ಕೆಎಸ್ಆರ್ಪಿ 2,314 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ ಯಶಸ್ವಿ: ಶೇ. 80ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರು!
ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಒಟ್ಟು 2,314 ಹುದ್ದೆಗಳಿಗಾಗಿ ನಡೆದ ಪರೀಕ್ಷೆಯಲ್ಲಿ ಶೇ. 78-85 ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದರು. ಪರೀಕ್ಷಾ ಪ್ರಕ್ರಿಯೆಯ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಮಾಂಡ್ ಸೆಂಟರ್ ಮೂಲಕ ಕಟ್ಟುನಿಟ್ಟಿನ ನಿಗಾ ವಹಿಸಿ, ಲೋಪಗಳನ್ನು ತಡೆಗಟ್ಟಲಾಗಿದೆ.

ಬೆಂಗಳೂರು, ಸೆಪ್ಟೆಂಬರ್ 20: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್ಆರ್ಪಿ) ಪಡೆಯ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಭಾನುವಾರ ನಡೆದ ಲಿಖಿತ ಪರೀಕ್ಷೆಯು ಯಶಸ್ವಿಯಾಗಿ ಮುಕ್ತಾಯಗೊಂಡಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ಮಿಕ್ಕುಳಿಕೆ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದಗಳ ಒಟ್ಟು 2,314 ಹುದ್ದೆಗಳಿಗಾಗಿ ಈ ನೇಮಕಾತಿ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿಸಲಾಗಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗೆ ಅಭ್ಯರ್ಥಿಗಳು ಹಾಜರು
ಈ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದಾರೆ. ಮಿಕ್ಕುಳಿಕೆ ವೃಂದದ ಒಟ್ಟು 1,42,912 ಅಭ್ಯರ್ಥಿಗಳ ಪೈಕಿ 1,12,125 ಅಂದರೆ ಶೇ. 78 ರಷ್ಟು ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅದೇ ರೀತಿ, ಕಲ್ಯಾಣ ಕರ್ನಾಟಕ ವೃಂದದ 38,332 ಪೈಕಿ 32,694 ಅಂದರೆ ಶೇ. 85 ರಷ್ಟು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಟ್ವೀಟ್
#KeaRecruitmentExam: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (#KSRP) ಪಡೆಯ ಕಾನ್ಸ್ಟೇಬಲ್ ಹುದ್ದೆಗೆ ಇಂದು ಯಶಸ್ವಿಯಾಗಿ ಪರೀಕ್ಷೆ ನಡೆಯಿತು.
ಒಟ್ಟು 2,314 ಹುದ್ದೆಗಳಿಗೆ ಪರೀಕ್ಷೆ ನಡೆಯಿತು. ಮಿಕ್ಕುಳಿಕೆ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದಗಳಿಗೆ ಪರೀಕ್ಷೆ ನಡೆಯಿತು.
ಮಿಕ್ಕುಳಿಕೆ ವೃಂದದ ಒಟ್ಟು 1,42,912 ಅಭ್ಯರ್ಥಿಗಳ ಪೈಕಿ 1,12,125… pic.twitter.com/w7bnJglWpd
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) September 20, 2026
ರಾಜಧಾನಿ ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳ ಒಟ್ಟು 333 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. ಮಿಕ್ಕುಳಿದ ವೃಂದದ ಪರೀಕ್ಷೆಯು ಬೆಳಿಗ್ಗೆ 10:30ಕ್ಕೆ ನಡೆದರೆ, ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ನಿಗದಿಯಾಗಿರುವ ಪರೀಕ್ಷೆಯು ನಾಲ್ಕು ಜಿಲ್ಲೆಗಳ 85 ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆದಿದೆ.
ಕಮಾಂಡ್ ಸೆಂಟರ್ ಮೂಲಕ ಕಟ್ಟುನಿಟ್ಟಿನ ನಿಗಾ
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಲೋಪಗಳು ನಡೆಯದಂತೆ ತೀವ್ರ ನಿಗಾ ವಹಿಸಲು ಕೆಇಎ ಕಚೇರಿಯಲ್ಲಿ ವಿಶೇಷ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿತ್ತು. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಹಾಗೂ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಕಮಾಂಡ್ ಸೆಂಟರ್ನಲ್ಲಿ ಖುದ್ದು ಉಪಸ್ಥಿತರಿದ್ದು, ಪರೀಕ್ಷಾ ಪ್ರಕ್ರಿಯೆಗಳ ಮೇಲೆ ನಿರಂತರ ನಿಗಾ ಇರಿಸಿ ಪರಿಶೀಲನೆ ಮಾಡಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




