ರಾಜ್ಯದಲ್ಲಿ ಎರಡಂಕಿ ದಾಟದ ಕಾಂಗ್ರೆಸ್: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಖಚಿತ

ನಾಯಕತ್ವ ಬದಲಾವಣೆ ಜತೆಗೆ, ಉನ್ನತಾಧಿಕಾರ ರಚನೆಗೆ ಒತ್ತಾಯ ಹೆಚ್ಚಾಗುವ ಸಾಧ್ಯತೆ ಇದೆ. ಈ ಮಧ್ಯೆ, ಆಕಾಂಕ್ಷಿಗಳು ಸಚಿವ ಸ್ಥಾನಕ್ಕೆ ಬೇಡಿಕೆ ಇಡಲಿದ್ದಾರೆ. ಪರಿಣಾಮವಾಗಿ ಸಚಿವರ ಖಾತೆಗಳು ಅದಲು ಬದಲಾದರೂ ಆಗಬಹುದು. ಸಮುದಾಯವಾರು ಡಿಸಿಎಂ ಹುದ್ದೆಗಳ ಸೃಷ್ಟಿಗೆ ಮತ್ತೆ ಒತ್ತಾಯ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ರಾಜ್ಯದಲ್ಲಿ ಎರಡಂಕಿ ದಾಟದ ಕಾಂಗ್ರೆಸ್: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಖಚಿತ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್
Edited By:

Updated on: Jun 05, 2024 | 9:44 AM

ಬೆಂಗಳೂರು, ಜೂನ್ 5: ಲೋಕಸಭೆ ಚುನಾವಣೆಯಲ್ಲಿ (Lok Sabha Result) ದೇಶದಲ್ಲಿ ಉತ್ತಮ ಸಾಧನೆ ಮಾಡಿದ ಹೊರತಾಗಿಯೂ ಕರ್ನಾಟಕದಲ್ಲಿ (Karnataka) ಕಾಂಗ್ರೆಸ್ (Congress) ಎರಡಂಕಿ ತಲುಪಿಲ್ಲ. ಕಳೆದ ಬಾರಿಯ ಲೋಕಸಭೆ ಚುನಾವಣೆಗೆ ಹೋಲಿಸಿದರೆ ಈ ಬಾರಿ ಕಾಂಗ್ರೆಸ್​ನದ್ದು ಉತ್ತಮ ಸಾಧನೆ ಎನ್ನಬಹುದಾದರೂ, ಗ್ಯಾರಂಟಿ ಯೋಜನೆಗಳ ಜನಪ್ರಿಯತೆಯ ಮಧ್ಯೆಯೂ ನಿರೀಕ್ಷಿತ ಗುರಿ ಮುಟ್ಟುವುದು ಸಾಧ್ಯವಾಗಿಲ್ಲ. ಹೀಗಾಗಿ ರಾಜ್ಯ ನಾಯಕತ್ವದಲ್ಲಿ ಬದಲಾವಣೆ ಕೂಗು ಕೇಳಿ ಬರುವುದು ಖಚಿತ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಕಾಂಗ್ರೆಸ್​​ನಲ್ಲಿ ಒಂದಷ್ಟು ರಾಜಕೀಯ ಏರಿಳಿತದ ಸಾಧ್ಯತೆ ಇದೆ. ಹೀಗಾಗಿ ಮುಂದಿನ ಕೆಲವು ದಿನಗಳಲ್ಲಿ ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಲಿವೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಹೆಚ್ಚಾಗುವ ಸಾಧ್ಯತೆ ಇದೆ. ‘ಒನ್ ಮ್ಯಾನ್ ಒನ್ ಪೋಸ್ಟ್’ ಪಾಲಿಸಿಗೆ ಹಿರಿಯ ನಾಯಕರು ಒತ್ತಾಯ ಹೇರಬಹುದು ಎಂದು ಮೂಲಗಳು ತಿಳಿಸಿವೆ.

ನಾಯಕತ್ವ ಬದಲಾವಣೆ ಜತೆಗೆ, ಉನ್ನತಾಧಿಕಾರ ರಚನೆಗೆ ಒತ್ತಾಯ ಹೆಚ್ಚಾಗುವ ಸಾಧ್ಯತೆ ಇದೆ. ಈ ಮಧ್ಯೆ, ಆಕಾಂಕ್ಷಿಗಳು ಸಚಿವ ಸ್ಥಾನಕ್ಕೆ ಬೇಡಿಕೆ ಇಡಲಿದ್ದಾರೆ. ಪರಿಣಾಮವಾಗಿ ಸಚಿವರ ಖಾತೆಗಳು ಅದಲು ಬದಲಾದರೂ ಆಗಬಹುದು. ಸಮುದಾಯವಾರು ಡಿಸಿಎಂ ಹುದ್ದೆಗಳ ಸೃಷ್ಟಿಗೆ ಮತ್ತೆ ಒತ್ತಾಯ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಗ್ಯಾರಂಟಿ ಯೋಜನೆಗಳ ಪ್ರಭಾವದ ಹೊರತಾಗಿಯೂ ರಾಜ್ಯದಲ್ಲಿ ಕೇವಲ 9 ಸ್ಥಾನಗಳನ್ನಷ್ಟೇ ಗೆಲ್ಲುವುದು ಕಾಂಗ್ರೆಸ್​​ಗೆ ಸಾಧ್ಯವಾಗಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಮಂಗಳವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದು, ಸೋಲಿನ ಕಾರಣಗಳನ್ನು ಪರಾಮರ್ಶಿಸಲಾಗುವುದು ಎಂದು ಹೇಳಿದ್ದಾರೆ. ಸ್ವತಃ ಸಿಎಂ ಸಿದ್ದರಾಮಯ್ಯ ತವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿಯೇ ಪಕ್ಷದ ಅಭ್ಯರ್ಥಿ ಲಕ್ಷ್ಮಣ್​ಗೆ ಸೋಲಾಗಿದೆ. ಅತ್ತ ಡಿಕೆ ಶಿವಕುಮಾರ್ ತವರು ಕನಕಪುರ ಇರುವ ಬೆಂಗಳೂರು ಗ್ರಾಮಾಂತರದಲ್ಲಿ ಅವರ ಸಹೋದರ ಡಿಕೆ ಸುರೇಶ್​ಗೆ ಸೋಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಪಕ್ಷಾಂತರಿ ನಾಯಕರಿಂದ ಬಿಜೆಪಿಗೆ ನಷ್ಟವೇ ಹೆಚ್ಚು! ಎಡವಿದ್ದು ಎಲ್ಲೆಲ್ಲಿ? ಇಲ್ಲಿದೆ ನೋಡಿ

ಈ ಎಲ್ಲ ಬೆಳವಣಿಗೆಗಳು ಪಕ್ಷದ ರಾಜ್ಯ ನಾಯಕತ್ವದಲ್ಲಿ ಬದಲಾವಣೆಯ ಕೂಗು ಎಬ್ಬಿಸಿದರೆ ಅಚ್ಚರಿಯಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಬಹುದು ಎಂದು ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us