AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ: ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್, ಬಿಜೆಪಿ ಕಸರತ್ತು

Lok Sabha Elections: ಲೋಕಸಭಾ ಚುನಾವಣೆಯ ಕಾವು ಕರ್ನಾಟಕದಲ್ಲಿಯೂ ನಿಧಾನವಾಗಿ ಏರತೊಡಗಿದೆ. ಅಭ್ಯರ್ಥಿ ಆಯ್ಕೆ ಸಂಬಂಧ ಚಟುವಟಿಕೆಗಳು ಬಿರುಸುಗೊಂಡಿದ್ದು, ಬಿಜೆಪಿ ಒಂದು ಸುತ್ತಿನ ಸಭೆ ನಡೆಸಿದೆ. ಕಾಂಗ್ರೆಸ್ ಪಕ್ಷದ ಸಭೆ ಇಂದು (ಬುಧವಾರ) ನಡೆಯಲಿದೆ. ಅತ್ತ ಜೆಡಿಎಸ್ ಕೂಡ ಮಂಗಳವಾರವೇ ಮಂಡ್ಯ ಕ್ಷೇತ್ರಕ್ಕೆ ಸಂಬಂಧಿಸಿ ಸಭೆ ನಡೆಸಿದೆ.

ಲೋಕಸಭೆ ಚುನಾವಣೆ: ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್, ಬಿಜೆಪಿ ಕಸರತ್ತು
ಲೋಕಸಭೆ ಚುನಾವಣೆ: ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್, ಬಿಜೆಪಿ ಕಸರತ್ತು
Ganapathi Sharma
|

Updated on: Feb 14, 2024 | 6:51 AM

Share

ಬೆಂಗಳೂರು, ಫೆಬ್ರವರಿ 14: ಲೋಕಸಭೆ ಚುನಾವಣೆಗೆ (Lok Sabha Elections) ಇನ್ನು ಬೆರಳೆಣಿಕೆಯ ತಿಂಗಳಷ್ಟೇ ಬಾಕಿ ಉಳಿದಿವೆ. ಮೊನ್ನೆಯಷ್ಟೇ ಮೈಸೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆ ಚುನಾವಣೆ ಸಿದ್ಧತೆ ಸಂಬಂಧ ಸಭೆ ನಡೆಸಿ ಹೋಗಿದ್ದಾರೆ. ಮೂರು ರಾಜಕೀಯ ಪಕ್ಷಗಳಲ್ಲೂ ಚುನಾವಣಾ ಕಾವು ಏರತೊಡಗಿದೆ. ಇದರ ನಡುವೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ಕೂಡ ತೀವ್ರಗೊಂಡಿದೆ. ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಇಂದು (ಫೆ. 14) ಕಾಂಗ್ರೆಸ್ (Congress) ಸಭೆ ನಡೆಸಲಿದೆ. ಬಿಜೆಪಿ (BJP) ಮಂಗಳವಾರವಷ್ಟೇ ಒಂದು ಸುತ್ತಿನ ಸಭೆ ನಡೆಸಿದೆ.

ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ

ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಗಳೂರು ಗ್ರಾಮಾಂತರದಲ್ಲಿ ಮಾತ್ರ ಗೆದ್ದಿತ್ತು. ಆದ್ರೆ ಈ ಬಾರಿ ಗ್ಯಾರಂಟಿ ಯೋಜನೆಗಳ ಅಸ್ತ್ರ ಬಿಟ್ಟಿದೆ. ಇದನ್ನೇ ಮುಂದಿಟ್ಟು 15ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಪ್ಲ್ಯಾನ್ ಮಾಡಿದೆ. ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಸರತ್ತು ನಡೆಸುತ್ತಿದೆ. ಹಾಲಿ ಸಚಿವರು, ಇಲ್ಲವೇ ಸಚಿವರ ಮಕ್ಕಳು, ಸಹೋದರರು, ಸಂಬಂಧಿಗಳು, ಮಾಜಿ ಸಂಸದರು ಹೀಗೆ ಹಲವರು ಹೆಸರುಗಳನ್ನು ಲಿಸ್ಟ್ ಮಾಡಿಕೊಂಡಿದೆ.

ಈ ಮಧ್ಯೆ ಇಂದು ರಾಜ್ಯಸಭೆ ಮತ್ತು ಲೋಕಸಭೆಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಕೆಪಿಸಿಸಿ ಕಚೇರಿಯಲ್ಲಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ. ಬೆಳಗ್ಗೆ 11.30ಕ್ಕೆ ಮೀಟಿಂಗ್ ನಡೆಯಲಿದ್ದು ರಾಜ್ಯಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಎಐಸಿಸಿ ಕಾರ್ಯದರ್ಶಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಆರ್​ಎಸ್​​ಎಸ್ ಕಚೇರಿ ಕೇಶವಕೃಪಾದಲ್ಲಿ ಬಿಜೆಪಿ ಸಮನ್ವಯ ಸಮಿತಿ ಸಭೆ

ಬಿಜೆಪಿಯಲ್ಲೂ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ಚುರುಕುಗೊಂಡಿದೆ. ಮಂಗಳವಾರ ಚಾಮರಾಜಪೇಟೆಯಲ್ಲಿರುವ ಆರ್​ಎಸ್​ಎಸ್ ಕಚೇರಿ ಕೇಶವಕೃಪಾದಲ್ಲಿ ಬಿಜೆಪಿ ನಾಯಕರು ಸಮನ್ವಯ ಸಮಿತಿ ಸಭೆ ನಡೆಸಿದ್ದರು. ಮಾಜಿ ಸಿಎಂಗಳಾದ ಬಿಎಸ್​ ಯಡಿಯೂರಪ್ಪ, ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪರಿಷತ್​ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ.ರಾಜೇಶ್ ಉಪಸ್ಥಿತರಿದ್ದರು. ಲೋಕಸಭಾ ಚುನಾವಣಾ ಸಿದ್ಧತೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.

ಒಟ್ಟಾರೆಯಾಗಿ ಕಾಂಗ್ರೆಸ್ ಯಾರನ್ನು ಕಣಕ್ಕಿಳಿಸಲಿದೆ, ಬಿಜೆಪಿ, ಜೆಡಿಎಸ್‌ನ ಸೀಟ್ ಹಂಚಿಕೆ ಸೂತ್ರ ಏನಿರಲಿದೆ ಎಂಬುದು ಇನ್ನೊಂದು ವಾರದೊಳಗೆ ಬಯಲಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ದೇವೇಗೌಡ್ರ ಸಭೆ ಅಂತ್ಯ: ಮಂಡ್ಯ ಜಿಡಿಎಸ್​ ಪಾಲು, ಅಭ್ಯರ್ಥಿ ಸಹ ಬಹುತೇಕ ಫೈನಲ್​!

ಜೆಡಿಎಸ್​ ವರಿಷ್ಠ ಎಚ್​ಡಿ ದೇವೇಗೌಡ ನೇತೃತ್ವದಲ್ಲಿ ಮಂಡ್ಯ ಜೆಡಿಎಸ್​ ನಾಯಕರ ಸಭೆ ಮಂಗಳವಾರ ನಡೆದಿತ್ತು. ಯಾರನ್ನು ಅಭ್ಯರ್ಥಿ ಮಾಡಬೇಕೆಂದು ದೇವೇಗೌಡರು ಅಭಿಪ್ರಾಯ ಸಂಗ್ರಹಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕಿಳಿವುದು ಬಹುತೇಕ ಪಕ್ಕಾ ಎಂದು ಹೇಳಲಾಗುತ್ತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ