ತುಂಗಭದ್ರಾ ಡ್ಯಾಂ ನೂತನ ಕ್ರಸ್ಟ್ ಗೇಟ್ಗಳ ಲೋಕಾರ್ಪಣೆಗೆ ಜಲಸಂಪನ್ಮೂಲ ಸಚಿವರೇ ಗೈರು: ಸ್ಪಷ್ಟನೆ ನೀಡಿದ ರಾಮಲಿಂಗಾರೆಡ್ಡಿ
Koppal News: ತುಂಗಭದ್ರಾ ಜಲಾಶಯಕ್ಕೀಗ ಹೊಸ ಕಳೆ ಬಂದಿದೆ. ಮೂರು ರಾಜ್ಯದ ಮುಖ್ಯಮಂತ್ರಿಗಳು ಇಂದು ನೂತನ ಕ್ರಸ್ಟ್ ಗೇಟ್ ಲೋಕಾರ್ಪಣೆ ಮಾಡಿದರು. ಇನ್ನು ಈ ಕಾರ್ಯಕ್ರಮಕ್ಕೆ ಹಾಜರಾಗಬೇಕಿದ್ದ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಗೈರಾಗಿದ್ದಾರೆ. ಈ ಬೆನ್ನಲ್ಲೇ ಮತ್ತೆ ಮುನಿಸಿಕೊಂಡರಾ ಎಂಬ ಮಾತುಗಳು ಕೇಳಿಬಂದಿವೆ. ಆದರೆ ಇದೀಗ ಈ ಬಗ್ಗೆ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಮುಖ್ಯಾಂಶಗಳು
- ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್ಗಳ ಲೋಕಾರ್ಪಣೆ
- ಕಾರ್ಯಕ್ರಮಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಗೈರು
- ಗೈರಾದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ರಾಮಲಿಂಗಾರೆಡ್ಡಿ
ಕೊಪ್ಪಳ, ಜೂನ್ 25: ರೈತರ ಜೀವನಾಡಿ ತುಂಗಭದ್ರಾ ಜಲಾಶಯದ (TB Dam) ನೂತನ ಕ್ರಸ್ಟ್ ಗೇಟ್ಗಳ ಲೋಕಾರ್ಪಣೆ ಆಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಮೂರು ರಾಜ್ಯದ ಮುಖ್ಯಮಂತ್ರಿಗಳು ಸಾಕ್ಷಿಯಾದರು. ಆದರೆ ಕಳೆದ ವಾರ ಕಾರ್ಯಕ್ರಮದ ಪೂರ್ವ ಸಿದ್ಧತೆ ಸಭೆ ಮಾಡಿದ್ದ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಮಾತ್ರ ಕಾರ್ಯಕ್ರಮಕ್ಕೆ ಗೈರಾದರು. ಹೀಗಾಗಿ ತಮ್ಮ ಖಾತೆ ಬಗ್ಗೆ ಮತ್ತೆ ಮುನಿಸಿಕೊಂಡ್ರಾ ಎಂಬ ಮಾತುಗಳು ಕೇಳಿಬಂದಿದ್ದವು. ಈ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ರಾಮಲಿಂಗಾರೆಡ್ಡಿ ಮಗನ ಮದುವೆ ಇದ್ದ ಕಾರಣ ಕಾರ್ಯಕ್ರಮಕ್ಕೆ ಗೈರಾಗಿದ್ದೇನೆ ಎಂದಿದ್ದಾರೆ.
ಸಚಿವ ರಾಮಲಿಂಗಾರೆಡ್ಡಿ ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?
ಈ ಬಗ್ಗೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಮಗನ ಮದುವೆ ಇದ್ದ ಕಾರಣದಿಂದ ಕಾರ್ಯಕ್ರಮಕ್ಕೆ ಗೈರಾಗಿದ್ದೇನೆ. ಒಂದು ವರ್ಷದ ಹಿಂದೆಯೇ ಮಗನ ಮದುವೆ ನಿಗದಿಯಾಗಿತ್ತು. ತಿರುಪತಿಯಲ್ಲಿ ಮದುವೆ ಇದಿದ್ದರಿಂದ ಕಾರ್ಯಕ್ರಮಕ್ಕೆ ಗೈರಾಗಿದ್ದೇನೆ. ಈ ಬಗ್ಗೆ ಸಿಎಂ ಡಿಕೆ ಶಿವಕುಮಾರ್, ಸಂಬಂಧಿಸಿದವರ ಗಮನಕ್ಕೆ ತರಲಾಗಿತ್ತು. ಜೂನ್ 18ರಂದೇ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದ್ದೆ. ಕಾರ್ಯಕ್ರಮ ನಡೆಯಲು ಎಲ್ಲ ರೀತಿಯ ಸಭೆ ನಡೆಸಿ ಕ್ರಮ ಕೈಗೊಂಡಿದ್ದೇನೆ ಎಂದು ಸಚಿವ ರಾಮಲಿಂಗಾರೆಡ್ಡಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ಗಳ ಲೋಕಾರ್ಪಣೆ ವಿಚಾರಕ್ಕೆ ಆರ್.ಅಶೋಕ್ ಕಿಡಿ
ಇನ್ನು ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ಗಳ ಲೋಕಾರ್ಪಣೆ ವಿಚಾರದ ಬಗ್ಗೆ ವಿಧಾನಸೌಧದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಕ್ರಸ್ಟ್ ಗೇಟ್ ಅಳವಡಿಸಬೇಕೆಂದು ಡಿಮ್ಯಾಂಡ್ ಮಾಡಿದ್ದು ನಾನು. ಗೇಟ್ ಅಳವಡಿಕೆಗೆ ಹಣ ಬಿಡುಗಡೆ ಮಾಡಿದ್ದು ಸಿದ್ದರಾಮಯ್ಯ. ಒತ್ತಾಯ ಮಾಡಿದವರು ಮತ್ತು ಹಣ ಬಿಡುಗಡೆ ಮಾಡಿದವರನ್ನು ಕರೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ತುಂಗಭದ್ರಾ ಜಲಾಶಯದ ಹೊಸ ಗೇಟ್ಗಳ ಉದ್ಘಾಟನೆ
ನಾನು ಮೂರು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದ್ದೇನೆ. ಸಿದ್ದರಾಮಯ್ಯರನ್ನು ಮೂಲೆಗುಂಪು ಮಾಡಲು ಆಹ್ವಾನ ಮಾಡಿಲ್ಲ. ಸಿದ್ದರಾಮಯ್ಯರನ್ನು ಸಿಎಂ ಡಿಕೆ ಶಿವಕುಮಾರ್ ಮೂಲೆಗುಂಪು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:49 pm, Thu, 25 June 26




