ದಯವಿಟ್ಟು ಕೋಲಾರದಲ್ಲಿ ಕಾಂಗ್ರೆಸ್ ಬೆಂಬಲಿಸಿ: ಕಾಂಗ್ರೆಸ್ ಶಾಸಕ ನಾರಾಯಣಸ್ವಾಮಿ ಕಣ್ಣೀರು

ಸಚಿವ ಕೆಎಚ್​​ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳ ಮಧ್ಯೆ ಕೋಲಾರ ಕಾಂಗ್ರೆಸ್ ಟಿಕೆಟ್​ಗಾಗಿ ಹಗ್ಗಜಗ್ಗಾಟ ನಡೆಯುತ್ತಿದೆ. ಈ ನಡುವೆ ಎರಡೂ ಬಣಗಳಿಂದ ದೂರ ಉಳಿದಿರುವ ಬಂಗಾರಪೇಟೆ ಶಾಸಕ ಎಸ್​ಎನ್​ ನಾರಾಯಣಸ್ವಾಮಿ ಇಂದು ಕಣ್ಣೀರು ಸುರಿಸಿದ್ದಾರೆ. ದಯವಿಟ್ಟು ಕೋಲಾರದಲ್ಲಿ ಕಾಂಗ್ರೆಸ್ ಬೆಂಬಲಿಸಿ ಎಂದು ಕಣ್ಣೀರು ಹಾಕಿದರು.

ದಯವಿಟ್ಟು ಕೋಲಾರದಲ್ಲಿ ಕಾಂಗ್ರೆಸ್ ಬೆಂಬಲಿಸಿ: ಕಾಂಗ್ರೆಸ್ ಶಾಸಕ ನಾರಾಯಣಸ್ವಾಮಿ ಕಣ್ಣೀರು
ದಯವಿಟ್ಟು ಕೋಲಾರದಲ್ಲಿ ಕಾಂಗ್ರೆಸ್ ಬೆಂಬಲಿಸಿ ಎಂದು ಹೇಳುತ್ತಲೇ ಕಣ್ಣೀರು ಹಾಕಿದ ಬಂಗಾರಪೇಟೆ ಕಾಂಗ್ರೆಸ್ ಶಾಸಕ ನಾರಾಯಣಸ್ವಾಮಿ
Edited By: Rakesh Nayak Manchi

Updated on: Mar 24, 2024 | 4:43 PM

ಕೋಲಾರ, ಮಾ.24: ಸಚಿವ ಕೆಎಚ್​​ ಮುನಿಯಪ್ಪ (KH Muniyappa) ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ (Ramesh Kumar) ಬಣಗಳ ಮಧ್ಯೆ ಕೋಲಾರ ಕಾಂಗ್ರೆಸ್ ಟಿಕೆಟ್​ಗಾಗಿ ಹಗ್ಗಜಗ್ಗಾಟ ನಡೆಯುತ್ತಿದೆ. ಈ ನಡುವೆ ಎರಡೂ ಬಣಗಳಿಂದ ದೂರ ಉಳಿದಿರುವ ಬಂಗಾರಪೇಟೆ ಶಾಸಕ ಎಸ್​ಎನ್​ ನಾರಾಯಣಸ್ವಾಮಿ (SN Narayanaswamy) ಇಂದು ಸಭೆಯಲ್ಲಿ ಕಣ್ಣೀರು ಹಾಕುತ್ತಾ, ದಯವಿಟ್ಟು ಕೋಲಾರದಲ್ಲಿ (Kolar) ಕಾಂಗ್ರೆಸ್ ಬೆಂಬಲಿಸಿ ಎಂದು ಮನವಿ ಮಾಡಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನಲೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಹಿರಿಯ ಶಾಸಕ ನಾರಾಯಣಸ್ವಾಮಿ ನೇತೃತ್ವದಲ್ಲಿ ಇಂದು ಸಭೆ ನಡೆಯಿತು. ಸಭೆಯಲ್ಲಿ ಬಲಗೈ ಸಮಾಜಕ್ಕೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಒತ್ತಾಯಿಸಿದ ಶಾಸಕ ನಾರಾಯಣಸ್ವಾಮಿ, ಕಳೆದ 5 ವರ್ಷದಲ್ಲಿ ನಾನು ಬಿಜೆಪಿ ಸಂಸದರಿಂದ ಭಾರೀ ನೋವು ಅನುಭವಿಸಿದ್ದೇನೆ, ವ್ಯಾಪಾರ, ವಹಿವಾಟು ಸೇರಿ 100 ಕೋಟಿ ನಷ್ಟವಾಗಿದೆ ಎಂದರು.

ಲೋಕಸಭೆ ಚುನಾವಣೆ ಹಿನ್ನಲೆ ನನ್ನ ಮಗಳ ಮದುವೆಯನ್ನು ಮುಂದೂಡಿದ್ದೇನೆ. ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಅದು ನನ್ನ ಬದ್ಧತೆ ಇದಾಗಿದೆ. ಯಾರೂ ಮೈಮರೆಯಬೇಡಿ. ದಯವಿಟ್ಟು ಕೋಲಾರದಲ್ಲಿ ಕಾಂಗ್ರೆಸ್ ಬೆಂಬಲಿಸಿ ಎಂದು ನಾರಾಯಣಸ್ವಾಮಿ ಕಣ್ಣೀರು ಹಾಕಿದರು.

ಇದನ್ನೂ ಓದಿ: ಕೋಲಾರ ಕಾಂಗ್ರೆಸ್ ಬಣ ರಾಜಕೀಯ ತಾರಕಕ್ಕೆ: ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಕೊಡಿಸಲು ಮುನಿಯಪ್ಪ ಪಟ್ಟು

ನಾವು ಬಲಗೈ ಸಮಾಜದ ಸಿಎಂ ಮುನಿಯಪ್ಪ ಅವರಿಗೆ ಟಿಕೆಟ್ ನೀಡಲು ಬೇಡಿಕೆ ಇಟ್ಟಿದ್ದೇವೆ. ಇಲ್ಲವಾದರೆ, ಟಿಕೆಟ್ ಯಾರಿಗೆ ಕೊಟ್ಟರೂ ಪಕ್ಷದ ಪರ ನಾವು ಕೆಲಸ ಮಾಡುತ್ತೇವೆ. ಪಕ್ಷ ಯಾರಿಗೇ ಟಿಕೆಟ್ ಕೊಟ್ಟರು ಬೆಂಬಲ ಸೂಚಿಸಿ, ಕೆಲಸ ಮಾಡುವಂತೆ ಕಾರ್ಯಕರ್ತರಿಗೆ ನಾರಾಯಣಸ್ವಾಮಿ ಕರೆ ನೀಡಿದರು. ಸಭೆಯಲ್ಲಿ ಬಂಗಾರಪೇಟೆ ತಾಲೂಕಿನ ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗಿಯಾದರು.

ಕೋಲಾರದಲ್ಲಿ ಬಣ ರಾಜಕೀಯ ತಾರಕಕ್ಕೇರಿದೆ. ಸಚಿವ ಕೆಎಚ್​ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳ ನಡುವಣ ತಿಕ್ಕಾಟ ಹೆಚ್ಚಾಗಿದೆ. ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ನೀಡುವಂತೆ ಮುನಿಯಪ್ಪ ಪಟ್ಟು ಹಿಡಿದಿದ್ದರೆ, ಅವರಿಗೆ ಟಿಕೆಟ್ ನೀಡಿದರೆ ಕೆಲಸವೇ ಮಾಡುವುದಿಲ್ಲ ಎಂದು ರಮೇಶ್ ಕುಮಾರ್ ಬಣ ಪಟ್ಟು ಹಿಡಿದಿದೆ. ಈ ನಡುವೆ, ತಮ್ಮ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂಬ ಬೇಡಿಕೆಯನ್ನು ಮುಸ್ಲಿಂ ಸಮುದಾಯ ಮುಂದಿಟ್ಟಿದೆ.

ಅದಾಗ್ಯೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮ್ಮತಿಸಿದರೆ ಕೋಲಾರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚಿಕ್ಕಪೆದ್ದಣ್ಣ ಕಣಕ್ಕಿಳಿಯುವುದು ಬಹುತೇಕ ಖಚಿತ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
Follow Us