
ಬೆಂಗಳೂರು, ಆಗಸ್ಟ್ 31: ಮಂಗಳೂರು ಕೆಆರ್ಐಡಿಎಲ್ (KRIDL) ವಿಭಾಗದ ಎಂಜಿನಿಯರ್ಗಳು ಉಸ್ತುವಾರಿ ಸಚಿವರು ಹಾಗೂ ಇಲಾಖೆ ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ 7ರಷ್ಟು ‘ಶುಲ್ಕ’ ವಸೂಲಿ ಮಾಡುತ್ತಿದ್ದಾರೆ ಎಂಬ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರ ಆರೋಪ ಇದೀಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashoka) ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಲಿಖಿತ ದೂರು ನೀಡಿದ್ದರು. ಮಂಗಳೂರು ಕೆಆರ್ಐಡಿಎಲ್ ವಿಭಾಗದಲ್ಲಿ ಕಾಮಗಾರಿ ನಡೆಸುವ ಗುತ್ತಿಗೆದಾರರ ಮೇಲೆ ಒತ್ತಡ ಹೇರಿ, ಸಚಿವರ ಹೆಸರಿನಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದರು.
ಈ ವಿಚಾರವನ್ನು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪ್ರಸ್ತಾಪಿಸಿರುವ ಆರ್. ಅಶೋಕ್, ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದಾಗ ಅದನ್ನು ರಾಜಕೀಯ ಎಂದು ಹೇಳಲಾಗುತ್ತಿತ್ತು. ಆದರೆ, ಇದೀಗ ಆಡಳಿತಾರೂಢ ಕಾಂಗ್ರೆಸ್ನ ಶಾಸಕರೇ ಸರ್ಕಾರದ ವ್ಯವಸ್ಥೆಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಅಧಿಕಾರಿಗಳು ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಹೆಸರನ್ನು ಬಳಸಿಕೊಂಡು ಶೇ 7ರಷ್ಟು ‘ಪರ್ಸಂಟೇಜ್’ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪವನ್ನು ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. ಈ ಆರೋಪದ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆರ್. ಅಶೋಕ್ ಆಗ್ರಹಿಸಿದ್ದಾರೆ.
ಕೆಆರ್ಐಡಿಎಲ್ನಲ್ಲಿ ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಿ, ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆರ್. ಅಶೋಕ್ ಒತ್ತಾಯಿಸಿದ್ದಾರೆ. ಅಲ್ಲದೆ, ಸಚಿವರ ಹೆಸರಿನಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಇರುವುದರಿಂದ ಸಂಬಂಧಪಟ್ಟ ಇಲಾಖೆ ಸಚಿವರು ಹಾಗೂ ಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವರ ಪಾತ್ರದ ಬಗ್ಗೆಯೂ ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ಲೂಟಿ ವ್ಯವಹಾರ ಬಯಲು!
ಮುಖ್ಯಮಂತ್ರಿ @DKShivakumar ಅವರೇ, ವಿರೋಧ ಪಕ್ಷಗಳು ಆರೋಪ ಮಾಡಿದರೆ “ರಾಜಕೀಯ” ಎನ್ನುತ್ತಿದ್ದೀರಲ್ಲ, ಈಗ ನಿಮ್ಮದೇ ಪಕ್ಷದ ಪುತ್ತೂರು ಶಾಸಕ ಕೆ.ಎಸ್. ಅಶೋಕ್ ಕುಮಾರ್ ರೈ ಅವರು ನಿಮ್ಮ ಸರ್ಕಾರದ ಭ್ರಷ್ಟಾಚಾರದ ಜಾತಕವನ್ನು ಬೀದಿಯಲ್ಲಿಟ್ಟಿದ್ದಾರೆ. ಇದಕ್ಕೇನು ಉತ್ತರ ನೀಡುತ್ತೀರಿ?… pic.twitter.com/QcEpIxZ9Fm
— R. Ashoka (@RAshokaBJP) August 31, 2026
ಸಾರ್ವಜನಿಕರ ತೆರಿಗೆ ಹಣದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳು ಕಮಿಷನ್ ದಂಧೆಗೆ ಬಲಿಯಾಗುತ್ತಿವೆ ಎಂದು ಆರೋಪಿಸಿರುವ ಆರ್. ಅಶೋಕ್, ಇದರಿಂದ ಕಳಪೆ ಕಾಮಗಾರಿಗಳಿಗೆ ಕಾರಣವಾಗುತ್ತಿದೆ ಎಂದು ಹೇಳಿದ್ದಾರೆ. ತಮ್ಮದೇ ಪಕ್ಷದ ಶಾಸಕ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಆರೋಪಿಸಿರುವಾಗಲೂ ಸರ್ಕಾರ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ