ಮಗನಿಗೆ ಬಿಜೆಪಿ ಟಿಕೆಟ್ ಮಿಸ್ ಆಗ್ತಿದ್ದಂತೆ ಸಿಡಿದೆದ್ದ ಈಶ್ವರಪ್ಪ, ಯಡಿಯೂರಪ್ಪ ವಿರುದ್ಧ ವಾಗ್ದಾಳಿ: ಬಂಡಾಯದ ಸುಳಿವು!

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಹೊಸ ಕಂಪನ ಶುರುವಾಗಿದೆ. ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಿದೆ. ಮತ್ತೊಂದೆಡೆ ತಮ್ಮ ಪುತ್ರನಿಗೆ ಟಿಕೆಟ್‌ಗಾಗಿ ಲಾಬಿ ನಡೆಸಿದ್ದ ಕೆಎಸ್ ಈಶ್ವರಪ್ಪ ಸಿಡಿದೆದ್ದಿದ್ದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧ ಗುಡುಗಿದ್ದಾರೆ. ಅಲ್ಲದೇ ಬಂಡಾಯದ ಮುನ್ಸೂಚನೆ ನೀಡಿದ್ದಾರೆ.

ಮಗನಿಗೆ ಬಿಜೆಪಿ ಟಿಕೆಟ್ ಮಿಸ್ ಆಗ್ತಿದ್ದಂತೆ ಸಿಡಿದೆದ್ದ ಈಶ್ವರಪ್ಪ, ಯಡಿಯೂರಪ್ಪ ವಿರುದ್ಧ ವಾಗ್ದಾಳಿ: ಬಂಡಾಯದ ಸುಳಿವು!
ಈಶ್ವರಪ್ಪ-ಯಡಿಯೂರಪ್ಪ
Edited By:

Updated on: Mar 13, 2024 | 9:33 PM

ಶಿವಮೊಗ್ಗ, (ಮಾರ್ಚ್​ 13): ಲೋಕಸಭಾ ಚುನಾವಣೆಗೆ (Loksabha Elections 2024) ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಹೊಸ ಕಂಪನ ಶುರುವಾಗಿದೆ. ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಿದ್ದು ಒಂದು ಕಡೆಯಾದ್ರೆ ಮತ್ತೊಂದೆಡೆ ಟಿಕೆಟ್‌ಗಾಗಿ ಲಾಬಿ ನಡೆಸಿದವರು ಬಂಡಾಯದ ಮುನ್ಸೂಚನೆ ನೀಡಿದ್ದಾರೆ. ಅದರಲ್ಲೂ ಪ್ರಮುಖವಾಗಿ ಮಾಜಿ ಸಚಿವ ಕೆ‌.ಎಸ್ ಈಶ್ವರಪ್ಪ(KS Eshwarappa) ಅವರು ಈ ಬಾರಿ ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ಭಾರೀ ಕಸರತ್ತು ನಡೆಸಿದ್ದರು. ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಈಗ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂತೇಶ್ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಇದರಿಂದ ಬೇಸರಗೊಂಡಿರುವ ಈಶ್ವರಪ್ಪ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ(BS Yediyurappa) ವಿರುದ್ಧ ಗುಡುಗಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಕೆ.ಇ.ಕಾಂತೇಶ್​ಗೆ ಹಾವೇರಿ ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಹಾವೇರಿ ಭಾಗದಲ್ಲಿ ಕಾಂತೇಶ್ ಓಡಾಡಿ ಜನರ ವಿಶ್ವಾಸ ಗಳಿಸಿದ್ದ. ವಿವಿಧ ಮಠಾಧೀಶರು ನನ್ನ ಮಗ ಕಾಂತೇಶ್​ ಬೆನ್ನಿಗೆ ನಿಂತಿದ್ದರು. ಆದ್ರೆ, ಇಂದು ನನ್ನ ಮಗ ಕೆ.ಇ.ಕಾಂತೇಶ್​ಗೆ ಟಿಕೆಟ್ ಕೈತಪ್ಪಿದೆ. ಯಡಿಯೂರಪ್ಪ ನಮಗೆ ಮೋಸ ಮಾಡಿದ್ದಾರೆಂದು ಬೇಸರವಿದೆ ಎಂದು ಅಸಮಾಧಾನ ಹೊರಕಿದರು.

ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಪ್ರಕಟ, ಕರ್ನಾಟಕದ ಹಲವು ಹಾಲಿ ಸಂಸದರಿಗೆ ಟಿಕೆಟ್ ಕಟ್

ಬಿಎಸ್​​ವೈ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಕರ್ನಾಟಕದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಲುಕಿದೆ. ಕುಟುಂಬದ ಕೈಯಿಂದ ಪಕ್ಷ ರಕ್ಷಿಸಬೇಕೆಂಬ ಒತ್ತಾಯವಿದೆ. ಕರ್ನಾಟಕದಲ್ಲಿ ಬೇರೆ ಯಾರೂ ಲಿಂಗಾಯತ ನಾಯಕರಿಲ್ವಾ? ಬಿ.ಎಸ್.ಯಡಿಯೂರಪ್ಪ ಪಟ್ಟು ಹಿಡಿದು ಟಿಕೆಟ್ ಕೊಡಿಸಿದ್ದಾರೆ. ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿಗೆ ಟಿಕೆಟ್ ಕೊಡಿಸಿದ್ದಾರೆ. ನನ್ನ ಮಗ ಕಾಂತೇಶ್​ಗೆ ಯಾಕೆ ಬಿಎಸ್​ವೈ ಟಿಕೆಟ್ ಕೊಡಿಸಲಿಲ್ಲ. ಯಡಿಯೂರಪ್ಪ ನಮಗೆ ಅನ್ಯಾಯ ಮಾಡಿದರು. ನಾನು 40 ವರ್ಷ ನಿಷ್ಠೆಯಿಂದ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ಸಿ.ಟಿ.ರವಿ, ಸದಾನಂದ ಗೌಡ, ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹಗೆ ಅನ್ಯಾಯವಾಗಿದೆ ಎಂದು ಬೇಸರ ಹೊರಹಾಕಿದರು. ಈ ಮೂಲಕ ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.

ನನಗೆ ಆರೋಗ್ಯ ಸರಿಯಿಲ್ಲ, ಲೋಕಸಭೆಗೆ ಸ್ಪರ್ಧಿಸಲ್ಲ ಎಂದು ಬೊಮ್ಮಾಯಿ ಚುನಾವಣಾ ಸಮಿತಿ ಸಭೆಯಲ್ಲಿ ಹೇಳಿದ್ದರು. ನಾನು ಮಾಜಿ ಸಿಎಂ, ಶಾಸಕನಾಗಿದ್ದೇನೆ ಲೋಕಸಭೆಗೆ ಸ್ಪರ್ಧಿಸಲ್ಲ. ಕಾಂತೇಶ್​ಗೆ ಹಾವೇರಿ ಟಿಕೆಟ್ ನೀಡಿ ಎಂದು ಬೊಮ್ಮಾಯಿ ಹೇಳಿದ್ದರು. ಬಸವರಾಜ ಬೊಮ್ಮಾಯಿ ಹೀಗೆ ಹೇಳಿದ್ದರೂ ಸಹ ಟಿಕೆಟ್ ಕೊಡಿಸಿದ್ದಾರೆ. ಯಡಿಯೂರಪ್ಪ ಹಠಮಾಡಿ ಒತ್ತಾಯಪೂರ್ವಕವಾಗಿ ಬೊಮ್ಮಾಯಿಗೆ ಹಾವೇರಿ ಟಿಕೆಟ್ ಕೊಡಿಸಿದ್ದಾರೆ. ಯಡಿಯೂರಪ್ಪ ಪಕ್ಷದ ಕತ್ತು ಹಿಸುಕುತ್ತಿದ್ದಾರೆಂದು ಹೇಳುತ್ತಿದ್ದಾರೆ. ಯಡಿಯೂರಪ್ಪ ನಡೆ ಪಕ್ಷ ನಿಷ್ಠರಿಗೆ ಅನ್ಯಾಯವಾಗುತ್ತಿದೆ ಅಂತಿದ್ದಾರೆ ಎಂದು ಕಿಡಿಕಾರಿದರು.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸುಳಿವು

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ. ನೀವು ಸ್ಪರ್ಧಿಸಿದರೆ ಗೆಲ್ಲಿಸಿಕೊಂಡು ಬರುತ್ತೇವೆಂದು ಹೇಳುತ್ತಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿ ಎಂದು ನಾನು ಬಯಸುತ್ತೇನೆ. ಪಕ್ಷೇತರವಾಗಿ ಗೆದ್ದು ಮೋದಿ ಬೆಂಬಲಿಸಿ ಎಂದು ಒತ್ತಾಯವಿದೆ. ಈ ಸಂಬಂಧ ಮಾರ್ಚ್ 15ರಂದು ಸಭೆ ಕರೆದಿದ್ದು, ಬೆಂಬಲಿಗರ ಸಭೆಯಲ್ಲಿ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ತಿಳಿಸುವೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಶಿವಮೊಗ್ಗದಲ್ಲಿ ಬಿಎಸ್​ವೈ ಪುತ್ರ ಬಿಎಸ್ ಯಡಿಯೂರಪ್ಪ ಪುತ್ರ ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸುಳಿವು ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Web contact

TV9 Kannada

Read More
Follow Us