Karnataka Rains: ಕರಾವಳಿ ಪ್ರದೇಶದಲ್ಲಿ ಭಾರೀ ಮಳೆ ಸಾಧ್ಯತೆ; ಪ್ರವಾಸಿಗರು, ಸ್ಥಳೀಯರು ಸಮುದ್ರ, ನದಿ ತೀರಕ್ಕೆ ತೆರಳದಂತೆ ಸೂಚನೆ

ತಗ್ಗುಪ್ರದೇಶದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಚಂಡಮಾರುತದ ಸಾಧ್ಯತೆ ಬಗ್ಗೆ ಉಡುಪಿ ಜಿಲ್ಲಾಡಳಿತ ಮಾಧ್ಯಮ ಪ್ರಕಟಣೆ ನೀಡಿದೆ.

Karnataka Rains: ಕರಾವಳಿ ಪ್ರದೇಶದಲ್ಲಿ ಭಾರೀ ಮಳೆ ಸಾಧ್ಯತೆ; ಪ್ರವಾಸಿಗರು, ಸ್ಥಳೀಯರು ಸಮುದ್ರ, ನದಿ ತೀರಕ್ಕೆ ತೆರಳದಂತೆ ಸೂಚನೆ
ಸಾಂದರ್ಭಿಕ ಚಿತ್ರ

Updated on: Jun 06, 2023 | 4:32 PM

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ (Low Pressure Area) ಕರ್ನಾಟಕದ ಕರಾವಳಿ ಭಾಗದಲ್ಲಿ 4 ದಿನ ಮಳೆಯಾಗುವ (Rain) ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪ್ರವಾಸಿಗರು, ಸ್ಥಳೀಯರು ಸಮುದ್ರ, ನದಿ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.

ತಗ್ಗುಪ್ರದೇಶದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಚಂಡಮಾರುತದ ಸಾಧ್ಯತೆ ಬಗ್ಗೆ ಉಡುಪಿ ಜಿಲ್ಲಾಡಳಿತ ಮಾಧ್ಯಮ ಪ್ರಕಟಣೆ ನೀಡಿದೆ.

ಈ ಮಧ್ಯೆ, ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಮಂಗಳವಾರ ಮಧ್ಯಾಹ್ನ ತುಸು ಮಳೆಯಾಗಿದೆ.

ಮುಂದಿನ 3 ಗಂಟೆಗಳಲ್ಲಿ ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿನ ವಿಪತ್ತು ನಿಯಂತ್ರಣ ಕೇಂದ್ರ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದೆ.


ಮುಂಗಾರು ಮಾರುತಗಳು ಕೇರಳಕ್ಕೆ ಇನ್ನೂ ಪ್ರವೇಶಿಸದ ಕಾರಣ ಕರ್ನಾಟಕದಲ್ಲಿ ಮುಂಗಾರು ಮಳೆ ತಡವಾಗಿ ಆರಂಭವಾಗಲಿದೆ. ಆದಾಗ್ಯೂ, ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಸೋಮವಾರ ಹೇಳಿದ್ದರು.

ಇದನ್ನೂ ಓದಿ: Karnataka Weather: ಜೂನ್​ 9 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ, ಮುಂದಿನ 48 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿ ಬೀಸಲಿದ್ದು, ಗಂಟೆಗೆ 40 ರಿಂದ 45 ಕಿ.ಮೀ. ಇಂದ 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಕರಾವಳಿ ತೀರದ ಜನರು ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Tue, 6 June 23