಿನ್ನಸಬಾರದು ಎಂದು ಆದೇಶಿಸಿಲು ಸೂಚಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

 

Published On - 12:43 pm, Tue, 19 May 26

Loading...
Unable to load recommendations.
Follow Us