ನಾಳೆ ರಾಜ್ಯಾದ್ಯಂತ ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ: ನೌಕರರಿಂದ ಬೆಂಗಳೂರು ಚಲೋ

ಫೆಬ್ರವರಿ 19 ರಂದು ಕೆಎಸ್‌ಆರ್‌ಟಿಸಿ ನೌಕರರ ‘ಬೆಂಗಳೂರು ಚಲೋ’ ಪ್ರತಿಭಟನೆಯಿಂದ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ವೇತನ ಪರಿಷ್ಕರಣೆ, ಹಿಂಬಾಕಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ನೌಕರರು ಆಗ್ರಹಿಸುತ್ತಿದ್ದಾರೆ. ಏತನ್ಮಧ್ಯೆ, ಕರ್ತವ್ಯಕ್ಕೆ ಗೈರಾದರೆ ಶಿಸ್ತು ಕ್ರಮ ಹಾಗೂ ವೇತನ ಕಡಿತಗೊಳಿಸುವುದಾಗಿ ಕೆಎಸ್‌ಆರ್‌ಟಿಸಿ ಎಂಡಿ ಎಚ್ಚರಿಕೆ ನೀಡಿದ್ದಾರೆ. ಪ್ರಯಾಣಿಕರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.

ನಾಳೆ ರಾಜ್ಯಾದ್ಯಂತ ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ: ನೌಕರರಿಂದ ಬೆಂಗಳೂರು ಚಲೋ
ಕೆಎಸ್​ಆರ್​ಟಿಸಿ ಬಸ್ (ಸಂಗ್ರಹ ಚಿತ್ರ)
Image Credit source: tv9
Edited By:

Updated on: Feb 18, 2026 | 10:00 AM

ಬೆಂಗಳೂರು, ಫೆಬ್ರವರಿ 18: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ (ಫೆಬ್ರವರಿ 19) ಕರ್ನಾಟಕ ರಾಜ್ಯ ಸಾರಿಗೆ ನೌಕರರು ‘ಬೆಂಗಳೂರು ಚಲೋ’ಕ್ಕೆ ಕರೆ ನೀಡಿರುವುದರಿಂದ ಹಲವರು ಕರ್ತವ್ಯಕ್ಕೆ ಗೈರಾಗುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ (KSRTC) ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸಾರಿಗೆ ನೌಕರರು ಗುರುವಾರ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರು ಕಡೆಗೆ ಜಮಾಯಿಸುವ ನಿರೀಕ್ಷೆಯಿದೆ.

ಇದರ ನಡುವೆಯೇ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ, ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರಿಗೆ ಸೂಚನೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿರುವ ಅವರು, ಕರ್ತವ್ಯಕ್ಕೆ ಗೈರಾದಲ್ಲಿ ವೇತನ ಕಡಿತ ಸೇರಿದಂತೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಗೈರಾಗುವ ನೌಕರರ ಪಟ್ಟಿಯನ್ನು ಘಟಕವಾರು ಸಿದ್ಧಪಡಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ‘ಕೆಲಸ ಮಾಡದಿದ್ದಾಗ ವೇತನವಿಲ್ಲ’ ಎಂಬ ತತ್ವದಡಿ ಕ್ರಮ ಜರುಗಿಸಲಾಗುತ್ತದೆ ಎಂದು ಎಂಡಿ ಸ್ಪಷ್ಟಪಡಿಸಿದ್ದಾರೆ.

ಪ್ರಯಾಣಿಕರು ಮುನ್ನೆಚ್ಚರಿಕೆ ವಹಿಸಲು ಮನವಿ

ಅನಧಿಕೃತವಾಗಿ ಕರ್ತವ್ಯಕ್ಕೆ ಗೈರಾಗುವ ನೌಕರರ ವಿರುದ್ಧ ಹೈಕೋರ್ಟ್ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಆದಾಗ್ಯೂ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾರಿಗೆ ಸೇವೆ ಭಾಗಶಃ ವ್ಯತ್ಯಯವಾಗುವ ಸಾಧ್ಯತೆ ಇದ್ದು, ಪ್ರಯಾಣಿಕರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.

ರಜೆ ನೀಡಬೇಡಿ: ಸಾರಿಗೆ ಅಧಿಕಾರಿಗಳಿಗೆ ಸೂಚನೆ


ಗುರುವಾರ ಬಸ್ ಸಂಚಾರದಲ್ಲಿ ವ್ಯತ್ಯಯ ಆಗದಂತೆ ಕ್ರಮಕೈಗೊಳ್ಳಬೇಕೆಂದು ಸಾರಿಗೆ ಅಧಿಕಾರಿಗಳಿಗೆ ಕೆಎಸ್​ಆರ್​ಟಿಸಿ ಎಂಡಿ ಅಕ್ರಂ ಪಾಷಾ ಸೂಚನೆ ನೀಡಿದ್ದಾರೆ. ತುರ್ತು, ಅನಿವಾರ್ಯ ಸಂದರ್ಭ ಹೊರತುಪಡಿಸಿ ನೌಕರರಿಗೆ ಯಾವುದೇ ರಜೆ ನೀಡಬೇಡಿ. ಇದು ವಾರದ ರಜೆ ಅಥವಾ ದೀರ್ಘಾವಧಿ ರಜೆಯಲ್ಲಿರುವವರಿಗೆ ಅನ್ವಯಿಸುವುದಿಲ್ಲ. ಅಗತ್ಯವಿದ್ದರೆ ವಾರದ ರಜೆಯನ್ನು ರದ್ದುಪಡಿಸಿ ಕೆಲಸಕ್ಕೆ ನಿಯೋಜಿಸಬೇಕು ಎಂದು ಅಕ್ರಂ ಪಾಷಾ ನಿರ್ದೇಶನ ನೀಡಿದ್ದಾರೆ.

ಸಾರಿಗೆ ನೌಕರರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆಗಳನ್ನು ನಡೆಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಸಹ ಜನವರಿ 29ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ಫ್ರೀಡಂಪಾರ್ಕ್​​ನಲ್ಲಿ ಪ್ರತಿಭಟನೆಗೆ ಕರೆ ಕೊಡಲಾಗಿತ್ತು. ಆದರೆ, ಜನವರಿ 28 ರಂದು ಮುಖಂಡ ಅನಂತ್ ಸುಬ್ಬರಾವ್ ನಿಧನರಾದ ಹಿನ್ನೆಲೆ ಪ್ರತಿಭಟನೆಯ ಕಾವು ತಣ್ಣಗಾಗಿತ್ತು.

ಸಿದ್ದರಾಮಯ್ಯ ಸರ್ಕಾರ ಹಿಟ್ಲರ್ ಸರ್ಕಾರ: ಸಾರಿಗೆ ಮುಖಂಡ ಮಂಜುನಾಥ್ ಕಿಡಿ

1.15 ಲಕ್ಷ ನೌಕರರು ಫ್ರೀಡಂ ಪಾರ್ಕ್​ಗೆ ಬನ್ನಿ. ಸಿದ್ದರಾಮಯ್ಯ ಸರ್ಕಾರ ಹಿಟ್ಲರ್ ಸರ್ಕಾರ ಆಗಿದೆ. ಬಿಎಂಟಿಸಿ ನೌಕರರ ಜೊತೆ ಮಾತಾಡೋಕೆ ಡಿಪೋಗೆ ಹೋದ್ರೆ ಪೊಲೀಸರನ್ನು ಕಳುಹಿಸುತ್ತಿದ್ದಾರೆ. ಎರಡು ವರ್ಷದಿಂದ ಎಲ್ಲಾ ಪ್ರಯತ್ನ ಮಾಡಿದ್ದೇವೆ . ನಮ್ಮ ಬೇಡಿಕೆಗಳು ಈಡೇರದೇ ಇರೋದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ. ವೇತನ ಹಿಂಬಾಕಿ, ವೇತನ ಪರಿಷ್ಕರಣೆಯನ್ನ ಬಡ್ಡಿ ಸಮೇತ ಕೊಡಬೇಕು. ಅಧಿಕಾರಕ್ಕೆ ಬಂದ ಇಷ್ಟು ದಿನವಾದರೂ ನೌಕರರ ಬಗ್ಗೆ ಕಾಳಜಿ ಇಲ್ಲ. ಗುರುವಾರ ಸಂಜೆ 4 ಗಂಟೆಯವರೆಗೆ ಸರ್ಕಾರಕ್ಕೆ ನಮ್ಮ ಬೇಡಿಕೆಗಳನ್ನು ಈಡೇರಿಸಲು ಗಡುವು ನೀಡುತ್ತೇವೆ. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿಲ್ಲ ಅಂದರೆ ಅನಿವಾರ್ಯವಾಗಿ ಮುಷ್ಕರ ಮಾಡುತ್ತೇವೆ ಎಂದು ಸಾರಿಗೆ ಮುಖಂಡ ಮಂಜುನಾಥ್ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಸಾರಿಗೆ ನೌಕರರಿಂದ‘ಬೆಂಗಳೂರು ಚಲೋ’: ಬೇಡಿಕೆ ಈಡೇರದಿದ್ದರೆ ಮುಷ್ಕರಕ್ಕೂ ಪ್ಲ್ಯಾನ್​​!

01-01-2020ರಿಂದ 28-02-2023ರ ವರೆಗಿನ 38 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ ಹಾಗೂ 01.01.2024 ರಿಂದ ನಾಲ್ಕು ವರ್ಷಗಳ ವೇತನ ಒಪ್ಪಂದ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರು ಆಗ್ರಹಿಸುತ್ತಿದ್ದಾರೆ. ಈ ಹಿಂದೆ ಮುಷ್ಕರ ನಡೆಸಿದ್ದಾಗ ಮನವೊಲಿಸಿದ್ದ ಸರ್ಕಾರ, ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಆದರೆ, ನಂತರ ಕ್ರಮ ಕೈಗೊಂಡಿರಲಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:06 am, Wed, 18 February 26