ಅಕ್ರಮ ಕಟ್ಟಡಗಳ ಸಕ್ರಮ ಸೇರಿ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಧಾರಗಳು ಇಲ್ಲಿವೆ

ಬೆಂಗಳೂರು: ಬಿಡಿಎ ವ್ಯಾಪ್ತಿಯ ಅನಧಿಕೃತ ಕಟ್ಟಡಗಳನ್ನ ಸಕ್ರಮಗೊಳಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಸುಮಾರು 75 ಸಾವಿರ ಅನಧಿಕೃತ ಕಟ್ಟಡಗಳಿಗೆ ದಂಡ ಕಟ್ಟಿಸಿಕೊಂಡು ಸಕ್ರಮಗೊಳಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಡಿಸಿಎಂ ಅಶ್ವತ್ಥ್ ನಾರಾಯಣ್, ವಿ.ಸೋಮಣ್ಣ, ಆರ್.ಅಶೋಕ್, ಸುರೇಶ್‌ ಕುಮಾರ್ ನೇತೃತ್ವದಲ್ಲಿ ಕಮಿಟಿ ರಚಿಸಿ ಬಿಡಿಎಯ 98cಗೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದೆ ಎಂದು ಸಚಿವ ಸಂಪುಟ ಸಭೆ ಬಳಿಕ ಕಾನೂನು ಸಚಿವ ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಸದ್ಯಕ್ಕಿಲ್ಲ ಸಚಿವ ಸಂಪುಟ ವಿಸ್ತರಣೆ: ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡುವುದಿಲ್ಲ. ಈ […]

ಅಕ್ರಮ ಕಟ್ಟಡಗಳ ಸಕ್ರಮ ಸೇರಿ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಧಾರಗಳು ಇಲ್ಲಿವೆ
ಸಾಧು ಶ್ರೀನಾಥ್​

Updated on: Dec 12, 2019 | 6:46 PM

ಬೆಂಗಳೂರು: ಬಿಡಿಎ ವ್ಯಾಪ್ತಿಯ ಅನಧಿಕೃತ ಕಟ್ಟಡಗಳನ್ನ ಸಕ್ರಮಗೊಳಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಸುಮಾರು 75 ಸಾವಿರ ಅನಧಿಕೃತ ಕಟ್ಟಡಗಳಿಗೆ ದಂಡ ಕಟ್ಟಿಸಿಕೊಂಡು ಸಕ್ರಮಗೊಳಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಡಿಸಿಎಂ ಅಶ್ವತ್ಥ್ ನಾರಾಯಣ್, ವಿ.ಸೋಮಣ್ಣ, ಆರ್.ಅಶೋಕ್, ಸುರೇಶ್‌ ಕುಮಾರ್ ನೇತೃತ್ವದಲ್ಲಿ ಕಮಿಟಿ ರಚಿಸಿ ಬಿಡಿಎಯ 98cಗೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದೆ ಎಂದು ಸಚಿವ ಸಂಪುಟ ಸಭೆ ಬಳಿಕ ಕಾನೂನು ಸಚಿವ ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸದ್ಯಕ್ಕಿಲ್ಲ ಸಚಿವ ಸಂಪುಟ ವಿಸ್ತರಣೆ:
ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡುವುದಿಲ್ಲ. ಈ ತಿಂಗಳ ಅಂತ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ. ಇನ್ನೊಂದು ವಾರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಹೋಗಿ ಬರುತ್ತಾರೆ. ಸಂಕ್ರಾಂತಿವರೆಗೂ ಸಚಿವ ಸಂಪುಟ ವಿಸ್ತರಣೆ ಮುಂದೂಡಲ್ಲ. ಜನವರಿ 20ರಿಂದ 30ರವರೆಗೆ ವಿಧಾನಮಂಡಲ ಅಧಿವೇಶನ ನಡೆಸಲೂ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ ಅಸ್ತು:
ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ ನೀಡಲಾಗಿದೆ. ಮೊದಲ ಹಂತದಲ್ಲಿ ತುಮಕೂರು ರಸ್ತೆಯಿಂದ ಬಳ್ಳಾರಿ ರಸ್ತೆಗೆ ₹1419 ಕೋಟಿ ಅನುದಾನ ಮತ್ತು ಎರಡನೇ ಹಂತದಲ್ಲಿ ಬಳ್ಳಾರಿ ರಸ್ತೆಯಿಂದ ಹಳೇ ಮದ್ರಾಸ್ ರಸ್ತೆಗೆ ₹1417 ಕೋಟಿ ಅನುದಾನ ಹಾಗು ಮೂರನೇ ಹಂತದಲ್ಲಿ ಹಳೇ ಮದ್ರಾಸ್ ರಸ್ತೆಯಿಂದ ಹೊಸೂರು ರಸ್ತೆಗೆ ₹2453 ಕೋಟಿ ಅನುದಾನ ನೀಡಲಾಗುವುದು. ಇದರಲ್ಲಿ ₹901.72 ಕೋಟಿ ರಾಜ್ಯದ ಪಾಲು ನೀಡಲು ಸಮ್ಮತಿ ಸೂಚಿಸಿದೆ.

ಭಾಗ್ಯಲಕ್ಷ್ಮೀ ಯೋಜನೆಗೆ LIC ಪಾಲುದಾರಿಕೆ ಮುಂದುವರಿಕೆ:
2020ರ ಮಾರ್ಚ್​ವರೆಗೆ ಭಾಗ್ಯಲಕ್ಷ್ಮೀ ಯೋಜನೆಗೆ LIC ಪಾಲುದಾರ ಸಂಸ್ಥೆಯನ್ನಾಗಿ ಮುಂದುವರಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

4ನೇ ಶನಿವಾರದ ಸರ್ಕಾರಿ ರಜೆ ರದ್ದು:
4ನೇ ಶನಿವಾರದ ಸರ್ಕಾರಿ ರಜೆ ವಿಚಾರದಲ್ಲಿ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದೆ. ರಾಜ್ಯದ ಎಲ್ಲಾ ಕೋರ್ಟ್‌ಗಳಲ್ಲಿನ ಪ್ರಕರಣಗಳ ಸಮನ್ವಯಿಸಲು ಭಾಗಿಯಾಗುವ ಎಲ್ಲಾ ಸರ್ಕಾರಿ ಅಧಿಕಾರಿಗಳಿಗೆ ರಜೆ ರದ್ದು ಮಾಡಲಾಗಿದೆ. 2019ರ ಜೂನ್ 13ರ ಆದೇಶದಲ್ಲಿ 4ನೇ ಶನಿವಾರ ಎಲ್ಲಾ ಸರ್ಕಾರಿ ನೌಕರರಿಗೆ ರಜೆ ಎಂದು ಹಿಂದಿನ ಸರ್ಕಾರ ಘೋಷಣೆ ಮಾಡಿತ್ತು.

ಮೆಡಿಕಲ್ ಕಾಲೇಜಿಗೆ ₹525 ಕೋಟಿ ಅನುದಾನ: 
ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ಕಟ್ಟಡಕ್ಕೆ ₹525 ಕೋಟಿ ಅನುದಾನ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆರ್ಯವೈಶ್ಯ ಸಮುದಾಯಕ್ಕೆ ಜಾತಿ, ಆದಾಯ ಪ್ರಮಾಣ ಪತ್ರ ನೀಡಲು ತೀರ್ಮಾನಿಸಲಾಗಿದೆ. ಇನ್ನು ಎಸ್​ಸಿ, ಎಸ್​ಟಿ ಅಂತಿಮ ವರ್ಷದ ಐಟಿಐ ವಿದ್ಯಾರ್ಥಿಗಳ ಲ್ಯಾಪ್​ಟಾಪ್​ಗೆ ₹16.98 ಕೋಟಿ ಅನುದಾನ, ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಗೋವಿಂದ ಕಾರಜೋಳ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚಿಸಲು ನಿರ್ಧರಿಸಲಾಗಿದೆ.

2 ಗ್ರಾ.ಪಂ ಮೇಲ್ದರ್ಜೆಗೇರಿಸಲು ನಿರ್ಧಾರ:
ವಿಜಯಪುರ ಜಿಲ್ಲೆಯ ತಿಕೋಟಾ ಗ್ರಾಮಪಂಚಾಯಿತಿ ಹಾಗು ಕಲಬುರಗಿ ಜಿಲ್ಲೆಯ ಕಮಲಾಪುರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

Published On - 6:23 pm, Thu, 12 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us