Karnataka Weather: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ, ಬೆಂಗಳೂರಿಗೂ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ, ಮಳೆ ಮುನ್ಸೂಚನೆ: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಮಳೆ ಮುಂದುವರೆದಿದೆ. ಈ ಮಧ್ಯೆ ಇನ್ನೂ ಹಲವು ದಿನಗಳ ಕಾಲ ಇದೇ ರೀತಿ ಮಳೆ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ, ವರುಣನ ಆರ್ಭಟಕ್ಕೆ ಬೆಂಗಳೂರು ನಗರದಲ್ಲಿ ವ್ಯಾಪಾರ ವಹಿವಾಟು ಡಲ್ ಹೊಡೆಯುತ್ತಿದೆ.

Karnataka Weather: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ, ಬೆಂಗಳೂರಿಗೂ ಮಳೆ ಮುನ್ಸೂಚನೆ
ಸಾಂದರ್ಭಿಕ ಚಿತ್ರ

Updated on: Oct 25, 2025 | 9:08 AM

ಬೆಂಗಳೂರು, ಅಕ್ಟೋಬರ್ 25: ಕರ್ನಾಟಕದ (Karnataka) ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಮಟ್ಟಿಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಬಹುತೇಕ ಕಡೆ, ಉತ್ತರ ಒಳನಾಡು ಜಿಲ್ಲೆಗಳ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಹವಾಮಾನ ತಜ್ಞ ಬದರಿನಾಥ್ ಮಾಹತಿ ನೀಡಿದ್ದು, ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಹವಾಮಾನದಲ್ಲಿ ಬದಲಾವಣೆ ಆಗಿದೆ. ಅ. 27 ರಂದು ಭಾರೀ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಸಹಜವಾಗಿದ್ದು, ಹಗುರದಿಂದ ಸಾಧಾರಣ ಮಳೆ ಸರ್ವೇ ಸಾಮಾನ್ಯವಾಗಿದೆ. ಹೀಗಾಗಿ ಇದು ನಗರದ ಕೆಲವು ವ್ಯಾಪಾರ ವಹಿವಾಟುಗಳ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಅದರಲ್ಲೂ ಬೀದಿ ಬದಿ ವ್ಯಾಪಾರಿಗಳಿಗಂತೂ ವ್ಯಾಪಾರವಿಲ್ಲದೆ ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ. ಸಾವಿರಾರು ರೂಪಾಯಿ ಬಂಡವಾಳ ಹಾಕಿರುವವರಿಗೂ, ಗ್ರಾಹಕರು ಅಂಗಡಿಗಳತ್ತ ಮುಖ ಮಾಡುತ್ತಿಲ್ಲ ಎಂಬ ಚಿಂತೆ ಕಾಡತೊಡಗಿದೆ. ಹೀಗೆಯೇ ಮಳೆ ಮುಂದುವರೆದರೆ ಕಷ್ಟ ಎಂದು ಬೀದಿ ಬದಿ ವ್ಯಾಪಾರಿಗಳು ಗೋಗರೆದಿದ್ದಾರೆ.

ಅಕ್ಟೋಬರ್ 24 ರಿಂದ ನವೆಂಬರ್ 2 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಕೆಲವೊಮ್ಮೆ ವ್ಯಾಪಕವಾಗಿ ಹಾಗೂ ಕೆಲವೊಮ್ಮೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಅಕ್ಟೋಬರ್ 28 ರಂದು ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಎಕ್ಸ್ ಸಂದೇಶದಲ್ಲಿ ತಿಳಿಸಿದೆ.

ಮಳೆಮುನ್ಸೂಚನೆಯ ಎಕ್ಸ್ ಸಂದೇಶ


ಬೆಂಗಳೂರಿಗೆ ಅ. 25 ಹಾಗೂ 26 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಿಗೆ ಅ. 26 ರಂದು ಯೆಲ್ಲೋ ಹಾಗೂ 27 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಒಟ್ಟಿನಲ್ಲಿ, ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ವಿವಿಧೆಡೆ ವರ್ಷಧಾರೆ ಬಹುತೇಕ ಖಚಿತ ಎಂಬ ಸುಳಿವನ್ನು ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ: 28 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಕರಾವಳಿಗೆ ಕೊಂಚ ರಿಲೀಫ್

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:37 am, Sat, 25 October 25

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us