
ಬೆಂಗಳೂರು, ಸೆಪ್ಟೆಂಬರ್ 14: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ₹5 ಕೋಟಿಗೂ ಹೆಚ್ಚು ಹಣದ ವಹಿವಾಟು ನಡೆದಿರುವುದು ಸಿಐಡಿ ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಪೈಕಿ ₹85 ಲಕ್ಷ ಹಣ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿರುವ ಮಾಹಿತಿ ದೊರೆತಿದೆ. ಹೆಚ್ಚಿನ ವಹಿವಾಟು ನಗದು ರೂಪದಲ್ಲಿ ನಡೆದಿರುವ ಸಾಧ್ಯತೆಯೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಇದುವರೆಗೆ 273 ಮಂದಿಯನ್ನು ವಿಚಾರಣೆ ನಡೆಸಿದ್ದಾರೆ. 15 ಅಭ್ಯರ್ಥಿಗಳು ಸೇರಿದಂತೆ ಕೆಲ ಆರೋಪಿಗಳಿಂದ ತಪ್ಪೊಪ್ಪಿಗೆ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಬೀದರ್ನ ಸೌಹಾರ್ದ ಬ್ಯಾಂಕ್ ಮ್ಯಾನೇಜರ್ರನ್ನು ವಿಚಾರಣೆ ನಡೆಸಿರುವ ಅಧಿಕಾರಿಗಳು, ಬಸವರಾಜ್ ಕನ್ನಾಳೆಯೊಂದಿಗಿನ ಹಣಕಾಸಿನ ವ್ಯವಹಾರಗಳ ಕುರಿತು ಮಾಹಿತಿ ಪಡೆದಿದ್ದಾರೆ. ಮತ್ತೊಂದೆಡೆ, ಜ್ಞಾನೇಂದ್ರ ಅವರೊಂದಿಗೆ ಸಂಪರ್ಕದಲ್ಲಿದ್ದ ಯುವತಿಯೊಬ್ಬರ ಬಳಿಯಿದ್ದ ₹23 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಸಿಐಡಿ ವಶಪಡಿಸಿಕೊಂಡಿದೆ ಎಂದೂ ಮೂಲಗಳು ತಿಳಿಸಿವೆ.
ಪ್ರಕರಣದಲ್ಲಿ ಆರೋಪಿಯಾಗಿರುವ ಕೆಪಿಎಸ್ಸಿ ಸದಸ್ಯೆ ಶಾಂತಾ ಹೊಸಮನಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮತ್ತೊಮ್ಮೆ ನೋಟಿಸ್ ನೀಡಲು ಸಿಐಡಿ ಸಿದ್ಧತೆ ನಡೆಸಿದೆ. ಇದರ ನಡುವೆ ಕೆಪಿಎಸ್ಸಿಯ ಮೂರು ನೇಮಕಾತಿ ಪ್ರಕ್ರಿಯೆಗಳಲ್ಲಿ ಶಾಂತಾ ಹೊಸಮನಿ ಅವರ ಪಾತ್ರದ ಬಗ್ಗೆ ಆರೋಪಗಳು ಕೇಳಿಬಂದಿವೆ. ಕೆಎಎಸ್ ಹಾಗೂ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮದ ಜೊತೆಗೆ ಎಇಇ ನೇಮಕಾತಿ ಹಗರಣದಲ್ಲೂ ಅವರ ವಿರುದ್ಧ ಆರೋಪಗಳಿವೆ.
2023ರ ಸಹಾಯಕ ಕಾರ್ಯಪಾಲಕ ಅಭಿಯಂತರರ (AEE) ನೇಮಕಾತಿ ಅಕ್ರಮದ ತನಿಖೆಗಾಗಿ ಕೆಪಿಎಸ್ಸಿ ಉಪಸಮಿತಿ ರಚಿಸಲಾಗಿತ್ತು. ಈ ವೇಳೆ ಅಂದಿನ ಕಾರ್ಯದರ್ಶಿ ಲತಾ ಕುಮಾರಿ ಮೂಲಕ ಸಮಿತಿ ಸದಸ್ಯರಿಗೆ ಮಾಹಿತಿ ನೀಡದೆ ಆಯ್ಕೆ ಪಟ್ಟಿಯನ್ನು ಪ್ರಕಟಿಸಲು ಶಾಂತಾ ಹೊಸಮನಿ ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಕೆಲ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆಯ್ಕೆ ಪಟ್ಟಿ ಪ್ರಕಟವಾಗಿರಲಿಲ್ಲ. ಬಳಿಕ ಶಾಂತಾ ಹೊಸಮನಿ ಅವರನ್ನು ಉಪಸಮಿತಿಯಿಂದ ಹೊರಗಿಡಲಾಗಿತ್ತು.
ಕೆಪಿಎಸ್ಸಿ ನೇಮಕಾತಿ ಅಕ್ರಮದ ತನಿಖೆ ಕುರಿತು ಮಾತನಾಡಿರುವ ಸಚಿವ ಈಶ್ವರ್ ಖಂಡ್ರೆ, ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದು ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ. ಈ ನಡುವೆ ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ನೇಮಕಾತಿ ವಿಚಾರವಾಗಿ ರಾಜಕೀಯ ಆರೋಪ-ಪ್ರತ್ಯಾರೋಪಗಳು ಮುಂದುವರಿದಿವೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶಿವಶಂಕರಪ್ಪ ಅವರನ್ನು ವಿಜಯೇಂದ್ರ ಅವರ ತಂದೆಯೇ ನೇಮಿಸಿದ್ದರು ಹಾಗೂ ಈಗಲೂ ವಿಜಯೇಂದ್ರ ಅವರಿಗೆ ಪಾಲು ಹೋಗುತ್ತಿದೆ ಎಂದು ಆರೋಪಿಸಿದ್ದಾರೆ.
ಕೆಪಿಎಸ್ಸಿ ಎಇಇ ನೇಮಕಾತಿ ಅಕ್ರಮದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮೆರಿಕದಿಂದ ವಾಪಸ್ ಬಂದ ಬಳಿಕ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಇದಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಅವರು ಮಂಗಳವಾರ ಅಥವಾ ಬುಧವಾರ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ. ಈ ನಡುವೆ ಇಬ್ಬರು ನಾಯಕರ ನಡುವಿನ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ.
ಇದನ್ನೂ ಓದಿ: ಕೆಪಿಎಸ್ಸಿ ರದ್ದುಗೊಳಿಸುವ ಕುರಿತು ಸಂಪುಟದಲ್ಲಿ ಚರ್ಚೆ: ಸಚಿವ ಈಶ್ವರ್ ಖಂಡ್ರೆ ಅವರಿಂದಲೇ ಮಾಹಿತಿ ಬಹಿರಂಗ
ಒಟ್ಟಿನಲ್ಲಿ, ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮದಲ್ಲಿ ಹಣದ ವಹಿವಾಟಿನ ಕುರಿತು ಸಿಐಡಿ ತನಿಖೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ